ಶಿಕಾರಿಪುರದಿಂದ ಯಡಿಯೂರಪ್ಪ ನಾಮಪತ್ರ, ಇನ್ನು 24 ದಿನಕ್ಕೆ ನಾನೇ ಸಿಎಂ!
ಶಿವಮೊಗ್ಗ, ಏಪ್ರಿಲ್ 19 : 'ಇನ್ನು 24 ದಿನಕ್ಕೆ ನಾನೇ ಮುಖ್ಯಮಂತ್ರಿ. ಈ ಬಾರಿಯ ಚುನಾವಣೆಯಲ್ಲಿ 40 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸುತ್ತೇನೆ' ಎಂದು ಶಿಕಾರಿಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ಗುರುವಾರ ಕರ್ನಾಟಕ ಬಿಜೆಪಿ ಅಧ್ಯಕ್ಷ, 2018ರ ಚುನಾವಣೆಯ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಬಿ.ಎಸ್.ಯಡಿಯೂರಪ್ಪ ಅವರು ಶಿಕಾರಿಪುರ ಕ್ಷೇತ್ರದಲ್ಲಿ ನಾಮಪತ್ರವನ್ನು ಸಲ್ಲಿಸಿದರು. ನಂತರ ಹೊಸ ಸಂತೆ ಮೈದಾನದಲ್ಲಿ ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಿದರು.
ಛತ್ತೀಸ್ಗಢ ಮುಖ್ಯಮಂತ್ರಿ ರಮಣ್ ಸಿಂಗ್, ಕೇಂದ್ರ ಸಚಿವ ಅನಂತ್ ಕುಮಾರ್, ಸಂಸದ ಶ್ರೀರಾಮುಲು, ಜಿ.ಎಂ.ಸಿದ್ದೇಶ್ವರ, ಬಿ.ವೈ.ರಾಘವೇಂದ್ರ ಮುಂತಾದ ನಾಯಕರು ಯಡಿಯೂರಪ್ಪ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಉಪಸ್ಥಿತರಿದ್ದರು.
'40 ಸಾವಿರಕ್ಕೂ ಅಧಿಕ ಮತಗಳ ಅಂತರದಲ್ಲಿ ನಾನು ಗೆಲುವು ಸಾಧಿಸುತ್ತೇನೆ. ಶಿಕಾರಿಪುರದ ಜನರು ಈ ಬಾರಿ ಶಾಸಕರನ್ನು ಆಯ್ಕೆ ಮಾಡುತ್ತಿಲ್ಲ. ರಾಜ್ಯದ ಮುಂದಿನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲಿದ್ದಾರೆ' ಎಂದು ಯಡಿಯೂರಪ್ಪ ಹೇಳಿದರು..ಸಮಾವೇಶದಲ್ಲಿ ಯಡಿಯೂರಪ್ಪ ಹೇಳಿದ್ದೇನು? ಚಿತ್ರಗಳಲ್ಲಿ ನೋಡಿ...

ಬೃಹತ್ ರೋಡ್ ಶೋ
ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ಸ್ವಕ್ಷೇತ್ರ ಶಿಕಾರಿಪುರದಲ್ಲಿ ಇಂದು ನಾಮಪತ್ರ ಸಲ್ಲಿಸಿದರು. ಮೊದಲು ಉಚ್ಚಂಗಿ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ಯಡಿಯೂರಪ್ಪ ಅವರು ವಿಶೇಷ ಪೂಜೆ ಸಲ್ಲಿಸಿದರು.
ದೇವಾಲಯದಿಂದ ಸಂತೆ ಮೈದಾನದವರೆಗೆ ರೋಡ್ ಶೋ ನಡೆಸಿ ಮತಯಾಚನೆ ಮಾಡಿದರು. ನಂತರ ಹೊಸ ಸಂತೆ ಮೈದಾನದಲ್ಲಿ ಯಡಿಯೂರಪ್ಪ ಅವರು ಬೃಹತ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ರಮಣ್ ಸಿಂಗ್ ಉಪಸ್ಥಿತಿ
ಬಿ.ಎಸ್.ಯಡಿಯೂರಪ್ಪ ಅವರು ಶಿಕಾರಿಪುರ ತಾಲೂಕು ಕಚೇರಿಗೆ ತೆರಳಿ ಚುನಾವಣಾಧಿಕಾರಿಗೆ ಮಧ್ಯಾಹ್ನ 1.25ಕ್ಕೆ ನಾಮಪತ್ರವನ್ನು ಸಲ್ಲಿಸಿದರು. ಶಿವಮೊಗ್ಗ ಸಂಸದರಾಗಿರುವ ಬಿ.ಎಸ್.ಯಡಿಯೂರಪ್ಪ ಶಿಕಾರಿಪುರ ಕ್ಷೇತ್ರದಿಂದ ಈ ಬಾರಿಯ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ.
2013ರ ಚುನಾವಣೆಯಲ್ಲಿ ಬಿ.ಎಸ್.ಯಡಿಯೂರಪ್ಪ ಕೆಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ನಂತರ 2014ರ ಲೋಕಸಭೆ ಚುನಾವಣೆಯಲ್ಲಿ ಜಯಗಳಿಸಿದ ಬಳಿಕ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ನಂತರ ನಡೆದ ಉಪ ಚುನಾವಣೆಯಲ್ಲಿ ಬಿ.ವೈ.ರಾಘವೇಂದ್ರ ಅವರು ಶಾಸಕರಾಗಿ ಆಯ್ಕೆಯಾಗಿದ್ದಾರೆ.

ಈ ಬಾರಿ ಶಾಸಕರನ್ನು ಆಯ್ಕೆ ಮಾಡುತ್ತಿಲ್ಲ
ಹೊಸ ಸಂತೆ ಮೈದಾನದಲ್ಲಿ ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಿದ ಬಿ.ಎಸ್.ಯಡಿಯೂರಪ್ಪ ಅವರು, 'ಈ ಬಾರಿ ನೀವು ಆರಿಸುತ್ತಿರುವುದು ಕೇವಲ ಒಬ್ಬ ಬಿಜೆಪಿ ಶಾಸಕನನ್ನಲ್ಲ. ಆದರೆ, ರಾಜ್ಯದ ಭಾವಿ ಮುಖ್ಯಮಂತ್ರಿಯನ್ನು' ಎಂದು ಹೇಳಿದರು.
'ಇನ್ನೂ 24 ದಿನಕ್ಕೆ ನಾನೇ ಮುಖ್ಯಮಂತ್ರಿ. ಶಿಕಾರಿಪುರ ಕ್ಷೇತ್ರದಲ್ಲಿ 40 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ನಾನು ಈ ಬಾರಿಯ ಚುನಾವಣೆಯಲ್ಲಿ ಗೆಲುವು ಸಾಧಿಸುತ್ತೇನೆ' ಎಂದು ಯಡಿಯೂರಪ್ಪ ಹೇಳಿದರು.

ರಮಣ್ ಸಿಂಗ್ ಉಪಸ್ಥಿತಿ
ಯಡಿಯೂರಪ್ಪ ಅವರು ನಾಮಪತ್ರ ಸಲ್ಲಿಸುವಾಗ ಛತ್ತೀಸ್ ಗಢದ ಮುಖ್ಯಮಂತ್ರಿ ರಮಣ್ ಸಿಂಗ್, ಕೇಂದ್ರ ಸಚಿವರಾದ ಅನಂತ್ ಕುಮಾರ್, ಬಳ್ಳಾರಿ ಸಂಸದ ಬಿ.ಶ್ರೀರಾಮುಲು ಮುಂತಾದವರು ಯಡಿಯೂರಪ್ಪನವರ ಜೊತೆಗಿದ್ದರು.












Click it and Unblock the Notifications