Shivamogga BJP Ticket: ಕಾಂತೇಶ್ಗೆ ತಪ್ಪಿದ ಬಿಜೆಪಿ ಟಿಕೆಟ್; ಕೆಎಸ್ ಈಶ್ವರಪ್ಪ ಮೊದಲ ಪ್ರತಿಕ್ರಿಯೆ
ಶಿವಮೊಗ್ಗ, ಏಪ್ರಿಲ್ 20: ಒಂದು ಕಡೆ ರಾಜ್ಯದಲ್ಲಿ ಬೇಸಿಗೆಯ ತಾಪಮಾನ ಏರಿಕೆಯಾಗುತ್ತಿದ್ದರೆ, ಮತ್ತೊಂದೆಡೆ 2023ರ ಕರ್ನಾಟಕ ವಿಧಾನಸಭೆ ಚುನಾವಣೆಯ ಕಾವು ಕೂಡ ಜೋರಾಗಿದೆ. ಈ ಮಧ್ಯೆ ರಾಜಕೀಯ ಪಕ್ಷಗಳು ಅಂತಿಮವಾಗಿ ಎಲ್ಲ 224 ಕ್ಷೇತ್ರಗಳಿಗೆ ತಮ್ಮ ಹುರಿಯಾಳುಗಳನ್ನು ಘೋಷಿಸಿದೆ.
ಕರ್ನಾಟಕ ವಿಧಾನಸಭೆ ಚುನಾವಣೆಗೆ ಗುರುವಾರ (ಏಪ್ರಿಲ್ 20) ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಒಂದು ದಿನ ಮುನ್ನ ಬಿಜೆಪಿ ಹೈಕಮಾಂಡ್ ತನ್ನ ಅಭ್ಯರ್ಥಿಗಳ ಕೊನೆಯ ಪಟ್ಟಿಯನ್ನು ಬಿಡುಗಡೆ ಮಾಡಿತು. ಇದರಲ್ಲಿ ಮಾನ್ವಿ ಮತ್ತು ಶಿವಮೊಗ್ಗ ನಗರ ಕ್ಷೇತ್ರಗಳು ಸೇರಿಕೊಂಡಿವೆ.

ಶಿವಮೊಗ್ಗ ನಗರ ಕ್ಷೇತ್ರಕ್ಕೆ ಚನ್ನಬಸಪ್ಪ ಹೆಸರು ಅಂತಿಮವಾದರೆ, ಮಾನ್ವಿ ಕ್ಷೇತ್ರಕ್ಕೆ ಬಿ.ವಿ. ನಾಯಕ್ ಅವರ ಹೆಸರನ್ನು ಘೋಷಿಸಲಾಗಿದೆ. ಇದೇ ವೇಳೆ ಹಾಲಿ ಶಿವಮೊಗ್ಗ ನಗರ ಶಾಸಕ ಕೆ.ಎಸ್. ಈಶ್ವರಪ್ಪ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ನಂತರ ಅವರ ಪುತ್ರ ಕೆ.ಇ. ಕಾಂತೇಶ್ ಅವರಿಗೆ ಟಿಕೆಟ್ ಸಿಗುವ ನಿರೀಕ್ಷೆ ಇತ್ತು.
ಇದೀಗ ಬಿಜೆಪಿ ಕಾರ್ಯಕರ್ತ ಚನ್ನಬಸಪ್ಪ ಅವರಿಗೆ ಟಿಕೆಟ್ ನೀಡಲಾಗಿದ್ದು, ಈ ಬಗ್ಗೆ ಸ್ವತಃ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಪ್ರತಿಕ್ರಿಯಿಸಿದ್ದು, "ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತ ಚನ್ನಬಸಪ್ಪಗೆ ಶಿವಮೊಗ್ಗ ಟಿಕೆಟ್ ನೀಡಿರುವುದಕ್ಕೆ ಸಂತಸವಾಗಿದೆ. ಅವರು ಬಿಜೆಪಿ ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ," ಎಂದು ತಿಳಿಸಿದರು.
"ಆಡಳಿತದಲ್ಲಿ ಅನುಭವ ಇರುವ ವ್ಯಕ್ತಿಗೆ ಟಿಕೆಟ್ ನೀಡಲಾಗಿದೆ, ನಮ್ಮ ಪುತ್ರನಿಗೆ ಟಿಕೆಟ್ ನೀಡಬೇಕೆಂದು ಬೆಂಬಲಿಗರು ಒತ್ತಾಯಿಸಿದ್ದರು. ಆದರೆ ಪಕ್ಷದ ತೀರ್ಮಾನಕ್ಕೆ ನಾವು ಬದ್ಧರಾಗಿದ್ದೇವೆ. ಬಿಜೆಪಿ ಅಭ್ಯರ್ಥಿ ಚನ್ನಬಸಪ್ಪ ಗೆಲುವಿಗೆ ಶ್ರಮಿಸಲಿದ್ದೇವೆ," ಎಂದು ಕೆ.ಎಸ್. ಈಶ್ವರಪ್ಪ ಹೇಳಿದರು.

"ನಗರಸಭೆ ಅಧ್ಯಕ್ಷ, ಶಿವಮೊಗ್ಗ ಪಾಲಿಕೆ ಆಡಳಿತ ಪಕ್ಷದ ನಾಯಕ, ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಚನ್ನಬಸಪ್ಪ ಕೆಲಸ ಮಾಡಿದ್ದಾರೆ. ಅಂತಹ ನಿಷ್ಠಾವಂತ ಕಾರ್ಯಕರ್ತನಿಗೆ ಟಿಕೆಟ್ ನೀಡಿರುವುದಕ್ಕೆ ಸಂತಸವಾಗಿದೆ. ಕಾಂತೇಶ್ ಟವರಿಗೆ ಟಿಕೆಟ್ ನೀಡಲು ಒತ್ತಾಯಿಸಿದ್ದ ಬೆಂಬಲಿಗರು ಯಾವುದೇ ಪ್ರಶ್ನೆ ಮಾಡದಂತೆ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಲು ಶ್ರಮ ವಹಿಸಬೇಕು. ನರೇಂದ್ರ ಮೋದಿ ನೇತೃತ್ವದಲ್ಲಿ ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಬೇಕು," ಎಂದು ಕೆ.ಎಸ್. ಈಶ್ವರಪ್ಪ ತಮ್ಮ ಕಾರ್ಯಕರ್ತರಿಗೆ ಕರೆ ನೀಡಿದರು.
ಟಿಕೆಟ್ ತಪ್ಪಿದ್ದಕ್ಕೆ ಕೆ.ಇ. ಕಾಂತೇಶ್ ಪ್ರತಿಕ್ರಿಯೆ
ಶಿವಮೊಗ್ಗ ನಗರ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಕೆ.ಎಸ್. ಈಶ್ವರಪ್ಪ ಅವರ ಪುತ್ರ ಕಾಂತೇಶ್ ಪ್ರತಿಕ್ರಿಯೆ ನೀಡಿದ್ದು, "ತಮ್ಮ ತಂದೆ ಹಾಗೂ ಪಕ್ಷ ಹೇಳಿದಂತೆ ಕೆಲಸ ಮಾಡುತ್ತೇನೆ. ನನಗೆ ಟಿಕೆಟ್ ಸಿಗದಿರುವುದಕ್ಕೆ ಬೆಂಬಲಿಗರಿಗೆ ಬೇಸರವಾಗಿದೆ. ಪಕ್ಷೇತರನಾಗಿ ಸ್ಪರ್ಧೆ ಮಾಡಲು ಒತ್ತಾಯಿಸಿದರು. ಆದರೆ, ಬಿಜೆಪಿ ಪಕ್ಷ ನಮ್ಮ ತಂದೆಗೆ ಎಲ್ಲವನ್ನೂ ಕೊಟ್ಟಿದೆ. ಸೋತಾಗಲೂ ಕೈ ಹಿಡಿದಿದೆ. ಹೀಗಾಗಿ ಬಿಜೆಪಿಗೆ ದ್ರೋಹ ಮಾಡುವುದಿಲ್ಲ," ಎಂದರು.
"ಮುಂದಿನ ದಿನಗಳಲ್ಲಿ ಪಕ್ಷ ನನ್ನ ಕಾರ್ಯ ಗುರುತಿಸಿ ಜವಾಬ್ದಾರಿ ನೀಡುವ ವಿಶ್ವಾಸವಿದೆ. ನನ್ನ ರಾಜಕೀಯ ಜೀವನ ಈಗ ಆರಂಭವಾಗಿದೆ. ಮುಂಬರುವ ದಿನಗಳು ಒಳ್ಳೆಯದಾಗಿರಲಿವೆ, ಟಿಕೆಟ್ ಸಿಗದಿದ್ದಕ್ಕೆ ನನಗೆ ಬೇಸರವಿಲ್ಲ, ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸುತ್ತೇನೆ," ಎಂದು ಕೆ.ಎಸ್. ಈಶ್ವರಪ್ಪ ಪುತ್ರ ಕಾಂತೇಶ್ ಹೇಳಿದ್ದಾರೆ.
ಬಿಜೆಪಿ ಟಿಕೆಟ್ ಸಿಕ್ಕಿದ್ದಕ್ಕೆ ಚನ್ನಬಸಪ್ಪ ಸಂತಸ
ಶಿವಮೊಗ್ಗ ನಗರ ಬಿಜೆಪಿ ಟಿಕೆಟ್ ಘೋಷಣೆಯಾಗಿದ್ದಕ್ಕೆ ಅಭ್ಯರ್ಥಿ ಚನ್ನಬಸಪ್ಪ ಸಂತೋಷ ವ್ಯಕ್ತಪಡಿಸಿದ್ದಾರೆ. ಬಿ.ಎಸ್ ಯಡಯೂರಪ್ಪ ಮತ್ತು ಕೆ.ಎಸ್. ಈಶ್ವರಪ್ಪ ಮಾರ್ಗದರ್ಶನದಲ್ಲಿ ಮುಂದುವರೆಯುತ್ತೇನೆ. ಬಿಜೆಪಿ ಕಾರ್ಯಕರ್ತರ ಪರಿಶ್ರಮದಿಂದ ಬಿಜೆಪಿ ಹೈಕಮಾಂಡ್ ಟಿಕೆಟ್ ನೀಡಿದೆ ಎಂದು ತಿಳಿಸಿದ್ದಾರೆ.












Click it and Unblock the Notifications