ಶಿವಮೊಗ್ಗ : ಬಂಡಾಯ ಬಾವುಟ ಹಾರಿಸಿದ್ದ ಜೆಡಿಎಸ್ ಅಭ್ಯರ್ಥಿ ಉಚ್ಚಾಟನೆ
ಶಿವಮೊಗ್ಗ, ಮಾರ್ಚ್ 13 : ಶಿವಮೊಗ್ಗದಲ್ಲಿ ಬಂಡಾಯದ ಬಾವುಟ ಹಾರಿಸಿದ್ದ ನರಸಿಂಹಮೂರ್ತಿ ಅವರನ್ನು ಜೆಡಿಎಸ್ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ನರಸಿಂಹಮೂರ್ತಿ ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಘೋಷಣೆ ಮಾಡಿ, ಪ್ರಚಾರ ಆರಂಭಿಸಿದ್ದರು.
ಪಕ್ಷ ವಿರೋಧಿ ಚಟುವಟಿಕೆ ಹಿನ್ನಲೆಯಲ್ಲಿ ನರಸಿಂಹಮೂರ್ತಿ (ಬಾಬಣ್ಣ) ಅವರನ್ನು ಜೆಡಿಎಸ್ ನಗರ ಘಟಕದ ಅಧ್ಯಕ್ಷ ಸ್ಥಾನ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಿ, ಪಕ್ಷದಿಂದ ಉಚ್ಚಾಟಸಲಾಗಿದೆ.
'ಪಕ್ಷದ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರ ಆದೇಶದಂತೆ ನರಸಿಂಹಮೂರ್ತಿ ಅವರನ್ನು ಉಚ್ಚಾಟನೆ ಮಾಡಲಾಗಿದೆ' ಎಂದು ಸೊರಬ ಕ್ಷೇತ್ರದ ಶಾಸಕ ಮಧು ಬಂಗಾರಪ್ಪ ಹೇಳಿದರು.

'ಶಿವಮೊಗ್ಗ ನಗರ ಘಟಕಕ್ಕೆ ನರಸಿಂಹಮೂರ್ತಿ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡುವ ಸಂದರ್ಭದಲ್ಲಿ ಸಾಕಷ್ಟು ವಿರೋಧ ಕೇಳಿಬಂದಿತ್ತು. ಆದರೆ, ಅವರ ಕೋರಿಕೆಯ ಮೇರೆಗೆ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿತ್ತು. ಆದರೆ, ಅವರ ಈಗಿನ ನಡವಳಿಕೆ ಬೇಸರ ತರುವಂತಿದೆ' ಎಂದು ಮಧು ಬಂಗಾರಪ್ಪ ತಿಳಿಸಿದರು.
ಶಿವಮೊಗ್ಗ ನಗರ ಕ್ಷೇತ್ರಕ್ಕೆ ಈಗಾಗಲೇ ಜೆಡಿಎಸ್ ಪಕ್ಷ ಎಚ್.ಎನ್.ನಿರಂಜನ್ ಅವರು ಅಭ್ಯರ್ಥಿ ಎಂದು ಘೋಷಣೆ ಮಾಡಿದೆ. ಆದರೆ, ನರಸಿಂಹಮೂರ್ತಿ ಅವರು ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಲು ಹೊರಟಿದ್ದರು.
ಆದ್ದರಿಂದ, ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ಇನ್ನು ಮುಂದೆ ಪಕ್ಷಕ್ಕೂ ನರಸಿಂಹಮೂರ್ತಿ ಅವರಿಗೂ ಯಾವುದೇ ಸಂಬಂಧವಿಲ್ಲ ಎಂದು ಜೆಡಿಎಸ್ ನಾಯಕರು ಸ್ಪಷ್ಟಪಡಿಸಿದ್ದಾರೆ.












Click it and Unblock the Notifications