ಶಿವಮೊಗ್ಗದಲ್ಲಿ ಬಿ.ವೈ ರಾಘವೇಂದ್ರ ವಿರುದ್ಧ ಈಶ್ವರಪ್ಪ ಸ್ಪರ್ಧೆ? ಮಾಜಿ ಡಿಸಿಎಂ ನೀಡಿದ ಮಹತ್ವದ ಸುಳಿವೇನು?
ಶಿವಮೊಗ್ಗ, ಮಾರ್ಚ್ 13: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದೆ. ಅದರಲ್ಲೂ ಬಿಜೆಪಿ ಟಿಕೆಟ್ ಹಂಚಿಕೆ ಗೊಂದಲದ ಗೂಡಾಗಿದ್ದು, ಬಹುತೇಕ ಎಲ್ಲಾ ಕ್ಷೇತ್ರದ ಅಭ್ಯರ್ಥಿಗಳನ್ನು ಅಂತಿಮಗೊಳಿಸುವುದು ಬಿಜೆಪಿ ಹೈಮಾಂಡ್ಗೆ ದೊಡ್ಡ ಸವಾಲಾಗಿದೆ.
ಒಂದೊಂದು ಕ್ಷೇತ್ರದಲ್ಲಿ ಕನಿಷ್ಠ ಮೂವರು ಟಿಕೆಟ್ ಆಕಾಂಕ್ಷಿಗಳಿದ್ದು, ಒಬ್ಬರಿಗೆ ಟಿಕೆಟ್ ನೀಡಿದರೆ, ಮತ್ತೊಬ್ಬರು ಬಂಡಾಯ ಏಳುವ ಸಾಧ್ಯತೆ ಹೆಚ್ಚಿದೆ. ಇದಕ್ಕೆ ಹಾವೇರಿ ಲೋಕಸಭಾ ಕ್ಷೇತ್ರವೂ ಹೊರತಲ್ಲ. ಹೀಗಾಗಿ ಹಾವೇರಿಯಲ್ಲಿ ಸಮರ್ಥ ಅಭ್ಯರ್ಥಿ ಯಾರು..? ಗೆಲುವಿನ ಕುದುರೆ ಯಾರು..? ಯಾರಿಗೆ ಟಿಕೆಟ್ ನೀಡಿದರೆ ಪಕ್ಷದ ಮೇಲೆ ಪರಿಣಾಮ ಬೀರುವುದಿಲ್ಲ ಎನ್ನುವ ಲೆಕ್ಕಚಾರದಲ್ಲಿ ಬಿಜೆಪಿಯಿದೆ.

ಹಾವೇರಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಮಾಜಿ ಸಚಿವ, ಬಿಜೆಪಿಯ ಹಿರಿಯ ನಾಯಕ ಕೆ.ಎಸ್ ಈಶ್ವರಪ್ಪ ಅವರ ಪುತ್ರ ಕಾಂತೇಶ್ ಬಿಜೆಪಿ ಟಿಕೆಟ್ನ ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಇನ್ನು ಈ ಹಿಂದೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ನೆರವಾದ ಬಿ.ಸಿ ಪಾಟೀಲ್ ಕೂಡ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ತಾನು ಕಾಂಗ್ರೆಸ್ ಪಕ್ಷದ ಶಾಸಕ ಸ್ಥಾನಬಿಟ್ಟು ಬಿಜೆಪಿ ಸೇರಿ 4 ವರ್ಷಗಳ ಅಧಿಕಾರ ನಡೆಸಲು ನೆರವಾಗಿದ್ದೇನೆ ಎಂದು ಬಿ.ಸಿ ಪಾಟೀಲ್ಸಹ ಟಿಕೆಟ್ಗಾಗಿ ಪಟ್ಟು ಹಿಡಿದಿದ್ದಾರೆ.
ಈ ಮಧ್ಯೆ ರಾಜ್ಯ ಬಿಜೆಪಿ ನಾಯಕರು ಹಾವೇರಿ ಲೋಕಸಭಾ ಕ್ಷೇತ್ರಕ್ಕೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಹೆಸರನ್ನು ಶಿಫಾರಸ್ಸು ಮಾಡಿದ್ದಾರೆ ಎನ್ನಲಾಗಿದೆ. ಇದು ಬಿಜೆಪಿಯ ಹಿರಿಯ ನಾಯಕ ಕೆ.ಎಸ್ ಈಶ್ವರಪ್ಪ ಅವರ ಅಸಮಾಧಾನಕ್ಕೆ ಕಾರಣವಾಗಿದೆ. ಕಳೆದ ಒಂದು ವರ್ಷದಿಂದ ಕಾಂತೇಶ್ ಟಿಕೆಟ್ಗಾಗಿ ಕ್ಷೇತ್ರದಲ್ಲಿದ್ದು, ಈ ಬಾರಿ ಸ್ಪರ್ಧೆಗಳಿಯುವ ಭರವಸೆಯಲ್ಲಿದ್ದರು. ಆದರೀಗ ರಾಜ್ಯ ಬಿಜೆಪಿ ಮುಖಂಡರೇ ಬಸವರಾಜ ಬೊಮ್ಮಾಯಿ ಅವರನ್ನು ಕ್ಷೇತ್ರದ ಅಭ್ಯರ್ಥಿ ಮಾಡುವ ಹುನ್ನಾರ ಈಶ್ವರಪ್ಪ ಸಿಟ್ಟಿಗೆ ಕಾರಣವಾಗಿದೆ.
ಈ ಬೆಳವಣಿಗೆಗಳ ಬಗ್ಗೆ ಮಾತನಾಡಿರುವ ಕೆ.ಎಸ್ ಈಶ್ವರಪ್ಪ "ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಟಿಕೆಟ್ ಕೊಡಿಸುವೆ. ಅಲ್ಲಿ ಓಡಾಡಿ ಗೆಲ್ಲಿಸಿಕೊಂಡು ಬರುವೆ. ಬಿ.ಎಸ್. ಯಡಿಯೂರಪ್ಪ ಭರವಸೆ ಕೊಟ್ಟ ಕಾರಣಕ್ಕೆ ಪುತ್ರ ಕಾಂತೇಶನನ್ನು ಅಲ್ಲಿಗೆ ಕಳುಹಿಸಿದ್ದೆ. ಈಗಲೂ ಹಾವೇರಿಯಿಂದ ಪುತ್ರನಿಗೆ ಟಿಕೆಟ್ ಸಿಗುವ ವಿಶ್ವಾಸವಿದೆ.
ಒಂದು ವೇಳೆ ಪುತ್ರನಿಗೆ ಟಿಕೆಟ್ ಸಿಗದೇ ಇದ್ದಲ್ಲಿ ಶುಕ್ರವಾರ ಶಿವಮೊಗ್ಗದಲ್ಲಿ ಬೆಂಬಲಿಗರು ಸಭೆ ಕರೆದಿದ್ದು, ಅಲ್ಲಿ ತೆಗೆದುಕೊಳ್ಳುವ ತೀರ್ಮಾನದಂತೆ ಮುಂದುವರೆಯುವೆ. ಕಾಂತೇಶ್ಗೆ ಟಿಕೆಟ್ ಪಡೆಯುವುದರ ಹಿಂದೆ ಬರೀ ನನ್ನ ರಾಜಕೀಯ ಭವಿಷ್ಯ ಅಡಗಿಲ್ಲ. ಬದಲಿಗೆ ಬಿಜೆಪಿಯ ಭವಿಷ್ಯ ಅಡಗಿದೆ. ಹಾವೇರಿ ಲೋಕಸಭಾ ಕ್ಷೇತ್ರದಿಂದ ನನಗೆ ಟಿಕೆಟ್ ಕೊಟ್ಟರೆ ಸ್ಪರ್ಧಿಸುವುದಿಲ್ಲ. ಬೆಂಬಲಿಗರ ಒತ್ತಾಯವೂ ಇರುವುದರಿಂದ ಅಗತ್ಯ ಬಿದ್ದರೆ ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸುವೆ" ಎಂದು ಹೇಳಿದ್ದಾರೆ.
ಈ ಮೂಲಕ ಕೆ.ಎಸ್ ಈಶ್ವರಪ್ಪ ಒಂದು ವೇಳೆ ಕಾಂತೇಶ್ಗೆ ಹಾವೇರಿಯಿಂದ ಟಿಕೆಟ್ ಸಿಗದೇ ಇದ್ದರೆ, ಬೆಂಬಲಿಗರ ಅಭಿಪ್ರಾಯ ತೆಗೆದುಕೊಂಡು ಶಿವಮೊಗ್ಗದಲ್ಲಿ ತಾನೇ ಕಣಕ್ಕಿಳಿಯುವುದಾಗಿ ಸ್ವಷ್ಟವಾಗಿ ತಿಳಿಸಿದ್ದಾರೆ. ಅರ್ಥಾತ್ ಬಿಜೆಪಿ ಪುತ್ರನಿಗೆ ಟಿಕೆಟ್ ನೀಡದೇ ಇದ್ದರೆ, ಕೆ.ಎಸ್ ಈಶ್ವರಪ್ಪ ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿಯ ವಿರುದ್ಧ ಅಂದರೆ ಬಿ.ಎಸ್. ಯಡಿಯೂರಪ್ಪ ಪುತ್ರ ಬಿ.ವೈ ರಾಘವೇಂದ್ರ ವಿರುದ್ಧ ಸ್ಪರ್ಧೆಗಳಿಯುವುದಾಗಿ ಪರೋಕ್ಷವಾಗಿ ಎಚ್ಚರಿಕೆ ರವಾನಿಸಿದ್ದಾರೆ ಎನ್ನಲಾಗಿದೆ.












Click it and Unblock the Notifications