ಶಿವಮೊಗ್ಗ: ಜಿಲ್ಲಾಡಳಿತದ ವಿರುದ್ಧ ಪ್ರತಿಭಟನೆ ಕೈ ಬಿಟ್ಟ ಆಯನೂರು ಮಂಜುನಾಥ್
ಶಿವಮೊಗ್ಗ, ಏಪ್ರಿಲ್ 30: ಜನರ ಆರೋಗ್ಯಕ್ಕಾಗಿ ಸ್ವಚ್ಛವಾತಾವರಣಕ್ಕೆ ಗಮನ ಕೊಡದ ಆರೋಪದ ಮೇಲೆ ಶಿವಮೊಗ್ಗ ಜಿಲ್ಲಾಡಳಿತದ ವಿರುದ್ಧ ಮೇ.1 ರಂದು ಹಮ್ಮಿಕೊಂಡಿದ್ದ ಪ್ರತಿಭಟನೆಯನ್ನು ಮೇಲ್ಮನೆ ಬಿಜೆಪಿ ಸದಸ್ಯ ಆಯನೂರು ಮಂಜುನಾಥ್ ತಾತ್ಕಾಲಿಕವಾಗಿ ಮುಂದೂಡಿದ್ದಾರೆ.
ಕೆಲವು ದಿನಗಳ ಹಿಂದೆ ಶಿವಮೊಗ್ಗ ಗ್ರಾಮಾಂತರ ಪ್ರದೇಶದ ತುಂಗಾ ಎಡದಂಡೆ ನಾಲೆಯಲ್ಲಿ ನಗರದ ಜನ ಬಳಸಿ ನಾಲೆಗೆ ಎಸೆದಿರುವ ವಸ್ತುಗಳು , ಆಸ್ಪತ್ರೆಯಲ್ಲಿ ಬಳಸಿದ ತ್ಯಾಜ್ಯಗಳು , ಕೊಳೆತು ಹೋದ ಪ್ರಾಣಿಗಳು, ಮುಂತಾದ ತ್ಯಾಜ್ಯಗಳು ಗ್ರಾಮಾಂತರ ನಾಲೆಯಲ್ಲಿ ಸಿಕ್ಕಿಹಾಕಿಕೊಂಡು ಕೊಳೆತು ವಾಸನೆ ಬರುತ್ತಿದ್ದು ಗ್ರಾಮಾಂತರ ಜನರು ಮೂಗು ಮುಚ್ಚಿಕೊಂಡು ಹೋಗುವ ಪರಿಸ್ಥಿತಿ ಎದುರಾಗಿತ್ತು.
ಈ ಸಂಬಂಧ ಸಾರ್ವಜನಿಕರಿಂದ ದೂರುಗಳು ಕೇಳಿಬಂದ ಹಿನ್ನಲೆಯಲ್ಲಿ ಮೇಲ್ಮನೆ ಸದಸ್ಯ ಆಯನೂರು ಮಂಜುನಾಥ್ ಖುದ್ದು ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಬಳಿಕ ಆಯನೂರು ಮಂಜುನಾಥ್ ಈ ಬಗ್ಗೆ ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದರು. ಆದರೆ, ಕಳೆದ ಬುಧವಾರವರದವರೆಗೂ ಜಿಲ್ಲಾಡಳಿತ ಯಾವುದೇ ಸೂಕ್ತ ಕ್ರಮಕೈಗೊಂಡಿರಲಿಲ್ಲ. ಹೀಗಾಗಿ ಜಿಲ್ಲಾಡಳಿತವಾಗಲಿ, ನೀರಾವರಿ ಇಲಾಖೆಯಾಗಲಿ ಈ ಬಗ್ಗೆ ಗಮನ ಹರಿಸದೇ ಇರುವುದರಿಂದ ಮೇ. 1ರಂದು ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಪ್ರತಿಭಟನೆ ನಡೆಸುವುದಾಗಿ ಗುಟುರು ಹಾಕಿದ್ದರು.
ಇದನ್ನು ಗಮನಿಸಿದ ಜಿಲ್ಲಾಡಳಿತ ಕೊನೆಗೂ ಎಚ್ಚೆತ್ತುಕೊಂಡಿದೆ. ಜಿಲ್ಲಾಧಿಕಾರಿಗಳು ಹಾಗೂ ನೀರಾವರಿ ಇಲಾಖೆ ಅಧಿಕಾರಿಗಳು, ಆಯುಕ್ತರು , ಮಹಾನಗರ ಪಾಲಿಕೆ ಸೂಕ್ತ ಕ್ರಮ ಕೈಗೊಂಡು ನಾಲೆಯಲ್ಲಿ ಬಿದ್ದಿರುವ ತ್ಯಾಜ್ಯಗಳನ್ನು ತೆರವುಗೊಳಿಸುವುದಾಗಿ ಆಯನೂರು ಮಂಜುನಾಥ್ಗೆ ಭರವಸೆ ನೀಡಿ ಪತ್ರ ಬರೆದಿದ್ದಾರೆ.
ಜಿಲ್ಲಾಧಿಕಾರಿಗಳ ಭರವಸೆ ಹಿನ್ನಲೆಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯನ್ನು ಆಯನೂರು ಮಂಜುನಾಥ್ ತಾತ್ಕಾಲಿಕವಾಗಿ ಹಿಂಪಡೆದಿದ್ದಾರೆ. ಜಿಲ್ಲಾಡಳಿತದ ಕಾರ್ಯವೈಖರಿ, ಸಮಸ್ಯೆಗೆ ಹೇಗೆ ಸ್ಪಂದಿಸುತ್ತದೆ ಎನ್ನುವುದನ್ನು ನೋಡಿಕೊಂಡು ಮುಂದಿನ ಹೆಜ್ಜೆ ಇಡುವುದಾಗಿ ಆಯನೂರು ಮಂಜುನಾಥ್ ಸ್ಪಷ್ಟಪಡಿಸಿದ್ದಾರೆ.