ಶಿವಮೊಗ್ಗದಲ್ಲಿ ರಾಷ್ಟ್ರಧ್ವಜ ಇಳಿಸಿ, ಕೇಸರಿ ಧ್ವಜ ಹಾರಿಸಿಲ್ಲ: ಎಸ್ಪಿ ಲಕ್ಷ್ಮೀ ಪ್ರಸಾದ್ ಸ್ಪಷ್ಟನೆ
ಶಿವಮೊಗ್ಗ, ಫೆಬ್ರವರಿ 9: ಹಿಜಾಬ್ ವರ್ಸಸ್ ಕೇಸರಿ ಶಾಲು ವಿವಾದದ ನಡುವೆ ಶಿವಮೊಗ್ಗದ ಶಾಲೆ ಆವರಣದಲ್ಲಿದ್ದ ಧ್ವಜ ಕಂಬದ ಮೇಲೆ ಕೇಸರಿ ಧ್ವಜ ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಎಂ ಲಕ್ಷ್ಮೀ ಪ್ರಸಾದ್ ಸ್ಪಷ್ಟನೆ ನೀಡಿದ್ದಾರೆ.
ಶಿವಮೊಗ್ಗದಲ್ಲಿ ರಾಷ್ಟ್ರಧ್ವಜವನ್ನು ಕೆಳಗಿಳಿಸಿ ಕೇಸರಿ ಧ್ವಜವನ್ನು ಹಾರಿಸಲಾಗಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಆದರೆ ಕೇಸರಿ ಧ್ವಜವನ್ನು ಹಾರಿಸುವುದಕ್ಕೂ ಮೊದಲು ಕಂಬದಲ್ಲಿ ರಾಷ್ಟ್ರಧ್ವಜ ಇರಲಿಲ್ಲ. ಶಾಲೆ ಆವರಣದಲ್ಲಿನ ಧ್ವಜ ಕಂಬವು ಖಾಲಿಯಾಗಿತ್ತು. ತದನಂತರ ಹಾರಿಸಿದ ಕೇಸರಿ ಧ್ವಜವನ್ನು ತೆಗೆದು ಹಾಕಲಾಗಿದೆ ಎಂದು ಶಿವಮೊಗ್ಗ ಎಸ್ಪಿ ಬಿ ಎಂ ಲಕ್ಷ್ಮೀ ಪ್ರಸಾದ್ ಸ್ಪಷ್ಟಪಡಿಸಿದ್ದಾರೆ.
ಇದರ ಮಧ್ಯೆ ಶಿವಮೊಗ್ಗ ಬಾಪೂಜಿ ನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ NSUI ವಿದ್ಯಾರ್ಥಿ ಸಂಘಟನೆ ವತಿಯಿಂದ ರಾಷ್ಟ್ರ ಧ್ವಜಾರೋಹಣ ನೆರವೇರಿಸಲಾಯಿತು. ಬೆಳಗ್ಗೆ ತ್ರಿವರ್ಣ ಧ್ವಜಾರೋಹಣ ಮಾಡಿ, ಗೌರವ ಸಲ್ಲಿಸಲಾಯಿತು. ಇದೇ ವೇಳೆ NSUI ಸಂಘಟನೆ ಕಾರ್ಯಕರ್ತರು ಬೆಳಗ್ಗೆ ಧ್ವಜ ಹಾರಿಸಿ, ರಾಷ್ಟ್ರಗೀತೆ ಹಾಡಿದರು.

ವಿವಾದಕ್ಕೆ ಕಾರಣವಾದ ಅಂಶವೇನು?:
ಶಿವಮೊಗ್ಗದ ಬಾಪೂಜಿನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಮಂಗಳವಾರ ಹಿಜಾಬ್ ವರ್ಸಸ್ ಕೇಸರಿ ಶಾಲು ಸಂಘರ್ಷ ತಾರಕಕ್ಕೇರಿತ್ತು. ಕಲ್ಲು ತೂರಟವಾಗಿತ್ತು. ಈ ಸಂದರ್ಭ ವಿದ್ಯಾರ್ಥಿಯೊಬ್ಬ ಧ್ವಜ ಸ್ತಂಭ ಹತ್ತಿ ಕೇಸರಿ ಧ್ವಜ ಹಾರಿಸಿದ್ದನು. ಇದು ವಿವಾದಕ್ಕೆ ಕಾರಣವಾಗಿತ್ತು.

ತ್ರಿವರ್ಣ ಧ್ವಜವೇ ಶ್ರೇಷ್ಠ:
'ರಾಜಕೀಯ ಹಿತಾಸಕ್ತಿ, ಕಾಣದ ಕೈಗಳ ಕುಮ್ಮಕ್ಕಿನಿಂದಾಗಿ ಹಿಜಾಬ್ ವರ್ಸಸ್ ಕೇಸರಿ ಶಾಲು ವಿವಾದ ಸೃಷ್ಟಿಯಾಗಿದೆ. ಇದನ್ನು NSUI ಸಂಘಟನೆ ತೀವ್ರವಾಗಿ ಖಂಡಿಸುತ್ತದೆ. ದೇಶದಲ್ಲಿ ಹಿಜಾಬ್ ಅಥವಾ ಕೇಸರಿ ಶಾಲು ಮುಖ್ಯವಲ್ಲ. ತ್ರಿವರ್ಣ ಧ್ವಜವೇ ಸರ್ವಶ್ರೇಷ್ಠ. ಆದ್ದರಿಂದ ಶಿವಮೊಗ್ಗದಲ್ಲಿ ರಾಷ್ಟ್ರಧ್ವಜ ಹಾರಿಸುವ ಮೂಲಕ ವಿದ್ಯಾರ್ಥಿಗಳು ಹಿಜಾಬ್, ಕೇಸರಿ ಶಾಲು ವಿಚಾರ ಕೈಬಿಡಬೇಕು. ಹಿಂದಿನಂತೆ ತರಗತಿಗಳಲ್ಲಿ ಸಹೋದರ ಭಾವನೆಯಿಂದ ಇರಬೇಕು. ವಿದ್ಯಾರ್ಥಿಗಳು ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಬೇಕು ಎಂದು NSUI ಕಾರ್ಯಕರ್ತರು ಮನವಿ ಮಾಡಿದ್ದಾರೆ.












Click it and Unblock the Notifications