ಶಿಕಾರಿಪುರದಲ್ಲಿ ಕಾಂಗ್ರೆಸ್ ಕೈಹಿಡಿದ ಜೆಡಿಎಸ್
ಶಿವಮೊಗ್ಗ, ಆ.13 : ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಜೆಡಿಎಸ್ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿದೆ. ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿಸುವುದಾಗಿ ಜೆಡಿಎಸ್ ನಾಯಕ ಎಚ್.ಟಿ.ಬಳಿಗಾರ್ ಹೇಳಿದ್ದಾರೆ.
ಬುಧವಾರ ಶಿಕಾರಿಪುರದಲ್ಲಿರುವ ಎಚ್.ಟಿ.ಬಳಿಗಾರ್ ನಿವಾಸಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ಚುನಾವಣೆಯಲ್ಲಿ ಬೆಂಬಲ ನೀಡುವಂತೆ ಮನವಿ ಮಾಡಿದರು. ಸಿಎಂ ಭೇಟಿಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಬಳಿಗಾರ್ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿಸುತ್ತೇನೆ ಎಂದು ಹೇಳಿದರು. [ಶಿಕಾರಿಪುರದಲ್ಲಿ ಕಾಂಗ್ರೆಸ್, ಜೆಡಿಎಸ್ ದೋಸ್ತಿ?]

"ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷವನ್ನು ಸೇರುವುದಿಲ್ಲ. ಆದರೆ, ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿಸುತ್ತೇನೆ" ಎಂದು ಬಳಿಗಾರ್ ಹೇಳಿದರು. ಮಂಗಳವಾರದಿಂದ ಶಿಕಾರಿಪುರ ಕ್ಷೇತ್ರದಲ್ಲಿ ಜೆಡಿಎಸ್ ಬೆಂಬಲ ಪಡೆಯಲು ಕಾಂಗ್ರೆಸ್ ಪ್ರಯತ್ನ ನಡೆಸಿತ್ತು ಮತ್ತು ಹಲವಾರು ರಹಸ್ಯ ಸಭೆಗಳನ್ನು ನಡೆಸಲಾಗಿತ್ತು.
ಬುಧವಾರ ಬೆಳಗ್ಗೆ ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದ ಸಿಎಂ ಸಿದ್ದರಾಮಯ್ಯ ಶಿಕಾರಿಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶಾಂತವೀರಪ್ಪ ಗೌಡ ಅವರಿಗೆ ಚುನಾವಣೆಯಲ್ಲಿ ಬೆಂಬಲ ನೀಡುವಂತೆ ಜೆಡಿಎಸ್ ನಾಯಕರಿಗೆ ಮನವಿ ಮಾಡಲಾಗಿದೆ ಎಂದು ಹೇಳಿದ್ದರು. [ಉಪ ಚುನಾವಣೆ : ಕಣದಲ್ಲಿರುವ ಅಭ್ಯರ್ಥಿಗಳು ಯಾರು?]
ಕಾಂಗ್ರೆಸ್ಗೆ ಬೆಂಬಲಿಸುವಂತೆ ಕೋರಿ ಮಂಗಳವಾರ ಸಚಿವ ಹೆಚ್.ಸಿ ಮಹದೇವಪ್ಪ ಅವರು ಸೊರಬ ಕ್ಷೇತ್ರದ ಜೆಡಿಎಸ್ ಶಾಸಕ ಮಧು ಬಂಗಾರಪ್ಪ ಅವರಿಗೆ ಮನವಿ ಮಾಡಿದ್ದರು. ಸಿಎಂ ಸಹ ದೂರವಾಣಿ ಮೂಲಕ ಮಧು ಬಂಗಾರಪ್ಪ ಜೊತೆ ಮಾತುಕತೆ ನಡೆಸಿದ್ದರು. ಅಂತಿಮವಾಗಿ ಬೆಂಬಲ ಪಡೆಯುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದೆ.












Click it and Unblock the Notifications