ಘನತ್ಯಾಜ್ಯ ವಿಲೇವಾರಿಗೆ ಗ್ರಾ.ಪಂ.ಗಳಲ್ಲಿ ತಕ್ಷಣ ಕ್ರಮ ಕೈಗೊಳ್ಳಲು ಈಶ್ವರಪ್ಪ ಸೂಚನೆ
ಶಿವಮೊಗ್ಗ, ಮೇ 07: ಎಲ್ಲಾ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕಗಳನ್ನು ಆರಂಭಿಸಿ ತ್ಯಾಜ್ಯ ವಿಲೇವಾರಿಯನ್ನು ಆರಂಭಿಸಲು ತಕ್ಷಣ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಇದುವರೆಗೆ 271 ಗ್ರಾಮ ಪಂಚಾಯಿತಿಗಳ ಪೈಕಿ ಕೇವಲ 53 ಗ್ರಾಮ ಪಂಚಾಯಿತಿಗಳು ಘನತ್ಯಾಜ್ಯ ಘಟಕಗಳಿಗೆ ಜಮೀನು ಗುರುತಿಸಿ ಪ್ರಸ್ತಾವನೆ ಸಲ್ಲಿಸಿದ್ದು, 48 ಪ್ರಸ್ತಾವನೆಗಳಿಗೆ ಅನುಮೋದನೆ ದೊರೆತಿದೆ.
ಕೇವಲ 12 ಗ್ರಾಮ ಪಂಚಾಯಿತಿಗಳು ಕಾರ್ಯ ಆರಂಭಿಸಿದ್ದು, ಜಮೀನು ಅಂತಿಮಗೊಳಿಸದ ಗ್ರಾಮ ಪಂಚಾಯಿತಿಗಳು ತಮ್ಮಲ್ಲಿರುವ ಹಳೆ ಕಟ್ಟಡಗಳಲ್ಲಿ ತ್ಯಾಜ್ಯ ವಿಲೇವಾರಿ ಕಾರ್ಯವನ್ನು ಆರಂಭಿಸಬೇಕು. ಈಗಾಗಲೇ ಅನುದಾನ ಬಿಡುಗಡೆಯಾಗಿರುವ ಗ್ರಾಮ ಪಂಚಾಯಿತಿಗಳು ವಾಹನ ಖರೀದಿ, ಬಕೆಟ್ ಖರೀದಿ, ಶೆಡ್ ನಿರ್ಮಾಣ ಇತ್ಯಾದಿ ಕಾಮಗಾರಿಗಳನ್ನು ತಕ್ಷಣ ಪೂರ್ಣಗೊಳಿಸಬೇಕು ಎಂದರು.

ಪ್ರತಿ ಮನೆಗೆ ಕುಡಿಯುವ ನೀರು: ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಪ್ರತಿ ಮನೆಗೆ ಕುಡಿಯುವ ನೀರು ಒದಗಿಸುವ, ಮನೆ ಮನೆಗೆ ಗಂಗೆ ಯೋಜನೆಯಡಿ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಲು ಸೂಚಿಸಲಾಗಿದೆ. ಈಗಾಗಲೇ ನಲ್ಲಿ ಸಂಪರ್ಕ ಇರುವ ಮನೆಗಳನ್ನು ಹೊಸದಾಗಿ ಕ್ರಿಯಾ ಯೋಜನೆಯಲ್ಲಿ ಸೇರಿಸಬಾರದು. ಜಿಲ್ಲೆಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳ ದುರಸ್ತಿ ಕಾರ್ಯವನ್ನು ಆಯಾ ಗ್ರಾಮ ಪಂಚಾಯಿತಿಗಳೇ ಇನ್ನು ಮುಂದೆ ನಿರ್ವಹಿಸಬೇಕು. ಇದಕ್ಕಾಗಿ ಅನುದಾನವನ್ನು ಒದಗಿಸಲಾಗುವುದು ಎಂದು ಸಚಿವರು ಹೇಳಿದರು.
ಉದ್ಯೋಗ ಖಾತ್ರಿ ಅನುಷ್ಠಾನ: ಎನ್ಆರ್ಇಜಿ ಅಡಿ ಈ ವರ್ಷ 218 ಕೋಟಿ ರೂ. ಅನುದಾನ ನಿಗದಿಪಡಿಸಲಾಗಿದ್ದು, ಎಲ್ಲಾ ಇಲಾಖೆಗಳು ತಮಗೆ ನಿಗದಿಪಡಿಸಿರುವ ಮಾನವ ದಿನಗಳ ಗುರಿಯನ್ನು ಪೂರ್ಣಗೊಳಿಸಬೇಕು. ಸಾಮಾಜಿಕ ಅರಣ್ಯ ಇಲಾಖೆ ಇದುವರೆಗೆ ಯಾವುದೇ ಗುರಿಯನ್ನು ಸಾಧಿಸಿರುವುದಿಲ್ಲ. ಹಿಂದಿನ ವರ್ಷದ ಅಪೂರ್ಣ ಕಾಮಗಾರಿಗಳನ್ನು ತಕ್ಷಣ ಪೂರ್ಣಗೊಳಿಸಬೇಕು ಎಂದರು.












Click it and Unblock the Notifications