ಶಿವಮೊಗ್ಗದಲ್ಲಿ ಕೋಮು ಗಲಭೆ; ಆಸ್ಪತ್ರೆಗೆ ಸಂಸದ, ಸಚಿವರ ಭೇಟಿ
ಶಿವಮೊಗ್ಗ, ಡಿಸೆಂಬರ್ 04: ಬಜರಂಗದಳ ಸಹ ಸಂಚಾಲಕ ನಾಗೇಶ್ ಮೇಲೆ ಗುರುವಾರ ಹಲ್ಲೆ ನಡೆದಿದ್ದು, ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಹಾಗೂ ಸಚಿವ ಕೆ.ಎಸ್.ಈಶ್ವರಪ್ಪ ಶುಕ್ರವಾರ ಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು.
ಹಲ್ಲೆಯನ್ನು ಖಂಡಿಸಿರುವ ಸಂಸದ ಬಿ.ವೈ. ರಾಘವೇಂದ್ರ, ಈ ಘಟನೆ ಬಗ್ಗೆ ಪೊಲೀಸರಿಂದ ಮಾಹಿತಿ ಪಡೆದರು. ಹಲ್ಲೆಗೆ ಕಾರಣರಾದವರನ್ನು ಬಂಧಿಸಿ ಕಠಿಣ ಕ್ರಮ ತೆಗೆದುಕೊಳ್ಳುವ ಭರವಸೆ ನೀಡಿದರು. ಜೊತೆಗೆ ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಸದ್ಯ ತೆಗೆದುಕೊಂಡಿರುವ ಕ್ರಮಗಳ ಕುರಿತು ಮಾಹಿತಿ ಪಡೆದುಕೊಂಡರು.
ಶಿವಮೊಗ್ಗ ನಗರದಾದ್ಯಂತ ಬಿಗಿ ಬಂದೋಬಸ್ತ್; ಗಲಭೆ ಸಂಬಂಧ 62 ಮಂದಿ ಬಂಧನ
ಈ ಘಟನೆ ಕುರಿತು ಪ್ರತಿಕ್ರಿಯಿಸಿರುವ ಸಚಿವ ಈಶ್ವರಪ್ಪ, ಬಜರಂಗದಳ ಸಹ ಸಂಚಾಲಕನ ಮೇಲೆ ನಡೆದಿರುವ ಹಲ್ಲೆ ಪೂರ್ವ ನಿಯೋಜಿತ ಕೃತ್ಯ. ಸರ್ಕಾರ ಅವರ ವಿರುದ್ಧ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದರು.
"ನಾಗೇಶ್ ಅವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿದೆ. ಗೂಂಡಾಗಿರಿಯನ್ನು ನಾವು ಸಹಿಸುವುದಿಲ್ಲ. ಒಬ್ಬನ ಮೇಲೆ ನಾಲ್ಕೈದು ಗೂಂಡಾಗಳು ಹಲ್ಲೆ ನಡೆಸಿದರೆ ಅದು ದೌರ್ಜನ್ಯವೆಸಗಿದಂತೆ. ಪೊಲೀಸ್ ಇಲಾಖೆ ಶೀಘ್ರದಲ್ಲಿಯೇ ನಾಗೇಶ್ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿಗಳನ್ನು ಬಂಧಿಸಲಿದೆ" ಎಂದು ಹೇಳಿದರು.
ಗುರುವಾರ ಬೆಳಿಗ್ಗೆ ಬಜರಂಗದಳ ಸಹ ಸಂಚಾಲಕ ನಾಗೇಶ್ ಮೇಲೆ ಕೆಲವು ದುಷ್ಕರ್ಮಿಗಳು ಹಲ್ಲೆ ನಡೆಸಿದ್ದರು. ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವಿಷಯ ಹರಡುತ್ತಿದ್ದಂತೆಯೇ ಎರಡು ಕೋಮುಗಳ ನಡುವೆ ಗಲಭೆ ಉಂಟಾಗಿ ನಗರದ ಕೆಲವೆಡೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು. ಪರಿಸ್ಥಿತಿ ನಿಯಂತ್ರಿಸಲು ಡಿ.5ರವರೆಗೂ ಶಿವಮೊಗ್ಗ ನಗರದಲ್ಲಿ ನಿಷೇಧಾಜ್ಞೆಯನ್ನು ಹೊರಡಿಸಲಾಗಿದೆ.