'ಪ್ರಧಾನಿ ಮೋದಿಯೇ ಬಂದು ಟ್ರೈ ಮಾಡಿದ್ರೂ ಸಾಧ್ಯವಿಲ್ಲ': ಕೆಎಸ್ ಈಶ್ವರಪ್ಪ ದೃಢ ನಿರ್ಧಾರ
ಶಿವಮೊಗ್ಗ, ಮಾರ್ಚ್ 22: ಬಿಜೆಪಿಯ ಹಿರಿಯ ಮುಖಂಡ ಕೆ.ಎಸ್.ಈಶ್ವರಪ್ಪ ತಮ್ಮದೆ ಪಕ್ಷದ ವಿರುದ್ಧ ತೊಡೆತಟ್ಟಿದ್ದಾರೆ. ಯಾರ ಮಾತುಗೂ ಬಗ್ಗದ ಅವರು ಶಿವಮೊಗ್ಗದಿಂದ ಸ್ವತಂತ್ರವಾಗಿ ಸ್ಪರ್ಧಿಸಿ ಗೆಲ್ಲುತ್ತೇನೆ ಎಂದು ಸವಾಲು ಹಾಕಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಬಂದು ಮನಸ್ಸು ಬದಲಾಯಿಸುವ ಪ್ರಯತ್ನ ಮಾಡಿದರೂ ಕೂಡ ಸ್ವತಂತ್ರವಾಗಿ ಸ್ಪರ್ಧಿಸಿ ಗೆಲ್ಲುತ್ತೇನೆ ಎಂದಿದ್ದಾರೆ.
ಈ ಹಿಂದೆ ಹಾವೇರಿ-ಗದಗ ಲೋಕಸಭಾ ಕ್ಷೇತ್ರಕ್ಕೆ ತಮ್ಮ ಪುತ್ರನಿಗೆ ಟಿಕೆಟ್ ನಿರಾಕರಿಸಿರುವ ಬಿಜೆಪಿಯ ಹೈಕಮಾಂಡ್ ವಿರುದ್ಧ ತಿರುಗಿ ಬಿದ್ದಿದ್ದಾರೆ ಬಿಜೆಪಿಯ ಹಿರಿಯ ಕೆ.ಎಸ್.ಈಶ್ವರಪ್ಪ. ಶಿವಮೊಗ್ಗದಲ್ಲಿ ಸಾರ್ವಜನಿಕ ಸಭೆಯೊಂದರಲ್ಲಿ ಪ್ರಧಾನಿ ಮೋದಿ ಅವರ ಮನೆಗೆ ಭೇಟಿ ನೀಡಿ ಸ್ವತಂತ್ರವಾಗಿ ಚುನಾವಣೆಗೆ ಸ್ಪರ್ಧಿಸದಂತೆ ಮನವೊಲಿಸಲು ಪ್ರಯತ್ನಿಸಿದರೆ ಏನು ಮಾಡುತ್ತಿರಾ ಎಂದು ಮಹಿಳಾ ಬೆಂಬಲಿಗರು ಪ್ರಶ್ನಿಸಿದ್ದಾರೆ.

ಮಹಿಳಾ ಬೆಂಬಲಿಗರಿಗೆ ಉತ್ತರಿಸಿದ ಮಾಜಿ ಡಿಸಿಎಂ ಕೆಎಸ್ ಈಶ್ವರಪ್ಪ, "ಈ ಬೆಂಬಲಿಗರ ಸಭೆಯಲ್ಲಿ ನಾನು ಹೇಳುತ್ತಿದ್ದೇನೆ. ಮೋದಿ ನನ್ನ ಮನೆಗೆ ಭೇಟಿ ನೀಡಲು ಪ್ರಯತ್ನಿಸಿದರೂ ನಾನು ಅವರನ್ನು ಸತ್ಕಾರ ಮಾಡುವುದಿಲ್ಲ. ನನ್ನ ಬೆಂಬಲಿಗರು ಅಥವಾ ಕಾರ್ಯಕರ್ತರನ್ನು ಅವಮಾನಿಸುವುದಿಲ್ಲ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ. ನಾನು ಯಶಸ್ವಿಯಾಗಿ ಚುನಾವಣೆಗೆ ಸ್ಪರ್ಧಿಸಿ ಗೆಲ್ಲುತ್ತೇನೆ ಎಂಬ ವಿಶ್ವಾಸವಿದೆ" ಎಂದಿದ್ದಾರೆ.
ಇದಕ್ಕೂ ಮುನ್ನ ಮಾತನಾಡಿದ ಅವರು, 40 ವರ್ಷಗಳಿಂದ ಪಕ್ಷಕ್ಕೆ ನಿಷ್ಠೆಯಿಂದ ಸೇವೆ ಸಲ್ಲಿಸಿದ್ದೇನೆ. ಸಿ.ಟಿ.ರವಿ, ಸದಾನಂದಗೌಡ, ನಳಿನ್ ಕುಮಾರ್ ಕಟೀಲ್, ಪ್ರತಾಪ್ ಸಿಂಹ ಕೂಡ ನನ್ನ ಬೆಂಬಲಕ್ಕೆ ನಿಂತಿದ್ದು, ಎಲ್ಲರಿಗೂ ಅನ್ಯಾಯವಾಗಿದೆ ಎಂದು ಈಶ್ವರಪ್ಪ ಕಿಡಿಕಾರಿದ್ದಾರೆ. ಶಿವಮೊಗ್ಗ ಕ್ಷೇತ್ರಕ್ಕೆ ಪಕ್ಷೇತರರಾಗಿ ಸ್ಪರ್ಧಿಸುವಂತೆ ತಮ್ಮ ಬೆಂಬಲಿಗರು ಒತ್ತಾಯಿಸುತ್ತಿದ್ದು, ಪ್ರತಿಭಟನೆಯ ಸಂಕೇತವಾಗಿ ಯಡಿಯೂರಪ್ಪ ಅವರ ಪುತ್ರ ಬಿವೈ ರಾಘವೇಂದ್ರ ವಿರುದ್ಧ ಕಣಕ್ಕಿಳಿದಿರುವುದಾಗಿ ಹೇಳಿಕೊಂಡಿದ್ದಾರೆ.

ಮಾರ್ಚ್ 13 ರಂದು ಬಿಜೆಪಿ ಮೂರು ಮಾಜಿ ಮುಖ್ಯಮಂತ್ರಿಗಳು ಮತ್ತು ನಾಲ್ವರು ಕೇಂದ್ರ ಸಚಿವರು ಸೇರಿದಂತೆ 72 ಲೋಕಸಭಾ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿತು. ರಾಜ್ಯದಲ್ಲಿ ಧಾರವಾಡದಿಂದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ತೇಜಸ್ವಿ ಸೂರ್ಯ, ಹಾವೇರಿಯಿಂದ ಬಸವರಾಜ ಬೊಮ್ಮಾಯಿ ಮತ್ತು ಬೆಂಗಳೂರು ಸೆಂಟ್ರಲ್ನಿಂದ ಪಿಸಿ ಮೋಹನ್ ಅವರನ್ನು ಕಣಕ್ಕಿಳಿಸಿದೆ. ಶಿವಮೊಗ್ಗದಿಂದ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿವೈ ರಾಘವೇಂದ್ರ ಮತ್ತು ತುಮಕೂರಿನಿಂದ ವಿ ಸೋಮಣ್ಣ ಅವರ ಹೆಸರನ್ನು ಬಿಜೆಪಿ ಹೆಸರಿಸಿದೆ. ಅಭ್ಯರ್ಥಿಗಳ ಘೋಷಣೆಯ ನಂತರ ಈಶ್ವರಪ್ಪ ಅವರು ಸ್ವತಂತ್ರವಾಗಿ ಸ್ಪರ್ಧಿಸುವ ನಿರ್ಧಾರ ತೆಗೆದುಕೊಂಡಿದ್ದಾರೆ.
"ಹಾವೇರಿಯಿಂದ ನನ್ನ ಮಗ ಕೆ.ಇ.ಕಾಂತೇಶ್ಗೆ ಟಿಕೆಟ್ ನೀಡುವುದಾಗಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದರು. ಹಾಗಾಗಿ ನನ್ನ ಮಗ ಕಾಂತೇಶ್ನನ್ನು ಪ್ರಚಾರಕ್ಕೆ ಕಳುಹಿಸಿದ್ದೆ. ಆದರೆ ಇಂದು ನನ್ನ ಮಗ ಕೆ.ಇ.ಕಾಂತೇಶ್ಗೆ ಟಿಕೆಟ್ ಸಿಗಲಿಲ್ಲ, ಮತ್ತೆ ಬಿ.ಎಸ್.ಯಡಿಯೂರಪ್ಪ ಪುತ್ರನಿಗೆ ಟಿಕೆಟ್ ಸಿಕ್ಕಿದೆ" ಅವರು ಮಾರ್ಚ್ 13 ರಂದು ಹೇಳಿ ಅಸಮಾಧಾನ ವ್ಯಕ್ತಪಡಿಸಿದ್ದರು.












Click it and Unblock the Notifications