ಅಂತರ ರಾಷ್ಟ್ರೀಯ ಪ್ರವಾಸಿ ತಾಣವಾಗಿ ಜೋಗ ಅಭಿವೃದ್ಧಿ: ಸಂಸದ ಬಿ.ವೈ.ರಾಘವೇಂದ್ರ
ಶಿವಮೊಗ್ಗ, ಸೆಪ್ಟೆಂಬರ್ 10: ಶಿವಮೊಗ್ಗ ಜಿಲ್ಲೆಯ ವಿಶ್ವ ವಿಖ್ಯಾತ ಜೋಗ ಜಲಪಾತದ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಈಗಾಗಲೇ 120 ಕೋಟಿ ರೂ. ಅನುಮೋದನೆ ನೀಡಿದ್ದು, ಎಲ್ಲ ಮೂಲಸೌಲಭ್ಯಗಳನ್ನು ಕಲ್ಪಿಸಿ ಜೋಗವನ್ನು ಅಂತರ ರಾಷ್ಟ್ರೀಯ ಪ್ರವಾಸಿ ತಾಣವನ್ನಾಗಿ ರೂಪಿಸಬೇಕಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.
ಜೋಗ ಅಭಿವೃದ್ಧಿಗೆ ನೀಲ ನಕಾಶೆ ರೂಪಿಸುವ ಕುರಿತು ಜೋಗದಲ್ಲಿ ಬುಧವಾರ ಸಂಜೆ ನಡೆಸಿದ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಜೋಗದಲ್ಲಿ ಪ್ರವಾಸಿಗರು ಕನಿಷ್ಠ ಒಂದು ಇಡೀ ದಿನ ರಜಾದಿನ ಆಸ್ವಾದಿಸಲು ಅವಕಾಶ ಕಲ್ಪಿಸಬೇಕಾಗಿದೆ. ಈಗಿರುವ ಸೌಲಭ್ಯಗಳನ್ನು ಉತ್ತಮಪಡಿಸುವ ಜತೆಗೆ ಇನ್ನಷ್ಟು ಹೊಸ ಸೌಲಭ್ಯಗಳನ್ನು ಒದಗಿಸಬೇಕಾಗಿದೆ ಎಂದರು.
ಶಿವಮೊಗ್ಗ ಜಿಲ್ಲೆಯಲ್ಲಿ ರೈಲ್ವೇ, ಪ್ರವಾಸೋದ್ಯಮ ಪ್ರಗತಿಗೆ ಹಲವು ಯೋಜನೆ
ಈ ನಿಟ್ಟಿನಲ್ಲಿ ಪ್ರವಾಸೋದ್ಯಮ ಇಲಾಖೆ ಮಾತ್ರವಲ್ಲದೆ ಕೆಪಿಟಿಸಿಎಲ್ ಪಾತ್ರವೂ ಬಹಳ ಮುಖ್ಯವಾಗಿದೆ. ಜೋಗ ಅಭಿವೃದ್ಧಿ ನಿಟ್ಟಿನಲ್ಲಿ ನಡೆಯುತ್ತಿರುವ ಎರಡನೇ ಸಭೆ ಇದಾಗಿದ್ದು, ತಜ್ಞರ ಸಲಹೆ ಪಡೆದು ಆದಷ್ಟು ಬೇಗ ನೀಲ ನಕಾಶೆ ಅಂತಿಮಗೊಳಿಸಿ ಟೆಂಡರ್ ಕರೆಯುವ ಪ್ರಕ್ರಿಯೆ ಆರಂಭಿಸಬೇಕಾಗಿದೆ ಎಂದರು.
ಇಲ್ಲಿನ 22 ಎಕರೆ ಪ್ರದೇಶದಲ್ಲಿ ವೀಕ್ಷಣಾ ಗೋಪುರ, ಕಾರಂಜಿ ನಿರ್ಮಾಣ, ವಿಶ್ರಾಂತಿ ಗೃಹಗಳು, ಉದ್ಯಾನವನ, ವಿದ್ಯುದಾಗಾರಕ್ಕೆ ಪ್ರವಾಸಿಗರಿಗೆ ವೀಕ್ಷಣಾ ಅವಕಾಶ, ಮಳೆಗಾಲ ಹೊರತುಪಡಿಸಿ ಪ್ರತಿ ಶನಿವಾರ ಮತ್ತು ಭಾನುವಾರ ಜಲಪಾತಕ್ಕೆ ನೀರು ಹರಿಸುವ ಪ್ರಸ್ತಾವನೆಗಳಿಗೆ ಅಂತಿಮ ರೂಪು ನೀಡಬೇಕಾಗಿದೆ ಎಂದು ತಿಳಿಸಿದರು.
ಕೆಪಿಟಿಸಿಲ್ ಮ್ಯಾನೇಜಿಂಗ್ ಡೈರೆಕ್ಟರ್ ಪೊನ್ನುರಾಜ್, ಜಂಗಲ್ ಲಾಡ್ಜಸ್ ಎಂಡಿ ವಿಜಯ್ ಶರ್ಮ, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಪ್ರವಾಸೋದ್ಯಮ ಇಲಾಖೆ ನಿರ್ದೇಶಕ ರಮೇಶ್, ಮುಖ್ಯಮಂತ್ರಿ ಕಚೇರಿಯ ಹಿರಿಯ ಅಧಿಕಾರಿಗಳಾದ ರಾಜಪ್ಪ, ರವಿ, ಪ್ರವಾಸೋದ್ಯಮ ಟಾಸ್ಕ್ ಫೋರ್ಸ್ ಸದಸ್ಯ ಲಕ್ಷ್ಮೀನಾರಾಯಣ ಕಾಶಿ ಇತರರು ಉಪಸ್ಥಿತರಿದ್ದರು.