Siddaramaiah: ಮಂತ್ರಿಗಳೆಲ್ಲ ರಾಜೀನಾಮೆ ಕೊಟ್ಟು ನ್ಯಾಯಾಧೀಶರಾಗಿಬಿಡಿ- ಶಾಸಕ ಚನ್ನಬಸಪ್ಪ
ಶಿವಮೊಗ್ಗ ಸೆಪ್ಟೆಂಬರ್ 28: ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲು ಮಾಡಿದ ವಿಚಾರ ಕೈ ಪಾಳಯದಲ್ಲಿ ಸಾಕಷ್ಟು ಗೊಂದಲ ಸೃಷ್ಟಿ ಮಾಡಿದೆ. ಇತ್ತ ಬಿಜೆಪಿ ನಾಯಕರು ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲೇಬೆಕು ಎಂದು ಒತ್ತಾಯಿಸಿದ್ದಾರೆ. ಇದು ಸಿದ್ದರಾಮಯ್ಯ ಅವರನ್ನು ಮತ್ತಷ್ಟು ಇಕ್ಕಟ್ಟಿಗೆ ಸಿಲುಕಿಸಿದೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಚನ್ನಬಸಪ್ಪ ಅವರು ಸಿದ್ದರಾಮಯ್ಯ ತನಿಖೆಗೆ ಸಹಕರಿಸಿ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 'ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ. ಮೂಡಾ ಹಗರಣದ ಬಗ್ಗೆ ತನಿಖೆ ಮಾಡಬೇಕು. ತನಿಖೆ ಮಾಡಿ ತಪಿಸ್ಥರಿಗೆ ಶಿಕ್ಷೆ ನೀಡಬೇಕು ಎಂದು ಕೋರ್ಟ್ ಆದೇಶ ನೀಡಿದೆ' ಎಂದರು.

'ನ್ಯಾಯಾಲಯ ಹೇಳುವ ಮುಂಚೆಯೇ ಹಗರಣದ ಬಗ್ಗೆ ಬಿಜೆಪಿ ಪಕ್ಷ ಪ್ರಾಮಾಣಿಕವಾಗಿ ಜನರಿಗೆ ತಿಳಿಸುವ ಕೆಲಸ ಮಾಡಿತ್ತು. ಆಗ ದಿಕ್ಕಾರದ ಧೋರಣೆ ಕಾಂಗ್ರೆಸ್ ಅನುಸರಿಸಿತ್ತು. 187 ಕೋಟಿ ಹಗರಣ ಆಗಿದ್ರು ಮಂತ್ರಿ ಮೇಲೆ ಎಫ್ ಐ ಆರ್ ದಾಖಲು ಮಾಡಲಿಲ್ಲ.
ಆಗ ಇಡಿ ಅವರು ಎಂಟ್ರಿಯಾಗಿ ಸಚಿವರ ಮೇಲೆ ಎಫ್ಐಆರ್ ದಾಖಲು ಮಾಡಿದ್ರು. ಸಿದ್ದರಾಮಯ್ಯ ಪರ ಮಂತ್ರಿಮಂಡಲ ಅವರು ರಾಜೀನಾಮೆ ಕೊಡಲ್ಲ ಅಂತಿದ್ದಾರೆ' ಎಂದರು.
'ಮಂತ್ರಿಗಳೇ ಜಡ್ಜ್ಗಳಾಗಿ ಬಿಟ್ಟಿದ್ದಾರೆ. ಸಿದ್ದರಾಮಯ್ಯ ಅವರು ಸಿಎಂ ಸ್ಥಾನದಲ್ಲಿದ್ರೆ ತನಿಖೆಗೆ ನ್ಯಾಯ ಸಿಗೋಲ್ಲ. ಹಾಗಾಗಿ ಸಿಎಂ ಸಿದ್ದರಾಮಯ್ಯ ಅವರು ಕೂಡಲೇ ರಾಜೀನಾಮೆ ನೀಡಬೇಕು. ರಾಜೀನಾಮೆ ಕೊಟ್ಟು ಹೊರಗೆ ಬರೋದು ನೈತಿಕತೆಯ ವ್ಯವಸ್ಥೆ. ಕಾಂಗ್ರೆಸ್ ನವರು ಸಿದ್ದರಾಮಯ್ಯ ಏನು ಮಾಡಿಲ್ಲ ಅಂತಿದ್ದಾರೆ. ಮಂತ್ರಿಗಳೆಲ್ಲ ರಾಜೀನಾಮೆ ಕೊಟ್ಟು ನ್ಯಾಯಾಧೀಶರಾಗಿಬಿಡಿ. ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲರ ಮೇಲೆ ನಂಬಿಕೆ ಇಲ್ಲ. ನ್ಯಾಯಾಧೀಶರ ಮೇಲೂ ನಂಬಿಕೆ ಇಲ್ಲ' ಎಂದು ಕಿಡಿ ಕಾರಿದರು.
ಕಳೆದ ದಿನ ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮೈಸೂರಿನಲ್ಲಿ ಎಫ್ಐಆರ್ ದಾಖಲಾಗಿದೆ. ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇತರರ ವಿರುದ್ಧ ಲೋಕಾಯುಕ್ತ ಪೊಲೀಸರು ಶುಕ್ರವಾರ ನ್ಯಾಯಾಲಯದ ಆದೇಶದ ಮೇರೆಗೆ ಎಫ್ಐಆರ್ ದಾಖಲಿಸಿದ್ದಾರೆ. ಅವರ ವಿರುದ್ಧ ತನಿಖೆಗೆ ಜನಪ್ರತಿನಿಧಿಗಳ ನ್ಯಾಯಾಲಯ ಮೈಸೂರು ಲೋಕಾಯುಕ್ತಕ್ಕೆ ಆದೇಶ ನೀಡಿದ ಬೆನ್ನಲ್ಲೇ ಸಿದ್ದರಾಮಯ್ಯನವರ ತವರು ಜಿಲ್ಲೆ ಮೈಸೂರು ಲೋಕಾಯುಕ್ತದಲ್ಲಿ ಎಫ್ಐಆರ್ ದಾಖಲಾಗಿದೆ.
ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶದಂತೆ ಲೋಕಾಯುಕ್ತ ಎಡಿಜಿಪಿ ಮನೀಶ್ ಖರ್ಬೀಕರ್ ಸೂಚನೆ ಮೇರೆಗೆ ಮೈಸೂರು ಲೋಕಾಯುಕ್ತ ಎಸ್ಪಿ ಉದೇಶ್ ನೇತೃತ್ವದಲ್ಲಿ ಎಫ್ಐಆರ್ ದಾಖಲಾಗಿದೆ. ಪ್ರಕರಣದಲ್ಲಿ ಎ1 ಆರೋಪಿ ಸಿದ್ದರಾಮಯ್ಯ ಹಾಗೂ ಎ2 ಆರೋಪಿ ಅವರ ಪತ್ನಿ ಪಾರ್ವತಿ, ಎ3 ಆರೋಪಿ ಮಲ್ಲಿಕಾರ್ಜುನ ಹಾಗೂ ಎ4 ದೇವರಾಜು ಇತರರು ಎಂದು ಎಫ್ಐಆರ್ನಲ್ಲಿ ದಾಖಲಿಸಲಾಗಿದೆ.
ನ್ಯಾಯಾಲಯ ಸೂಚಿಸಿದ ಸೆಕ್ಷನ್ಗಳಡಿ ಎಫ್ಐಆರ್ ದಾಖಲಾಗಿದೆ. ಸಿಆರ್ಪಿಸಿ ಸೆಕ್ಷನ್ 156(3)ರ ಅಡಿ ಎಫ್ಐಆರ್ ದಾಖಲಾಗಿದ್ದು, ಐಪಿಸಿ ಸೆಕ್ಷನ್ 120b, 166, 403, 406, 420, 426, 465, 468, 340, 315ರ ಅಡಿ ಕೇಸ್ ದಾಖಲಾಗಿದೆ. ಅಷ್ಟೇ ಅಲ್ಲದೇ ಭ್ರಷ್ಟಾಚಾರ ನಿಗ್ರಹ ಕಾಯ್ದೆ ಸೆಕ್ಷನ್ 9, 13ರ ಅಡಿ ಎಫ್ಐಆರ್ ಆಗಿದೆ. ಇನ್ನು ಬೇನಾಮಿ ಆಸ್ತಿ ನಿಷೇಧ ಕಾಯ್ದೆ ಸೆಕ್ಷನ್ 53 ಮತ್ತು 54, ಕರ್ನಾಟಕ ಭೂಕಬಳಿಕೆ ನಿಷೇಧ ಕಾಯ್ದೆ ಸೆಕ್ಷನ್ 3, 4ರ ಅಡಿ ಎಫ್ಐಆರ್ ದಾಖಲಿಸಲಾಗಿದೆ.












Click it and Unblock the Notifications