Get Updates
Get notified of breaking news, exclusive insights, and must-see stories!

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕೆಎಸ್ಆರ್‌ಟಿಸಿ ಬಸ್, ವೇಳಾಪಟ್ಟಿ

ಶಿವಮೊಗ್ಗ, ಸೆಪ್ಟೆಂಬರ್ 01; ಶಿವಮೊಗ್ಗ ಹೊರವಲಯದ ಸೋಗಾನೆಯಲ್ಲಿ ನಿರ್ಮಾಣಗೊಂಡಿರುವ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ವಾಣಿಜ್ಯ ಸಂಚಾರ ಆರಂಭವಾಗಿದೆ. ಬೆಂಗಳೂರು-ಶಿವಮೊಗ್ಗ ನಡುವಿನ ವಿಮಾನ ಗುರುವಾರ ಇಳಿಯುವ ಮೂಲಕ ಮಲೆನಾಡಿಗರ ಹಲವು ವರ್ಷಗಳ ಕನಸು ನನಸಾಗಿದೆ. ಸದ್ಯ, ಬೆಂಗಳೂರು-ಶಿವಮೊಗ್ಗ ನಡುವೆ ಮಾತ್ರ ವಿಮಾನ ಸಂಚಾರ ನಡೆಸಲಿದೆ.

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಆಗಸ್ಟ್ 31ರಿಂದ ವಿಮಾನ ಹಾರಾಟ ಆರಂಭವಾದ ಹಿನ್ನಲೆಯಲ್ಲಿ ವಿಮಾನ ನಿಲ್ದಾಣಕ್ಕೆ ಜನರು ಸಂಚಾರ ನಡೆಸಲು ಅನುಕೂಲವಾಗುವಂತೆ ಶಿವಮೊಗ್ಗದ ಕೆಎಸ್ಆರ್‌ಟಿಸಿ ವಿಭಾಗ ಬಸ್‌ ಸೇವೆಯನ್ನು ಆರಂಭಿಸಿದೆ.

KSRTC Launched Bus Service To Shivamogga Airport

ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ಈ ಕುರಿತು ಮಾಹಿತಿ ನೀಡಿದ್ದಾರೆ. ಕೆಎಸ್ಆರ್‌ಟಿಸಿಯ ಬಸ್ ಶಿವಮೊಗ್ಗ-ವಿಮಾನ ನಿಲ್ದಾಣ- ಕಾಚಿನಕಟ್ಟೆ ಮಾರ್ಗದಲ್ಲಿ ಸಂಚಾರ ನಡೆಸಲಿದೆ. ವಿಮಾನ ನಿಲ್ದಾಣಕ್ಕೆ ಸಾಗುವ ಜನರು ನೂತನ ಮಾರ್ಗದ ಬಸ್ ಸೇವೆಯನ್ನು ಬಳಕೆ ಮಾಡಿಕೊಳ್ಳಬಹುದು.

ವೇಳಾಪಟ್ಟಿ; ಶಿವಮೊಗ್ಗ ವಿಮಾನ ವಿಮಾನ ನಿಲ್ದಾಣಕ್ಕೆ ಸದ್ಯ ಇಂಡಿಗೋ ಸಂಸ್ಥೆಯ ಬೆಂಗಳೂರು-ಶಿವಮೊಗ್ಗ ನಡುವಿನ ವಿಮಾನ ಮಾತ್ರ ಆಗಮಿಸಲಿದೆ. 11 ಗಂಟೆಗೆ ಶಿವಮೊಗ್ಗಕ್ಕೆ ಬರುವ ವಿಮಾನ, 11.45ಕ್ಕೆ ಶಿವಮೊಗ್ಗದಿಂದ ಬೆಂಗಳೂರಿಗೆ ವಾಪಸ್ ಹೊರಡಲಿದೆ.

ಕೆಎಸ್ಆರ್‌ಟಿಸಿ ಶಿವಮೊಗ್ಗ-ವಿಮಾನ ನಿಲ್ದಾಣ- ಕಾಚಿನಕಟ್ಟೆ ಮಾರ್ಗದಲ್ಲಿ ಬೆಳಗ್ಗೆ 8.30ರಿಂದ ಪ್ರತಿ ಅರ್ಧ ಗಂಟೆಗೊಮ್ಮೆ ಹಾಗೂ ಕಾಚಿನಕಟ್ಟೆಯಿಂದ ಬೆಳಗ್ಗೆ 9 ರಿಂದ ಪ್ರತಿ ಅರ್ಧ ಗಂಟೆಗೊಮ್ಮೆ ಸಂಜೆ 6.30ರ ತನಕ ಬಸ್‍ಗಳ ಸಂಚಾರ ನಡೆಸಲಿದೆ. ಸಾರ್ವಜನಿಕರು ಈ ಸೌಲಭ್ಯದ ಉಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಲಾಗಿದೆ.

ಕರ್ನಾಟಕದ 9ನೇ ಮತ್ತು ಕರ್ನಾಟಕದ ಮಲೆನಾಡು ಭಾಗದಲ್ಲಿ ನಿರ್ಮಾಣವಾಗಿರುವ ಪ್ರಪ್ರಥಮ ವಿಮಾನ ನಿಲ್ದಾಣ ಶಿವಮೊಗ್ಗ ವಿಮಾನ ನಿಲ್ದಾಣವಾಗಿದೆ. ಈ ವಿಮಾನ ನಿಲ್ದಾಣವನ್ನು ಸುಮಾರು 450 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ. ಈ ವಿಮಾನ ನಿಲ್ದಾಣದಿಂದ ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ಚಿತ್ರದುರ್ಗ, ದಾವಣಗೆರೆ ಮತ್ತು ಹಾವೇರಿ ಜಿಲ್ಲೆಗಳ ಜನರಿಗೆ ಅನುಕೂಲವಾಗಲಿದೆ.

ಕರ್ನಾಟಕ ಸರ್ಕಾರ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಂಚಾರ ನಡೆಸುವ ಜನರಿಗೆ ಸಿಹಿಸುದ್ದಿ ನೀಡಿದೆ. ಮುಂದಿನ ಒಂದು ವರ್ಷ ಕಾಲ ಶಿವಮೊಗ್ಗ-ಬೆಂಗಳೂರು ನಡುವೆ ಪ್ರಯಾಣಿಸುವ ಪ್ರತಿಯೊಬ್ಬರ ಟಿಕೆಟ್ ಮೇಲೆ 500 ರೂ. ಸಬ್ಸಿಡಿಯನ್ನು ಸರ್ಕಾರ ನೀಡಲಿದೆ.

ಶಿವಮೊಗ್ಗ ವಿಮಾನ ನಿಲ್ದಾಣವನ್ನು 779 ಎಕರೆ ಜಾಗದಲ್ಲಿ ನಿರ್ಮಾಣ ಮಾಡಲಾಗಿದೆ. ಬೆಂಗಳೂರು ಹೊರತುಪಡಿಸಿದರೆ ಅತಿ ಉದ್ದದ ರನ್ ವೇ ಹೊಂದಿರುವ ವಿಮಾನ ನಿಲ್ದಾಣವಿದು. ಏರ್‌ಬಸ್ 320 ಮಾದರಿಯ ವಿಮಾನಗಳು ಕೂಡ ಇಳಿಯುವ ವ್ಯವಸ್ಥೆ ಇಲ್ಲಿದೆ. ರಾತ್ರಿ ವೇಳೆ ವಿಮಾನಗಳು ಇಳಿಯುವ ಸೌಲಭ್ಯಗಳನ್ನು ಕೂಡ ಕಲ್ಪಿಸಲಾಗುತ್ತಿದೆ.

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಇನ್ನೂ ಹೆಸರು ಇಟ್ಟಿಲ್ಲ. ರಾಷ್ಟ್ರಕವಿ ಕುವೆಂಪು ಅವರ ಹೆಸರನ್ನು ಇಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಕುರಿತು ಕೇಂದ್ರ ಸರ್ಕಾರದ ಒಪ್ಪಿಗೆ ಪಡೆಯುವ ಕಾರ್ಯ ಪ್ರಗತಿಯಲ್ಲಿದೆ. ಈ ವರ್ಷದ ಫೆಬ್ರವರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ್ದರು.

ಶಿವಮೊಗ್ಗ-ಬೆಂಗಳೂರು ನಡುವೆ ಇಂಡಿಗೋ ವಿಮಾನ ಸೇವೆ ಆರಂಭಿಸಿದೆ. ಬೆಂಗಳೂರಿಗೆ ಕನೆಕ್ಟಿಂಗ್ ವಿಮಾನಯಾನ ಸೇವೆ ಲಭ್ಯವಾಗಲಿದೆ. ಬೆಂಗಳೂರಿನಿಂದ ಚೆನ್ನೈ, ಮುಂಬೈ ಮತ್ತು ದೆಹಲಿಗೆ ತೆರಳಲಿರುವ ಇಂಡಿಗೋ ಸಂಸ್ಥೆಯ ವಿಮಾನಗಳ ಮೂಲಕ ಪ್ರಯಾಣವನ್ನು ಜನರು ಮುಂದುವರಿಸಬಹುದು.

ಉಡಾನ್ ಯೋಜನೆಯಡಿ ಟೆಂಡರ್ ಪ್ರಕ್ರಿಯೆ ಮುಗಿದಿದ್ದು ಸದ್ಯದಲ್ಲೇ ಅಧಿಕೃತವಾಗಿ ಪ್ರಕಟಿಸಲಾಗುತ್ತದೆ. ಮುಂದಿನ ದಿನಗಳಲ್ಲಿ ದೆಹಲಿ, ಹೈದರಾಬಾದ್ ಸೇರಿದಂತೆ ದೇಶದ ನಾನಾ ನಗರಗಳಿಗೆ ಶಿವಮೊಗ್ಗದಿಂದ ನೇರ ವಿಮಾನ ಸೇವೆ ಆರಂಭವಾಗಲಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+