ಕ್ವಾರಂಟೈನ್ ವಿರೋಧಿಸುವ ಜನರ ವಿರುದ್ಧ ಕಾನೂನು ಕ್ರಮ
ಶಿವಮೊಗ್ಗ, ಮೇ 11 : ನಮ್ಮ ಊರಿನಲ್ಲಿ, ನಮ್ಮ ಬಡಾವಣೆ ಬಳಿ ಕ್ವಾರಂಟೈನ್ ಸೆಂಟರ್ ಮಾಡುವುದ ಬೇಡ ಎಂದು ವಿರೋಧಿಸುವ ಜನರು ಕಾನೂನು ಕ್ರಮ ಎದುರಿಸಲು ಸಿದ್ಧವಾಗಬೇಕಿದೆ. ಹೌದು ಇನ್ನು ಮುಂದೆ ಜಿಲ್ಲಾಡಳಿತದ ಕರ್ತವ್ಯಕ್ಕೆ ಅಡ್ಡಿಪಡಿಸಿದರೆ ಕ್ರಮ ಕೈಗೊಳ್ಳಲಾಗುತ್ತದೆ.
ಶಿವಮೊಗ್ಗ ಜಿಲ್ಲೆಯಲ್ಲಿ 8 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಸೋಮವಾರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕ್ಯಾಪ್ಟನ್ ಮಣಿವಣ್ಣನ್ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಧಿಕಾರಿಗಳ ಜೊತೆ ಕೊರೊನಾ ನಿಯಂತ್ರಣದ ಕುರಿತು ಸಭೆ ನಡೆಸಿದರು.
"ಜಿಲ್ಲೆಯಲ್ಲಿ ಕ್ವಾರೆಂಟೈನ್ಗೆ ಅಡ್ಡಿಪಡಿಸುವವರ ವಿರುದ್ಧ ಕೇಸು ದಾಖಲು ಮಾಡಿ, ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ತಮ್ಮ ಊರಿನಲ್ಲಿ ಕ್ವಾರೆಂಟೈನ್ ಮಾಡದಂತೆ ಕೆಲವರು ಅಡ್ಡಿಪಡಿಸುತ್ತಿರುವ ಘಟನೆಯನ್ನು ಗಂಭೀರವಾಗಿ ಪರಿಗಣಿಸಬೇಕು" ಎಂದು ಮಣಿವಣ್ಣನ್ ಸೂಚನೆ ನೀಡಿದರು.

ಕಂಟ್ರೋಲ್ ರೂಂಗೆ ಕರೆ ಮಾಡಿ : ಚೆಕ್ಪೋಸ್ಟ್ಗಳಲ್ಲಿ ತಪಾಸಣೆ ಬಿಗಿಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಹೊರ ಜಿಲ್ಲೆ, ರಾಜ್ಯದಿಂದ ಬಂದ ಪ್ರತಿಯೊಬ್ಬರ ಮಾಹಿತಿಯನ್ನೂ ಸಂಗ್ರಹಿಸಲಾಗುತ್ತಿದೆ. ಗ್ರಾಮೀಣ ರಸ್ತೆಗಳ ಮೂಲಕ ಬರುವವರ ಮೇಲೂ ನಿಗಾ ಇಡಬೇಕು ಎಂದು ನಿರ್ದೇಶಿಸಿದರು.
ತಮ್ಮ ಗ್ರಾಮಕ್ಕೆ, ಪಕ್ಕದ ಮನೆಗೆ ಹೊರಗಿನಿಂದ ಜನರು ಇತ್ತೀಚೆಗೆ ಬಂದಿರುವುದು ಕಂಡು ಬಂದರೆ ತಕ್ಷಣ ಜಿಲ್ಲಾಧಿಕಾರಿಗಳ ಕಚೇರಿ ಕಂಟ್ರೋಲ್ ರೂಂ ಸಂಖ್ಯೆ 221010 (08182) ಕರೆ ಮಾಡಿ ಮಾಹಿತಿ ನೀಡಬೇಕು ಎಂದು ಜನರಲ್ಲಿ ಮನವಿ ಮಾಡಿದರು.
ಸಭೆಯಲ್ಲಿ ಉಪಸ್ಥಿತರಿದ್ದ ಜಿಲ್ಲಾಧಿಕಾರಿ ಕೆ. ಬಿ. ಶಿವಕುಮಾರ್, "ಜಿಲ್ಲೆಯಲ್ಲಿ ಆರೋಗ್ಯ ತಪಾಸಣೆ ತೀವ್ರಗೊಳಿಸಲಾಗಿದೆ. ಪ್ರತಿ ದಿನ 150 ಮಂದಿಯ ಗಂಟಲ ದ್ರವವನ್ನು ಸಂಗ್ರಹಿಸಿ ತಪಾಸಣೆ ಮಾಡಲಾಗುತ್ತಿದೆ. ಮೆಗ್ಗಾನ್ ಆಸ್ಪತ್ರೆಯಲ್ಲಿ ಪಿಪಿಇ ಕಿಟ್ ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿದೆ" ಎಂದರು.












Click it and Unblock the Notifications