ರಾಜ್ಯದ 60 ಕಡೆ 'ನಮ್ಮ ಕಾಂಗ್ರೆಸ್' ಅಭ್ಯರ್ಥಿಗಳು ಕಣಕ್ಕೆ: ವರ್ತೂರು ಪ್ರಕಾಶ್
ಶಿವಮೊಗ್ಗ, ಏಪ್ರಿಲ್ 9: ಮುಂದಿನ ಹೊಸ ಸರ್ಕಾರ ರಚನೆಯಲ್ಲಿ 'ನಮ್ಮ ಕಾಂಗ್ರೆಸ್' ಪಕ್ಷ ನಿರ್ಣಾಯಕ ಪಾತ್ರ ವಹಿಸಲಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ವರ್ತೂರು ಪ್ರಕಾಶ್ ಹೇಳಿದರು.
ಶಿವಮೊಗ್ಗದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, "ಗೆಲುವ ಸಾಧಿಸುವ ಕ್ಷೇತ್ರಗಳನ್ನು ಗುರುತಿಸಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು. ವಿಧಾನಸಭಾ ಚುನಾವಣೆಯಲ್ಲಿ ಕನಿಷ್ಟ 15 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವುದರಿಂದ ಹೊಸ ಸರ್ಕಾರ ರಚನೆಯಲ್ಲಿ ಪಕ್ಷ ನಿರ್ಣಾಯಕ ಪಾತ್ರ ವಹಿಸಲಿದೆ ಎಂದರು. ಯಾವುದೇ ಒಂದು ಪಕ್ಷ ಅಧಿಕಾರಕ್ಕೆ ಬರುವುದಿಲ್ಲ. ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ. ನಮ್ಮ ಕಾಂಗ್ರೆಸ್ ತನ್ನ ಸಾಮರ್ಥ್ಯ ಏನೆಂಬುದನ್ನು ತೋರಿಸಲಿದೆ," ಎಂದರು.
ಶಿವಮೊಗ್ಗ ವಿಧಾನಸಭಾ ಕ್ಷೇತ್ರಗಳ ಪರಿಚಯ
"ಸಾಮಾಜಿಕ ನ್ಯಾಯ ಕೊಡುವುದರಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಎಡವಿದ್ದಾರೆ ಹಾಗೂ ಅಲ್ಪಸಂಖ್ಯಾತರಿಗೆ ಮತ್ತು ಅಹಿಂದ ವರ್ಗದವರಿಗೆ ಸ್ಥಾನಮಾನ ನೀಡದೆ ವಂಚಿಸಿದ್ದಾರೆ," ಎಂದು ಆರೋಪಿಸಿದರು.

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಾಜ್ಯದ ಜನತೆಗೆ ತಪ್ಪು ಸಂದೇಶವನ್ನು ನೀಡುತ್ತಿದ್ದಾರೆ. ಅಹಿಂದ ವರ್ಗದವರನ್ನು ಅಭಿವೃದ್ಧಿಪಡಿಸುತ್ತೇನೆಂದು ಹೇಳಿಕೊಂಡು ಮುಖ್ಯಮಂತ್ರಿ ಸ್ಥಾನ ಪಡೆದು ಅಹಿಂದ ವರ್ಗದವರನ್ನು ವಂಚಿಸಿದ್ದಾರೆ ಎಂದು ಅವರು ದೂರಿದರು.
ಸಾಮಾಜಿಕ ನ್ಯಾಯ ದೊರಕಿಸಿಕೊಡುವುದರಲ್ಲಿ ವಿಫಲರಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಸಿವು ಮುಕ್ತ ರಾಜ್ಯವನ್ನಾಗಿ ಮಾಡಲಿಲ್ಲ. ಉತ್ತರ ಕರ್ನಾಟಕ ಭಾಗದಲ್ಲಿ ಜನ ಗುಳೆ ಹೋಗುತ್ತಿದ್ದಾರೆ. ಹಸಿವು ಮುಕ್ತ ಎನ್ನುತ್ತಾ ಕೇವಲ ಪ್ರಚಾರ ಪಡೆದಿದ್ದಾರೆ ಎಂದು ಆರೋಪಿಸಿದರು.
ಪ್ರತಿಯೊಂದು ಯೋಜನೆಯಲ್ಲೂ ಮುಖ್ಯಮಂತ್ರಿ ಸಿದ್ದರಾಮಯ್ಯ ಕಮಿಷನ್ ಪಡೆದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ 10 ಪರ್ಸೆಂಟ್ ಸರ್ಕಾರ ಎಂದು ಟೀಕಿಸಿರುವುದರಲ್ಲಿ ಸತ್ಯವಿದೆ. ರಾಜ್ಯದ ಅತ್ಯಂತ ಭ್ರಷ್ಟ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಲ್ಲ. ಅದು ಸಿದ್ದರಾಮಯ್ಯ ಎಂದು ವಾಗ್ದಾಳಿ ನಡೆಸಿದರು.

ಪ್ರತಿಯೊಂದರಲ್ಲೂ ಕಮೀಷನ್ ಪಡೆದಿದ್ದರೂ ಸಿದ್ದರಾಮಯ್ಯ ಜಾಣತನ ತೋರಿದ್ದಾರೆ. ಭ್ರಷ್ಟಾಚಾರ ನಡೆಸಿರುವುದಕ್ಕೆ ಸಾಕ್ಷಿಯನ್ನೇ ಬಿಟ್ಟಿಲ್ಲ ಎಂದು ವ್ಯಂಗ್ಯವಾಡಿದರು.
ಕಳೆದ ಚುನಾವಣೆಯಲ್ಲಿ ಸಿದ್ದರಾಮಯ್ಯ ನೀಡಿದ ಆಶ್ವಾಸನೆಯಲ್ಲಿ ಕಾಂಗ್ರೆಸ್ಗೆ ಮತ ನೀಡಿದ್ದರು. ಆದರೆ ಇದೀಗ ಯಾಮಾರಿಸಿರುವುದು ಗೊತ್ತಾಗಿದೆ. ಈ ಬಾರಿ ಕುರುಬ ಸಮಾಜದವರು ಮುಖ್ಯಮಂತ್ರಿ ಸಿದ್ದರಾಮಯ್ಯ ಮುಖ ನೋಡಿ ಮತ ನೀಡುವುದಿಲ್ಲ ಎಂದರು.
ಕೋಮು ಗಲಭೆಯನ್ನು ಸೃಷ್ಟಿಸಿ ಮತ ಕೇಳುವ ಬಿಜೆಪಿ ಈ ಹಿಂದೆ ರಾಜ್ಯದಲ್ಲಿ ಅಧಿಕಾರ ನಡೆಸಿ ಅಭಿವೃದ್ಧಿಯನ್ನು ಕಡೆಗಣಿಸಿದೆ. ಈ ಎರಡೂ ರಾಷ್ಟೀಯ ಪಕ್ಷಗಳನ್ನು ಮತದಾರರು ತಿರಸ್ಕರಿಸಬೇಕು ಎಂದರು.
ಕೆ.ಎಸ್.ಈಶ್ವರಪ್ಪ ಅವರಿಗೆ ಶಿವಮೊಗ್ಗ ನಗರ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ. ಆದರೆ ರಾಜಕೀಯ ತಂತ್ರಗಾರಿಕೆಯಿಂದ ಬಿ.ಎಸ್. ಯಡಿಯೂರಪ್ಪ ಅವರು ಈಶ್ವರಪ್ಪ ಅವರನ್ನು ಸೋಲಿಸುವುದರಲ್ಲಿ ಅನುಮಾನವಿಲ್ಲ ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದರು.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಬಿಜೆಪಿ ಅಭ್ಯರ್ಥಿಗಳ ಮೊದಲ ಅಧಿಕೃತ ಪಟ್ಟಿ ಪ್ರಕಟ
ಅಹಿಂದ ವರ್ಗದವರು ಹಾಗೂ ಅಲ್ಪಸಂಖ್ಯಾತರು ನಮ್ಮ ಪಕ್ಷವನ್ನು ಬೆಂಬಲಿಸಬೇಕೆಂದು ಕೋರಿದ ಅವರು, ಮುಂದಿನ ವಾರ 50ರಿಂದ 60 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಿಸಲಾಗುವುದು ಎಂದರು.
ನಂಬರ್ ಒನ್ ಅತಿ ಭ್ರಷ್ಟ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಎಂದು ಟೀಕಿಸಿದ ಅವರು ಶಿವಮೊಗ್ಗ ನಗರ ಕ್ಷೇತ್ರಕ್ಕೆ ಪಕ್ಷದ ಜಿಲ್ಲಾಧ್ಯಕ್ಷ ಎಂ.ಸಮೀವುಲ್ಲಾ ಅವರಿಗೆ ಟಿಕೆಟ್ ನೀಡಲಾಗಿದ್ದು, ಅವರು ಗೆಲ್ಲುವ ವಿಶ್ವಾಸವಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಸಾಯಿದ್ ಪಾಶ, ಎಂ.ಸಮೀವುಲ್ಲಾ, ಪ್ರಶಾಂತ್ ರಾಯ್, ಫಾರೂಕ್ ಶರೀಫ್, ಸೈಯದ್ ಮಸೂದ್, ರಾಘವೇಂದ್ರ ಇನ್ನಿತರರು ಉಪಸ್ಥಿತರಿದ್ದರು.












Click it and Unblock the Notifications