KS Eshwarappa: ಮಗನಿಗೆ ಕೈತಪ್ಪಿದ ಟಿಕೆಟ್; ಬಿಎಸ್ವೈ ವಿರುದ್ಧ ಈಶ್ವರಪ್ಪ ಕೆಂಡಾಮಂಡಲ
ಲೋಕಸಭಾ ಚುನಾವಣೆಗಾಗಿ ಬಿಜೆಪಿ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆಯಾಗಿದೆ. ರಾಜ್ಯದ 20 ಲೋಕಸಭಾ ಕ್ಷೇತ್ರಗಳ ಹೆಸರನ್ನು ಬಿಜೆಪಿ ಘೋಷಣೆ ಮಾಡಿದೆ. ಹಾಲಿ 8 ಸಂಸದರಿಗೆ ಟಿಕೆಟ್ ಕೈತಪ್ಪಿದ್ದು, ಬೇರೆ ನಾಯಕರಿಗೆ ಟಿಕೆಟ್ ನೀಡಲಾಗಿದೆ. ಟಿಕೆಟ್ ಕೈತಪ್ಪಿದ ಬಳಿಕ ಹಲವು ಕಡೆಗಳಲ್ಲಿ ಈಗಾಗಲೇ ಅಸಮಾಧಾನ ಸ್ಫೋಟವಾಗಿದೆ.
ಮಾಜಿ ಸಚಿವ ಈಶ್ವರಪ್ಪ ಅವರು ಈ ಬಾರಿ ಮಗನಿಗೆ ಟಿಕೆಟ್ ಕೊಡಿಸಲು ಭಾರಿ ಲಾಭಿ ಮಾಡಿದ್ದರು, ಹಾವೇರಿ ಲೋಕಸಭಾ ಕ್ಷೇತ್ರದಿಂದ ಮಗ ಕಾಂತೇಶ್ ಅವರಿಗೆ ಟಿಕೆಟ್ಗಾಗಿ ಬೇಡಿಕೆ ಇಟ್ಟಿದ್ದರು. ಹಾವೇರಿಯಿಂದ ಈಗ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಣಕ್ಕಿಳಿಯಲಿದ್ದು, ಕಾಂತೇಶ್ ಅವರಿಗೆ ಟಿಕೆಟ್ ಕೈತಪ್ಪಿದೆ.

ಮಗನಿಗೆ ಟಿಕೆಟ್ ಕೈತಪ್ಪಿದ ಬೆನ್ನಲ್ಲೇ ಕೆಎಸ್ ಈಶ್ವರಪ್ಪ ಬೆಂಬಲಿಗರ ಜೊತೆ ಸಭೆ ನಡೆಸಿದ್ದಾರೆ. ಮಗನಿಗೆ ಟಿಕೆಟ್ ಕೈತಪ್ಪಲು ಬಿಎಸ್ ಯಡಿಯೂರಪ್ಪ ಅವರೇ ಕಾರಣ ಎಂದು ಕಿಡಿ ಕಾರಿದ್ದಾರೆ. ಬಿಎಸ್ವೈ ಅವರ ಪುತ್ರ ಬಿವೈ ರಾಘವೇಂದ್ರ ಅವರಿಗೆ ಶಿವಮೊಗ್ಗದಿಂದ ಟಿಕೆಟ್ ಸಿಕ್ಕಿದೆ. ಬಿಎಸ್ ಯಡಿಯೂರಪ್ಪ ನಮಗೆ ಮೋಸ ಮಾಡಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಬಿಎಸ್ವೈ ಕುಟುಂಬದ್ದೇ ಪಾರುಪತ್ಯ
ಕರ್ನಾಟಕ ಬಿಜೆಪಿ ಒಂದು ಪಕ್ಷದ ಹಿಡಿತಕ್ಕೆ ಸಿಲುಕಿದೆ ಎಂದು ಈಶ್ವರಪ್ಪ ಕಿಡಿ ಕಾರಿದ್ದಾರೆ. ರಾಜ್ಯದಲ್ಲಿ ಬೇರೆ ಲಿಂಗಾಯತ ನಾಯಕರು ಇಲ್ಲವಾ? ಬಿಎಸ್ವೈ ಹಠ ಮಾಡಿ ಶೋಭಾ ಕರಂದ್ಲಾಜೆ, ಬಸವರಾಜ ಬೊಮ್ಮಾಯಿ ಅವರಿಗೆ ಟಿಕೆಟ್ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ . ಆದರೆ ನನ್ನ ಮಗನಿಗೆ ಟಿಕೆಟ್ ಕೊಡಿಸದೆ ಅನ್ಯಾಯ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಾನು ಕೂಡ 40 ವರ್ಷದಿಂದ ಪಕ್ಷಕ್ಕಾಗಿ ದುಡಿದಿದ್ದೇನೆ. ಒಬ್ಬರಿಂದಲೇ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿರಲಿಲ್ಲ. ಸದಾನಂದ ಗೌಡ, ನಳಿನ್ ಕುಮಾರ್ ಕಟೀಲ್, ಪ್ರತಾಪ್ ಸಿಂಹ, ಸಿ. ಟಿ. ರವಿಯಂತಹ ನಾಯಕರಿಗೆ ಅನ್ಯಾಯವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಆರೋಗ್ಯ ಸಮಸ್ಯೆ ಇದ್ದು, ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡಲ್ಲ ಎಂದು ಬಸವರಾಜ ಬೊಮ್ಮಾಯಿ ಅವರೇ ಚುನಾವಣಾ ಸಮಿತಿ ಸಭೆಯಲ್ಲಿ ಹೇಳಿದ್ದರು. ಆದರೆ ಅವರಿಗೆ ಬಿಎಸ್ವೈ ಹಠ ಮಾಡಿ ಕೊಡಿಸಿದ್ದಾರೆ. ನನ್ನ ಮಗನಿಗೆ ಟಿಕೆಟ್ ಕೈತಪ್ಪಿಸಲು ಮಾಡಿರುವ ತಂತ್ರ ಇದೆ. ಪಕ್ಷಕ್ಕಾಗಿ ದುಡಿದವರಿಗೆ ಅನ್ಯಾಯವಾಗಿದೆ ಎಂದು ಹೇಳಿದರು.
ಮಾರ್ಚ್ 15ರಂದು ನಿರ್ಧಾರ
ಬೆಂಬಲಿಗರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಒತ್ತಾಯ ಮಾಡಿದ್ದಾರೆ. ನನಗೆ ಮತ್ತೆ ಮೋದಿ ಪ್ರಧಾನಿಯಾಗಲಿ ಎಂದು ಆಸೆ ಇದೆ. ಮಾರ್ಚ್ 15ರಂದು ಬೆಂಬಲಿಗರ ಸಭೆ ಕರೆದಿದ್ದು, ಎಲ್ಲರ ಅಭಿಪ್ರಾಯ ಸಂಗ್ರಹಿಸಿ ಮುಂದಿನ ನಿರ್ಧಾರ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.












Click it and Unblock the Notifications