ಕರ್ನಾಟಕ ಚುನಾವಣೆ; ಸರ್ಕಾರಿ ಬಸ್ ಸಂಚಾರದಲ್ಲಿ ವ್ಯತ್ಯಯ
ಶಿವಮೊಗ್ಗ, ಮೇ 03; ಕರ್ನಾಟಕ ವಿಧಾನಸಭೆ ಚುನಾವಣೆಯ ಹಿನ್ನಲೆಯಲ್ಲಿ ಸರ್ಕಾರಿ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ. ಮೇ 4 ರಿಂದ ಚುನಾವಣಾ ಕಾರ್ಯಕ್ಕೆ ನಿಯೋಜನೆಗೊಂಡ ಅಧಿಕಾರಿ/ ಸಿಬ್ಬಂದಿಗಳ ತರಬೇತಿ ನಡೆಯಲಿದ್ದು, ತರಬೇತಿಗಾಗಿ ಆಗಮಿಸುವವರಿಗೆ ಸರ್ಕಾರಿ ಬಸ್ ವ್ಯವಸ್ಥೆ ಮಾಡಲಾಗಿದೆ. ಮೇ 10ರಂದು ಕರ್ನಾಟಕದಲ್ಲಿ ಮತದಾನ ನಡೆಯಲಿದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ) ಶಿವಮೊಗ್ಗ ವಿಭಾಗೀಯ ನಿಯಂತ್ರಣಾಧಿಕಾರಿಗಳು ಬಸ್ ಸಂಚಾರದಲ್ಲಿ ವ್ಯತ್ಯಯ ಆಗುವ ಕುರಿತು ಮಾಹಿತಿ ನೀಡಿದ್ದಾರೆ. ಸಾಮಾನ್ಯ ಜನರು ಶಾಲಾ/ ಕಾಲೇಜು ವಿದ್ಯಾರ್ಥಿಗಳು ನಿಗಮದೊಂದಿಗೆ ಸಹಕರಿಸುವಂತೆ ಅವರು ಮನವಿ ಮಾಡಿದ್ದಾರೆ. ಮೇ 8 ರಿಂದ ಮತ್ತೆ ಬಸ್ಗಳು ಚುನಾವಣಾ ಕಾರ್ಯಕ್ಕೆ ನಿಯೋಜನೆಗೊಳ್ಳಲಿವೆ.

ಮೇ 4ರ ಗುರುವಾರ ಮತಗಟ್ಟೆ ಅಧಿಕಾರಿ/ ಸಿಬ್ಬಂದಿಗಳಿಗೆ ಮತದಾನ ದಿನದ ಕುರಿತು 2ನೇ ಹಂತದ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮಕ್ಕೆ ಕ. ರಾ. ರ. ಸಾ. ನಿಗಮ ಶಿವಮೊಗ್ಗ ವಿಭಾಗದ ವತಿಯಿಂದ 108 ಬಸ್ಗಳನ್ನು ಸಾಂದರ್ಭಿಕ ಒಪ್ಪಂದದ ಮೇರೆಗೆ ಒದಗಿಸಲಾಗಿದೆ.
ಒಪ್ಪಂದದ ಮೇಲೆ ಬಸ್; ಬಸ್ಗಳು ಒಪ್ಪಂದದ ಮೇರೆಗೆ ಹೋಗಿರುವ ಕಾರಣ ಮೇ 4ರಂದು ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯ ನಗರ, ಸಾಮಾನ್ಯ ಹಾಗೂ ವೇಗದೂತ ಸಾರಿಗೆಗಳ ಸಂಚಾರದಲ್ಲಿ ವ್ಯತ್ಯಯವಾಗಲಿದೆ. ಜನರು ಸಹಕಾರ ನೀಡಬೇಕು ಎಂದು ಮನವಿ ಮಾಡಲಾಗಿದೆ. ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಯಾವುದೇ ಅಧಿಕಾರಿ ತರಬೇತಿಗೆ ಗೈರಾಗಬಾರದು ಎಂದು ಈಗಾಗಲೇ ಸೂಚನೆ ನೀಡಲಾಗಿದೆ.

ಕರ್ನಾಟಕ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ದಿನಾಂಕ 4/5/2023ರಂದು ಮತಗಟ್ಟೆ ಅಧಿಕಾರಿ/ ಸಿಬ್ಬಂದಿಗಳಿಗೆ 2ನೇ ಹಂತದ ತರಬೇತಿ ಕಾರ್ಯಾಗಾರವನ್ನು ವಿಧಾನಸಭಾ ಕ್ಷೇತ್ರಗಳಲ್ಲಿ ಹಮ್ಮಿಕೊಳ್ಳಲಾಗಿದೆ. ತರಬೇತಿಗೆ ತೆರಳಲು ಅಂದು ಬೆಳಗ್ಗೆ 7 ಗಂಟೆಗೆ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಕ್ಷೇತ್ರವಾರು ಬಸ್ಗಳು ಹೊರಡಲಿವೆ ಎಂದು ಮಾಹಿತಿ ನೀಡಲಾಗಿದೆ.
ಈಗಾಗಲೇ ಅಗತ್ಯ ಇಲಾಖೆಗಳು ಎಂದು ಪಟ್ಟಿ ಮಾಡಿ, ವಿವಿಧ ಇಲಾಖೆಗಳ ಅಧಿಕಾರಿ/ ಸಿಬ್ಬಂದಿಯನ್ನು ಚುನಾವಣಾ ಕೆಲಸಕ್ಕೆ ನಿಯೋಜಿಸಲಾಗಿದೆ. ನಿಗದಿಪಡಿಸಿದ ದಿನಾಂಕ, ಸಮಯ ಮತ್ತು ಕೇಂದ್ರಗಳಲ್ಲಿ ತರಬೇತಿ, ಮಸ್ಟರಿಂಗ್ ಮತ್ತು ಮತದಾನ ಕಾರ್ಯಕ್ಕೆ ಎಲ್ಲರೂ ಕಡ್ಡಾಯವಾಗಿ ಹಾಜರಾಗಬೇಕು. ಯಾರಾದರೂ ಗೈರುಹಾಜರಾದಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಸಲಾಗಿದೆ.
ಒಂದು ವೇಳೆ ಸಿಬ್ಬಂದಿಗಳು ಗೈರಾದರೆ ಅವರ ವಿರುದ್ಧ ಪ್ರಜಾ ಪ್ರತಿನಿಧಿ ಕಾಯ್ದೆ 1951ರ ಕಲಂ 134ರಂತೆ ಕೂಡಲೇ ಎಫ್. ಐ. ಆರ್ ದಾಖಲಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಮತ್ತು ಸೇವಾ ನಿಯಾಮಾವಳಿಗಳಂತೆ ಮತ್ತು ಅಪರಾಧ ಕಾಯ್ದೆಯಂತೆ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಈಗಾಗಲೇ ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.
ಸಿಬ್ಬಂದಿಯನ್ನು ಚುನಾವಣಾ ಕಾರ್ಯಕ್ಕೆ ನಿಯೋಜಿಸಲು ಪ್ರತಿ ಕಚೇರಿಯಿಂದ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಸದರಿ ನೋಡಲ್ ಅಧಿಕಾರಿಯು ತಮ್ಮ ಕಚೇರಿಯ ಸಿಬ್ಬಂದಿಗೆ ಚುನಾವಣೆ ಕರ್ತವ್ಯದ ಆದೇಶಗಳನ್ನು ಜಾರಿ ಮಾಡಿ, ಚುನಾವಣಾ ತರಬೇತಿಗೆ ಹಾಗೂ ಚುನಾವಣಾ ಕರ್ತವ್ಯಕ್ಕೆ ಹಾಜರುಪಡಿಸುವ ಜವಾಬ್ದಾರಿ ನೀಡಲಾಗಿದೆ.
ಚುನಾವಣಾ ಕರ್ತವ್ಯಗಳನ್ನು ನಿರ್ವಹಿಸುವಲ್ಲಿ ಯಾವುದೇ ನಿರ್ಲಕ್ಷ್ಯತನ ತೋರಿದ್ದಲ್ಲಿ, ನೋಡಲ್ ಅಧಿಕಾರಿ ವಿರುದ್ಧ ಪ್ರತಿನಿಧಿ ಕಾಯ್ದೆ 1951ರ ಕಲಂ 134ರಂತೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ತರಬೇತಿ ಮುಗಿದ ಬಳಿಕ ಮೇ 9ರಂದು ಮಾಸ್ಟರಿಂಗ್ ಕಾರ್ಯ, ಮೇ 10ರಂದು ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯ ತನಕ ಮತದಾನ ನಡೆಯಲಿದೆ.
ಮತದಾನ ಜಾಗೃತಿಗಾಗಿ ಬಸ್; ಶಿವಮೊಗ್ಗ ಜಿಲ್ಲೆಯಲ್ಲಿ ಮತದಾನ ಜಾಗೃತಿ ಮೂಡಿಸಲು ಹಲವು ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ಜನರಲ್ಲಿ ಇವಿಎಂ/ ವಿವಿಪ್ಯಾಟ್ ಸೇರಿದಂತೆ ಮತದಾನ ಪ್ರಕ್ರಿಯೆ ಕುರಿತು ಜಾಗೃತಿ ಮೂಡಿಸಲು 'ಸ್ವೀಪ್ ಎಕ್ಸ್ಪ್ರೆಸ್ ಬಸ್' ಸಂಚಾರ ಆರಂಭಿಸಲಾಗಿದೆ. ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಈ ಹಿಂದೆ ಉತ್ತಮವಾಗಿ ಮತದಾನ ಆಗಿದೆ. ಆದರೆ ನಗರ ಪ್ರದೇಶದಲ್ಲಿ ಕಡಿಮೆ ಮತದಾನ ಆಗಿತ್ತು. ಆದ್ದರಿಂದ ಮತದಾನ ಪ್ರಮಾಣ ಹೆಚ್ಚಿಸಲು ಸ್ವೀಪ್ ವತಿಯಿಂದ ಅನೇಕ ಚಟುವಟಿಕೆಗಳು ನಡೆಯುತ್ತಿವೆ.
ಕಳೆದ ಬಾರಿಗಿಂತ ಶೇ 10 ರಷ್ಟಾದರೂ ಮತದಾನ ಪ್ರಮಾಣ ಹೆಚ್ಚಬೇಕು. ಈ ಎಕ್ಸ್ಪ್ರೆಸ್ ಬಸ್ ಆರಂಭಿಸಲಾಗಿದೆ. ಈ ಬಸ್ ಶಿವಮೊಗ್ಗ ಜಿಲ್ಲಾದ್ಯಂತ ಕಡಿಮೆ ಮತದಾನ ಆದ ಸ್ಥಳಗಳಿಗೆ ಭೇಟಿ ನೀಡಿ ಜನರಿಗೆ ಜಾಗೃತಿ ಮೂಡಿಸಲಿದೆ. ಮೇ 9ರವರೆಗೆ ಬಸ್ ಸಂಚಾರ ನಡೆಸಲಿದೆ.












Click it and Unblock the Notifications