ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪರಿಗೆ ಪ್ರಾಣ ಬೆದರಿಕೆ ಕರೆ!
ಶಿವಮೊಗ್ಗ, ಜನವರಿ.03: ರಾಜ್ಯದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪರಿಗೆ ಅಪರಿಚಿತ ವ್ಯಕ್ತಿಯೊಬ್ಬ ಪ್ರಾಣ ಬೆದರಿಕೆ ಹಾಕಿದ್ದಾನೆ ಎಂಬ ವಿಚಾರ ಇದೀಗ ಹೊರ ಬಿದ್ದಿದೆ. ಸಚಿವರಿಗೆ ಕರೆ ಮಾಡಿದ ವ್ಯಕ್ತಿ ನಿಮ್ಮ ಪ್ರಾಣಕ್ಕೆ ಅಪಾಯವಿದೆ ಎಚ್ಚರಿಕೆ ಎಂದು ಆವಾಜ್ ಹಾಕಿದ್ದಾನಂತೆ.
ಸಚಿವ ಕೆ.ಎಸ್.ಈಶ್ವರಪ್ಪರಿಗೆ ಕರೆ ಮಾಡಿದ ಅಪರಿಚಿತ ವ್ಯಕ್ತಿಯು ತಮಿಳಿನಲ್ಲಿ ಮಾತನಾಡುತ್ತಿದ್ದು, ನಿಮ್ಮ ಜೀವಕ್ಕೆ ಅಪಾಯವಾಗಲಿದೆ ಹುಷಾರ್ ಎಂದು ಬೆದರಿಕೆ ಹಾಕಿದ್ದಾನೆ ಎಂದು ಸ್ವತಃ ಸಚಿವರೇ ಸ್ಪಷ್ಟನೆ ನೀಡಿದ್ದಾರೆ.
ರೈಲ್ವೆ ಇಲಾಖೆಯಿಂದ ಶಿವಮೊಗ್ಗಕ್ಕೆ ಮತ್ತೊಂದು ಕೊಡುಗೆ
ಶಿವಮೊಗ್ಗದಲ್ಲಿ ಈ ಬಗ್ಗೆ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು. ತಮಗೆ ಬಂದಿರುವ ಬೆದರಿಕೆ ಕರೆ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾಂತಾರಾಜು ಅವರಿಗೆ ಮಾಹಿತಿ ನೀಡಿದ್ದೇನೆ ಎಂದು ಹೇಳಿದರು.
ತನಿಖೆ ನಡೆಸುವುದಾಗಿ ತಿಳಿಸಿದ ಎಸ್ಪಿ ಶಾಂತಾರಾಜು:
ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪರಿಗೆ ಬಂದ ಬೆದರಿಕೆ ಕರೆ ಬಗ್ಗೆ ಪರಿಶೀಲನೆ ನಡೆಸಲಾಗುತ್ತದೆ ಎಂದು ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾಂತಾರಾಜು ಸ್ಪಷ್ಟನೆ ನೀಡಿದ್ದಾರೆ. ತನಿಖೆ ನಡೆಸಿ ಮುಂದಿನ ಕ್ರಮ ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ. ಇನ್ನು, ಜನವರಿ.04 ಅಥವಾ 5ನೇ ತಾರೀಖಿನಂದು ಈ ಬಗ್ಗೆ ಸಚಿವ ಈಶ್ವರಪ್ಪ ಲಿಖಿತ ದೂರು ನೀಡುವ ಸಾಧ್ಯತೆಗಳಿವೆ.
ಸಚಿವ ಕೆ.ಎಸ್.ಈಶ್ವರಪ್ಪರಿಗೆ ಈ ರೀತಿಯ ಬೆದರಿಕೆ ಕರೆಗಳು ಬರುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಕೂಡಾ ದುಬೈ ಮೂಲಕ ವ್ಯಕ್ತಿಗಳಿಂದ ಪ್ರಾಣ ಬೆದರಿಕೆ ಕರೆಗಳು ಬರುತ್ತಿದ್ದವು. ಆಗಲೂ ಸಹ ಈಶ್ವರಪ್ಪ ಪೊಲೀಸರಿಗೆ ದೂರು ನೀಡಿದ್ದರು ಎಂದು ತಿಳಿದು ಬಂದಿದೆ.