ಲೋಕಸಭೆ ಚುನಾವಣೆ; ಶಿವಮೊಗ್ಗ ಕ್ಷೇತ್ರದಲ್ಲಿ ಕಾಂಗ್ರೆಸ್ ಲೆಕ್ಕಾಚಾರ
ಶಿವಮೊಗ್ಗ, ಜನವರಿ 30: ಲೋಕಸಭೆ ಚುನಾವಣೆ 2024ಕ್ಕೆ ಶಿವಮೊಗ್ಗ ಬಿಜೆಪಿ ಕಛೇರಿಯನ್ನು ಆರಂಭಿಸುವ ಮೂಲಕ ತಯಾರಿ ಆರಂಭಿಸಿದೆ. ಕ್ಷೇತ್ರದ ಹಾಲಿ ಸಂಸದರು ಬಿಜೆಪಿಯ ಬಿ. ವೈ. ರಾಘವೇಂದ್ರ.
ಶಿವಮೊಗ್ಗ ಬಿಜೆಪಿಯ ಭದ್ರಕೋಟೆ. ಪ್ರತಿ ಬಾರಿಯ ಚುನಾವಣೆಯಲ್ಲಿ ಅಭ್ಯರ್ಥಿ ಬದಲಿಸುವ, ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸುವ ಯಾವ ತಂತ್ರವೂ ಶಿವಮೊಗ್ಗದಲ್ಲಿ ಕಾಂಗ್ರೆಸ್ ಕೈ ಹಿಡಿದಿಲ್ಲ.

ಈ ಬಾರಿಯ ಚುನಾವಣೆ ಕುತೂಹಲಕ್ಕೆ ಕಾರಣವಾಗಿದೆ. ಬಿಜೆಪಿಯ ಬಿ. ಎಸ್. ಯಡಿಯೂರಪ್ಪ, ಕೆ. ಎಸ್. ಈಶ್ವರಪ್ಪ ಚುನಾವಣಾ ರಾಜಕೀಯದಿಂದ ದೂರವಾಗಿದ್ದಾರೆ. ಬಿ. ವೈ. ರಾಘವೇಂದ್ರ ಸಹೋದರ ಬಿ. ವೈ. ವಿಜಯೇಂದ್ರ ಕರ್ನಾಟಕ ಬಿಜೆಪಿಯ ಅಧ್ಯಕ್ಷರು.
2023ರ ವಿಧಾನಸಭೆ ಚುನಾವಣೆಯಲ್ಲಿ ಸೊರಬ, ಭದ್ರಾವತಿ, ಸಾಗರದಲ್ಲಿ ಕಾಂಗ್ರೆಸ್ ಸಾಧಿಸಿದೆ. ಸೊರಬದ ಶಾಸಕ ಮಧು ಬಂಗಾರಪ್ಪ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು. ಆದ್ದರಿಂದ ಚುನಾವಣೆಗೆ ಕಾಂಗ್ರೆಸ್ ತಯಾರಿ ಜೋರಾಗಿದೆ.
ಯಾರು ಕಾಂಗ್ರೆಸ್ ಅಭ್ಯರ್ಥಿ?; 2019ರಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಮಧು ಬಂಗಾರಪ್ಪ ಕಣಕ್ಕಿಳಿದಿದ್ದರು. ಆದರೆ ಬಿ. ವೈ. ರಾಘವೇಂದ್ರ ವಿರುದ್ಧ ಸೋಲು ಕಂಡರು. ಈ ಬಾರಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸುತ್ತಿವೆ. ಶಿವಮೊಗ್ಗ ಗ್ರಾಮಾಂತರದಲ್ಲಿ ಜೆಡಿಎಸ್ ಶಾಸಕರು ಇದ್ದಾರೆ.
ಶಿವಮೊಗ್ಗ ನಗರ, ತೀರ್ಥಹಳ್ಳಿ, ಶಿಕಾರಿಪುರ, ಬೈಂದೂರು ಕ್ಷೇತ್ರದಲ್ಲಿ ಬಿಜೆಪಿ ಶಾಸಕರಿದ್ದಾರೆ. ಸಚಿವರು ಲೋಕಸಭೆ ಚುನಾವಣೆ ಕಣಕ್ಕಿಳಿಯಲು ಹೈಕಮಾಂಡ್ ಸೂಚಿಸಿದರೆ ಈ ಬಾರಿಯೂ ಮಧು ಬಂಗಾರಪ್ಪ ಕಣಕ್ಕಿಳಿಯಬಹುದು ಎಂಬುದು ಸದ್ಯದ ಲೆಕ್ಕಾಚಾರ. ಆದರೆ ಈ ಸಾಧ್ಯತೆ ತೀರಾ ಕಡಿಮೆ ಎನ್ನುತ್ತಾರೆ ಪಕ್ಷದ ನಾಯಕರು.
ವಿಧಾನಸಭೆ ಚುನಾವಣೆಯಲ್ಲಿ ತೀರ್ಥಹಳ್ಳಿಯಲ್ಲಿ ಸೋತ ಕಿಮ್ಮನೆ ರತ್ನಾಕರ್, ನಟ ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್ ಹೆಸರು ಸಹ ಮುಂಚೂಣಿಯಲ್ಲಿದೆ. 2014ರಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಶಿವಮೊಗ್ಗದಲ್ಲಿ ಚುನಾವಣೆ ಎದುರಿಸಿದ್ದ ಗೀತಾ ಶಿವರಾಜ್ ಕುಮಾರ್ 240,636 ಮತಗಳನ್ನು ಪಡೆದು ಬಿ. ಎಸ್. ಯಡಿಯೂರಪ್ಪ ವಿರುದ್ಧ ಸೋಲು ಕಂಡಿದ್ದರು.
ಕಿಮ್ಮನೆ ರತ್ನಾಕರ್ ಒಪ್ಪಿಗೆ ನೀಡದಿದ್ದರೆ ಆಯನೂರು ಮಂಜುನಾಥ್ ಅವರನ್ನು ಪರಿಗಣಿಸಬಹುದು ಎಂಬುದು ಲೆಕ್ಕಾಚಾರ. ವಿಧಾನಸಭೆ ಚುನಾವಣೆ ಸಮಯದಲ್ಲಿ ಬಿಜೆಪಿ ಬಿಟ್ಟು ಜೆಡಿಎಸ್ ಸೇರಿ, ಶಿವಮೊಗ್ಗ ನಗರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದು ಸೋತ ಆಯನೂರು ಮಂಜುನಾಥ್ ಬಳಿಕ ಕಾಂಗ್ರೆಸ್ ಸೇರಿದ್ದಾರೆ.
ಶಿವಮೊಗ್ಗದಲ್ಲಿ ಬಿಜೆಪಿಗೆ ಇರುವ ಪ್ರಭಾವ, ಬಿ. ವೈ. ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿರುವುದು, ಜೆಡಿಎಸ್ ಜೊತೆ ಮೈತ್ರಿ ಪಕ್ಷಕ್ಕೆ ಸಹಾಯಕವಾಗಲಿದೆ. ಆದ್ದರಿಂದ ಕಾಂಗ್ರೆಸ್ ಗೆಲುವಿಗಾಗಿ ಸರಿಯಾದ ತಂತ್ರ ರೂಪಿಸಬೇಕು. ಇಲ್ಲವಾದಲ್ಲಿ ಈ ಬಾರಿಯೂ ಶಿವಮೊಗ್ಗ ಕೈ ತಪ್ಪಲಿದೆ. ಯಾರಿಗೆ ಟಿಕೆಟ್ ನೀಡಬೇಕು? ಎಂದು ಕಾಂಗ್ರೆಸ್ ಆಂತರಿಕ ಸಮೀಕ್ಷೆಯೊಂದನ್ನು ಸಹ ನಡೆಸಿದೆ.
ಕಿಮ್ಮನೆ ರತ್ನಾಕರ್ ವಿಧಾನಸಭೆ ಚುನಾವಣೆಯಲ್ಲಿ ಸೋತಿದ್ದು ಕಾಂಗ್ರೆಸ್ನ ರಾಜ್ಯ ಮಟ್ಟದ ನಾಯಕರಿಗೂ ಸಹ ಶಾಕ್ ನೀಡಿದೆ. ಅವರನ್ನು ಲೋಕಸಭೆ ಚುನಾವಣಾ ಕಣಕ್ಕಿಳಿಸುವ ಕುರಿತು ತೀರ್ಥಹಳ್ಳಿ ಭಾಗದ ನಾಯಕರ ಜೊತೆ ರಾಜ್ಯ ನಾಯಕರು ಸಭೆ ನಡೆಸಿದ್ದಾರೆ ಎಂಬ ಮಾಹಿತಿಯೂ ಇದೆ.
ಮಧು ಬಂಗಾರಪ್ಪ, ಕಿಮ್ಮನೆ ರತ್ನಾಕರ್, ಆಯನೂರು ಮಂಜುನಾಥ್, ಆರ್. ಎಂ. ಮಂಜುನಾಥ ಗೌಡ, ಎಂ. ಶ್ರೀಕಾಂತ್ ಮುಂತಾದ ನಾಯಕರ ಪ್ರಭಾವ ಜಿಲ್ಲೆಯಲ್ಲಿ ಕೆಲಸ ಮಾಡಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಬೇಕಿದೆ.
ವಿಧಾನಸಭೆ ಚುನಾವಣೆಯಲ್ಲಿ ಸೊರಬದಲ್ಲಿ ಸೋತ ಬಿಜೆಪಿಯ ಕುಮಾರ್ ಬಂಗಾರಪ್ಪ ಕಾಂಗ್ರೆಸ್ ಬಂದು ಅಭ್ಯರ್ಥಿಯಾಗಲಿದ್ದಾರೆ? ಎಂಬ ಸುದ್ದಿಗಳು ಆಗಾಗ ಕೇಳಿ ಬರುತ್ತಲೇ ಇವೆ. ಆದರೆ ಯಾವ ನಾಯಕರೂ ಸಹ ಇದನ್ನು ಖಚಿತಪಡಿಸಿಲ್ಲ.
2019ರಲ್ಲಿ ಬಿಜೆಪಿಯ ಬಿ. ವೈ. ರಾಘವೇಂದ್ರ 729,872 ಮತಗಳನ್ನು ಪಡೆದು ಜಯಗಳಿಸಿದ್ದರು. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ 506,512 ಮತಗಳನ್ನು ಪಡೆದಿದ್ದರು. ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಯಾರು? ಎನ್ನುವುದು ಎಲ್ಲರ ಕುತೂಹಲವಾಗಿದೆ.












Click it and Unblock the Notifications