ಶಿವಮೊಗ್ಗ; ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣಕ್ಕೆ ಚಾಲನೆ, ವಿಶೇಷತೆಗಳು
ಶಿವಮೊಗ್ಗ, ನವೆಂಬರ್ 12; ಶಿವಮೊಗ್ಗದಲ್ಲಿ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ. ಆಸ್ಪತ್ರೆಯ ಸಿವಿಲ್ ಕಾಮಗಾರಿಗೆ ರೂ. 50 ಕೋಟಿ ಮಂಜೂರಾಗಿದ್ದು, 120 ಬೆಡ್ ಸಾಮರ್ಥ್ಯದ ಆಸ್ಪತ್ರೆ ನಿರ್ಮಾಣವಾಗಲಿದೆ. ಶಿವಮೊಗ್ಗ ಮತ್ತು ಸುತ್ತಮುತ್ತಲಿನ ಜಿಲ್ಲೆಗಳ ಜನರಿಗೆ ಈ ಆಸ್ಪತ್ರೆ ಸಹಾಯಕವಾಗಲಿದೆ.
ಕರ್ನಾಟಕದ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಖಾತೆ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಮೆಗ್ಗಾನ್ ಆಸ್ಪತ್ರೆ ಬಳಿ ನೂತನವಾಗಿ ನಿರ್ಮಾಣವಾಗುತ್ತಿರುವ ಕಿದ್ವಾಯಿ ಮಾದರಿ ಕ್ಯಾನ್ಸರ್ ಆಸ್ಪತ್ರೆಯ ಕಟ್ಟಡ ಕಾಮಗಾರಿಗೆ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಸಚಿವರು, "ಜಿಲ್ಲಾ ಉಸ್ತುವಾರಿ ಸಚಿವರ ಆಸಕ್ತಿ ಮತ್ತು ಪ್ರಯತ್ನದಿಂದ ಕಾನೂನು ತೊಡಕು ನಿವಾರಣೆಯಾಗಿ ಕ್ಯಾನ್ಸರ್ ಆಸ್ಪತ್ರೆಗೆ ಗುದ್ದಲಿ ಪೂಜೆ ನೆರವೇರಿದೆ. ಶಿವಮೊಗ್ಗದಲ್ಲಿ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣದಿಂದ ಸುತ್ತಮುತ್ತಲಿನ ಜಿಲ್ಲೆಯ ಜನ ಸಾಮಾನ್ಯರಿಗೆ ಅತ್ಯಂತ ಉಪಯೋಗವಾಗಲಿದ್ದು, ಗುಣಮಟ್ಟದ ಕಾಮಗಾರಿಯೊಂದಿಗೆ ಶೀಘ್ರದಲ್ಲಿ ಸೇವೆಗೆ ಲಭ್ಯವಾಗಲಿದೆ" ಎಂದು ಹೇಳಿದರು.
ಆಸ್ಪತ್ರೆಯ ವಿಶೇಷತೆಗಳು; ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಮಾತನಾಡಿ, "ಈ ಜಾಗದಲ್ಲಿ ಕ್ಯಾನ್ಸರ್ ಆಸ್ಪತ್ರೆ ನಿರ್ಮಿಸಲು ಇದ್ದ ಕಾನೂನು ತೊಡಕನ್ನು ನಿವಾರಿಸಿದ ಅಡ್ವೊಕೇಟ್ ಜನರಲ್ ಹಾಗೂ ಶ್ರಮಿಸಿದ ಎಲ್ಲರಿಗೆ ಧನ್ಯವಾದಗಳು. ಕ್ಯಾನ್ಸರ್ ಆಸ್ಪತ್ರೆಗೆ ನಿರ್ಮಾಣಕ್ಕೆ ಸರ್ಕಾರ ರೂ. 100 ಕೋಟಿ ಮಂಜೂರು ಮಾಡಿದ್ದು, ಆದಷ್ಟು ಬೇಗ, ಗುಣಮಟ್ಟದೊಂದಿಗೆ ಆಸ್ಪತ್ರೆ ನಿರ್ಮಾಣಗೊಂಡು ಸೇವೆಗೆ ಸಿದ್ದವಾಗಬೇಕು" ಎಂದರು.
"ಆಸ್ಪತ್ರೆಯಲ್ಲಿ ಸೂಪರ್ ಸ್ಪೆಷಾಲಟಿ ಸೇವೆಯೂ ಇದ್ದು, ವೈದ್ಯಕೀಯ ಶಿಕ್ಷಣ ಸಚಿವರು ಇನ್ನಷ್ಟು ಸಹಕಾರ ನೀಡಿದಲ್ಲಿ ಪೂರ್ಣ ಪ್ರಮಾಣದಲ್ಲಿ ಈ ಆಸ್ಪತ್ರೆ ಕಾರ್ಯನಿರ್ವಹಿಸುವ ಮೂಲಕ ಹೊರ ಜಿಲ್ಲೆಗಳಾದ ಮಂಗಳೂರು, ಬೆಂಗಳೂರು ಮತ್ತು ದಾವಣಗೆರೆಗೆ ರೋಗಿಗಳು ಚಿಕಿತ್ಸೆಗಾಗಿ ಹೋಗುವುದು ತಪ್ಪುತ್ತದೆ. ಆದ್ದರಿಂದ ಮಲೆನಾಡಿಗೆ ಹೆಚ್ಚು ಸೌಲಭ್ಯಗಳನ್ನು ನೀಡುವಂತೆ" ವೈದ್ಯಕೀಯ ಶಿಕ್ಷಣ ಸಚಿವರಲ್ಲಿ ಮನವಿ ಮಾಡಿದರು.
ಬೆಂಗಳೂರಿನ ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆಯ ನಿರ್ದೇಶಕ ಡಾ. ಲೋಕೇಶ್ ಮಾತನಾಡಿ, "ನೂತನ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಮಾನವ ಸಂಪನ್ಮೂಲ, ಮೂಲಭೂತ ಸೌಕರ್ಯಗಳನ್ನು ಶಿಸ್ತಿನಿಂದ ನಿರ್ವಹಿಸಲಾಗುವುದು. ಪ್ರತಿ ವರ್ಷ ದೇಶದಲ್ಲಿ 14 ಲಕ್ಷ ಹೊಸ ಕ್ಯಾನ್ಸರ್ ರೋಗಿಗಳು ಪತ್ತೆಯಾಗುತ್ತಾರೆ. ರಾಜ್ಯದಲ್ಲಿ ಪ್ರತಿ ವರ್ಷ 80 ಸಾವಿರ ಪತ್ತೆಯಾದರೆ ಶಿವಮೊಗ್ಗ ಸುತ್ತಮುತ್ತ ಜಿಲ್ಲೆಯಲ್ಲಿ ಸುಮಾರು 10 ಸಾವಿರ ಹೊಸ ಕ್ಯಾನ್ಸರ್ ರೋಗಿಗಳು ಪತ್ತೆಯಾಗುತ್ತಾರೆ. ಇಲ್ಲಿ ಕ್ಯಾನ್ಸರ್ ಆಸ್ಪತ್ರೆ ಸ್ಥಾಪನೆಯಿಂದ ಮಧ್ಯ ಕರ್ನಾಟಕ ಭಾಗದ ಸುತ್ತಮತ್ತಲಿನ ಜಿಲ್ಲೆಗಳ ಜನರಿಗೆ ಅನುಕೂಲವಾಗಲಿದೆ. ಇಲ್ಲಿ ಹೊಸ ತಂತ್ರಜ್ಞಾನ ಅಳವಡಿಕೆ, ಅಭಿವೃದ್ದಿಗೆ ಯೋಜನೆ ರೂಪಿಸಿದ್ದೇವೆ" ಎಂದರು.
ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಮಾತನಾಡಿ, "ಇಲ್ಲಿ ಕ್ಯಾನ್ಸರ್ ಆಸ್ಪತ್ರೆ ಆಗಬೇಕೆಂಬ ಬಹುದಿನದ ಕನಸು ನನಸಾಗಿದೆ. ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ಅತಿಯಾದ ಜನಸಂದಣಿ ಇರುತ್ತದೆ. ಎಲ್ಲರಿಗೂ ಅಲ್ಲಿ ಚಿಕಿತ್ಸೆ ಕಷ್ಟ ಆದ್ದರಿಂದ ಶಿವಮೊಗ್ಗ, ಮಂಗಳೂರು, ಹುಬ್ಬಳ್ಳಿ, ಗುಲ್ಬರ್ಗ ಹೀಗೆ ಬೇರೆ ಬೇರೆ ಕಡೆ ಕ್ಯಾನ್ಸರ್ ಆಸ್ಪತ್ರೆ ತೆರೆದರೆ ಬಡವರು ಬದುಕುತ್ತಾರೆ. ಆದಷ್ಟು ಬೇಗ ಆಸ್ಪತ್ರೆ ಕಾಮಗಾರಿ ಪೂರ್ಣಗೊಂಡು ಬಡವರ ಸೇವೆ ಆರಂಭಿಸಲಿ" ಎಂದರು ಹಾರೈಸಿದರು.
ವೈದ್ಯಕೀಯ ಕಾಲೇಜು ಸ್ಥಾಪನೆ; ಡಾ. ಶರಣಪ್ರಕಾಶ ಪಾಟೀಲ್ ಮಾತನಾಡಿ, "ಬಡವರ ಮಕ್ಕಳು ಸಹ ಡಾಕ್ಟರ್ ಆಗಬೇಕೆಂಬ ಉದ್ದೇಶದಿಂದ ರಾಜ್ಯಾದ್ಯಂತ ಸರ್ಕಾರಿ ಮೆಡಿಕಲ್ ಕಾಲೇಜುಗಳನ್ನು ಸ್ಥಾಪಿಸಲಾಗುತ್ತಿದೆ. ನಮ್ಮ ರಾಜ್ಯದಲ್ಲೇ ಅತ್ಯಧಿಕ 70 ಮೆಡಿಕಲ್ ಕಾಲೇಜುಗಳಿದ್ದು ಇದರಲ್ಲಿ 25 ಸರ್ಕಾರಿ ಕಾಲೇಜುಗಳಾಗಿವೆ. ಪ್ರತಿ ಜಿಲ್ಲೆಗೊಂದು ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ವಿಭಾಗಗಳ ಕೇಂದ್ರ ಸ್ಥಾನದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪಿಸಲಾಗುತ್ತಿದೆ. ಶಿವಮೊಗ್ಗದಲ್ಲಿ ಕ್ಯಾನ್ಸರ್ ಆಸ್ಪತ್ರೆಗೆ ಗುದ್ದಲಿಪೂಜೆ ನೆರವೇರಿದ್ದು, ತುಮಕೂರು, ಮಂಡ್ಯ, ಮೈಸೂರಿನಲ್ಲಿ ಕೆಲಸ ನಡೆಯುತ್ತಿದೆ. ಕಲಬುರಗಿಯಲ್ಲಿ ಸೇವೆ ಆರಂಭಿಸಲಾಗಿದೆ. ಮುಂದಿನ 5 ರ್ಷಗಳಲ್ಲಿ ಪ್ರತಿ ಸರ್ಕಾರಿ ಮೆಡಿಕಲ್ ಕಾಲೇಜಿನಲ್ಲಿ ಕ್ಯಾನ್ಸರ್ ಆಸ್ಪತ್ರೆಯನ್ನು ಸ್ಥಾಪಿಸುವ ಗುರಿ ಹೊಂದಲಾಗಿದೆ" ಎಂದರು.
"ಜನ ಸಾಮಾನ್ಯರು, ಬಡವರಿಗೆ ಉಚಿತ ಮತ್ತು ಗುಣಮಟ್ಟದ ಆರೋಗ್ಯ ನೀಡುವುದು ಸರ್ಕಾರದ ಉದ್ದೇಶವಾಗಿದ್ದು, ಕ್ಯಾನ್ಸರ್ ಆಸ್ಪತ್ರೆ ಕಾಮಗಾರಿಯನ್ನು 18 ತಿಂಗಳ ಒಳಗೆ ಮುಗಿಸಿ ಆಸ್ಪತ್ರೆಗೆ ಅಗತ್ಯವಾದ ಮೂಲಸೌಕರ್ಯ, ಉಪಕರಣ, ತಂತ್ರಜ್ಞಾನದ ಕುರಿತು ಪ್ರಸ್ತಾವನೆ ಸಲ್ಲಿಸುವಂತೆ" ಅಧಿಕಾರಿಗಳಿಗೆ ಸೂಚಿಸಿದರು.












Click it and Unblock the Notifications