ಶಿವಮೊಗ್ಗ; ಸೈಟ್ ಕೊಳ್ಳುವವರಿಗೆ ಸಿಹಿಸುದ್ದಿ, ಹೊಸ ಬಡಾವಣೆಯ ವಿವರ
ಶಿವಮೊಗ್ಗ, ಡಿಸೆಂಬರ್ 21: ಶಿವಮೊಗ್ಗ ನಗರದ ಹೊರ ವಲಯದಲ್ಲಿ ಹೂಡಿಕೆ ಮಾಡಬೇಕು, ಸೈಟು ಖರೀದಿ ಮಾಡಬೇಕು ಎಂದು ಚಿಂತನೆ ನಡೆಸುತ್ತಿರುವ ಜನರಿಗೆ ಸಿಹಿಸುದ್ದಿಯೊಂದಿದೆ. ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರ (ಸೂಡಾ) ನೂತನ ಬಡಾವಣೆಯೊಂದನ್ನು ನಿರ್ಮಾಣ ಮಾಡಲಿದೆ. ಆದರೆ ಈ ಬಡಾವಣೆಗಾಗಿ ರೈತರನ್ನು ಒಕ್ಕಲೆಬ್ಬಿಸುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
ಶಿವಮೊಗ್ಗ ತಾಲೂಕು ಸೋಗಾನೆ ಗ್ರಾಮದಲ್ಲಿ ಶಿವಮೊಗ್ಗ -ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ನಿರ್ಮಾಣ ಮಾಡುತ್ತಿರುವ ಬಡಾವಣೆ ಕುರಿತು ಸೂಡಾ ಅಧ್ಯಕ್ಷರಾದ ಹೆಚ್. ಎಸ್. ಸುಂದರೇಶ್ ಮಾಹಿತಿ ನೀಡಿದರು. ಸೂಡಾ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಅವರು ಮಾತನಾಡಿದರು.

ಶಿವಮೊಗ್ಗ ತಾಲೂಕು ಸೋಗಾನೆ ಗ್ರಾಮದ ಸರ್ವೆ ನಂಬರ್ 156ರ ಪ್ರದೇಶದಲ್ಲಿ ಸೂಡಾ ಲೇಔಟ್ ನಿರ್ಮಿಸುವ ಕುರಿತು ರೈತರೊಂದಿಗೆ ಅಧ್ಯಕ್ಷರು ಚರ್ಚಿಸಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಬಲ್ಕೀಶ್ ಬಾನು, ಸೂಡಾ ಸದಸ್ಯರು, ಸೂಡಾ ಆಯುಕ್ತರಾದ ವಿಶ್ವನಾಥ ಮುದಜ್ಜಿ, ತಹಶೀಲ್ದಾರ್ ರಾಜೀವ್, ರೈತ ಮುಖಂಡರು ಉಪಸ್ಥಿತರಿದ್ದರು.
ಸೂಡಾ ಅಧ್ಯಕ್ಷರು ಹೇಳಿದ್ದೇನು?: ಸಭೆಯಲ್ಲಿ ಮಾತನಾಡಿದ ಹೆಚ್. ಎಸ್. ಸುಂದರೇಶ್, "ಸೋಗಾನೆಯಲ್ಲಿ ಸೂಡಾ ವತಿಯಿಂದ ಅಭಿವೃದ್ದಿಪಡಿಸಲು ಉದ್ದೇಶಿಸಿರುವ ಲೇಔಟ್ ಕುರಿತು ರೈತರಲ್ಲಿ ತಪ್ಪು ತಿಳುವಳಿಕೆ ನಿವಾರಣೆ ಆಗಬೇಕು. ಅಲ್ಲಿ ಯಾವುದೇ ಬಗರ್ ಹುಕುಂ ರೈತರನ್ನೂ ಒಕ್ಕಲೆಬ್ಬಿಸುವುದಿಲ್ಲ" ಎಂದು ತಿಳಿಸಿದರು.
"ಸೋಗಾನೆಯಲ್ಲಿ ಸಾರ್ವಜನಿಕರ ಹಿತಾಸಕ್ತಿಗಾಗಿ ಸೂಡಾ ವತಿಯಿಂದ ನಿವೇಶನ ನಿರ್ಮಿಸಲು ಜಿಲ್ಲಾಧಿಕಾರಿಗಳು ಮತ್ತು ಎಸಿ ಯವರಿಗೆ ಪತ್ರೆ ಬರೆದು 200 ಎಕರೆ ಜಾಗ ಮಂಜೂರು ಮಾಡುವಂತೆ ಮನವಿ ಮಾಡಲಾಗಿತ್ತು. ಅದರೆಂತೆ ನಿವೇಶನ ನಿರ್ಮಿಸಲು ಸರ್ವೇ ನಂಬರ್ 156ರ 96 ಎಕರೆ ಜಾಗ ಮಂಜೂರಾಗಿದೆ. ಈಗಾಗಲೇ ಅಲ್ಲಿ 600 ಎಕರೆ ಕೆಐಎಡಿಬಿ ವಶದಲ್ಲಿದೆ" ಎಂದು ಹೇಳಿದರು.
"ಉದ್ದೇಶಿತ ಪ್ರದೇಶದಲ್ಲಿ ಪ್ರಸ್ತುತ 49 ಎಕರೆ ಜಾಗದಲ್ಲಿ ರೈತರು ಸಾಗುವಳಿ ಮಾಡುತ್ತಿದ್ದಾರೆ. 2 ಎಕರೆ ಸ್ಮಶಾನ ಜಾಗವಿದೆ ಮತ್ತೆ ಕೆಲ ರೈತರು ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಆದ್ದರಿಂದ ಎಷ್ಟು ಜನ ರೈತರು ಬಗರ್ಹುಕುಂ ಅರ್ಜಿಗಳನ್ನು ಸಲ್ಲಿಸಿದ್ದಾರೆ?, ತೋಟ-ಗದ್ದೆ ಎಷ್ಟಿದೆ? ಎಂದು ಸರ್ವೇ ಕಾರ್ಯ ಮಾಡಿದ ನಂತರವೇ ಹಾಗೂ ಸಾಧಕ ಬಾಧಕಗಳನ್ನು ನೋಡಿ, ಅಗತ್ಯ ಕ್ರಮ ಕೈಗೊಂಡು ರೈತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ" ಎಂದು ವಿವರಣೆ ನೀಡಿದರು.
ಈ ಭಾಗದ ರೈತರ ಬೇಡಿಕೆಯಂತೆ ರೈತರಿಗೆ ಬಗರ್ ಹುಕುಂ ಸಮಿತಿಯಿಂದ ಹಕ್ಕು ಪತ್ರ ಕೊಡಿಸಲು ಸಹಕಾರ ನೀಡಲಾಗುತ್ತದೆ. ಹಕ್ಕುಪತ್ರ ಪಡೆದ ನಂತರ ಸದರಿ ಭೂಮಿಯನ್ನು ಖಾಸಗಿಯಾಗಿ ಯಾರಿಗೇ ಆಗಲಿ 20 ವರ್ಷ ಪರಭಾರೆ ಮಾಡಲು ಬರುವುದಿಲ್ಲ. ಆದರೆ ಸರ್ಕಾರಿ ಉದ್ದೇಶಕ್ಕೆ ನೀಡಬಹುದಾಗಿದ್ದು ಹಾಗೆ ರೈತರು ನೀಡಿದ ಭೂಮಿಯನ್ನು 50:50 ಅನುಪಾತದಲ್ಲಿ ಪಡೆಯಲಾಗುವುದು. ಇದರಿಂದ ರೈತರಿಗೆ ಸಹ ಅನುಕೂಲವಾಗಲಿದೆ.
ಸಭೆಯಲ್ಲಿ ಮಾತನಾಡಿದ ರೈತರು, ಈ ಹಿಂದೆ ವಿಮಾನ ನಿಲ್ದಾಣಕ್ಕೆ ಭೂಮಿ ನೀಡಿದ ರೈತರಿಗೆ ಸರಿಯಾದ ನ್ಯಾಯ ಒದಗಿಲ್ಲ. ಇದೀಗ ಸೂಡಾ ಲೇಔಟ್ ಮಾಡಲು ಇಲ್ಲಿ ಭೂಮಿ ಪಡೆಯಲು ಮುಂದಾಗಿದ್ದಾರೆ. ಮೊದಲು ಅರ್ಜಿ ಸಲ್ಲಿಸಿರುವ ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕು ಪತ್ರ ನೀಡಿ, ನಂತರ ಭೂಮಿ ಪಡೆಯುವ ಪ್ರಕ್ರಿಯೆ ಮಾಡುವಂತೆ ಮನವಿ ಸಲ್ಲಿಸಿದರು.
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕಿ ಶಾರದಾ ಪೂರ್ಯನಾಯ್ಕ್ ಮಾತನಾಡಿ, "ಎಷ್ಟು ಜನ ರೈತರು ಅಲ್ಲಿ ಸಾಗುವಳಿ ಮಾಡುತ್ತಿದ್ದಾರೆ, ಬಗರ್ ಹುಕುಂ ಅಡಿಯಲ್ಲಿ ಎಷ್ಟು ಜನ ರೈತರು ಅರ್ಜಿ ಸಲ್ಲಿಸಿದ್ದಾರೆ ಎಂಬ ನಿಖರ ಮಾಹಿತಿಯೊಂದಿಗೆ ಸಮಿತಿಗೆ ಮಂಡಿಸಿರಿ. ಬಡವರು, ಎಸ್ಸಿ/ ಎಸ್ಟಿ ಸೇರಿದಂತೆ ಅರ್ಹರಿಗೆ ಮಾತ್ರ ಹಕ್ಕುಪತ್ರ ನೀಡಲಾಗುವುದು. ಹೀಗೆ ಹಕ್ಕುಪತ್ರ ಪಡೆದವರು ಬೇರೆಯವರಿಗೆ ಪರಭಾರೆ ಮಾಡುವಂತಿಲ್ಲ. ಒಂದು ವೇಳೆ ಮಾಡಿದಲ್ಲಿ ಹಕ್ಕುಪತ್ರವನ್ನು ರದ್ದುಪಡಿಸಲಾಗುವುದು. ಸರ್ಕಾರಿ ಉದ್ದೇಶಕ್ಕೆ ಭೂಮಿ ನೀಡಬಹುದು" ಎಂದರು.
ಉಪ ವಿಭಾಗಾಧಿಕಾರಿ ಸತ್ಯನಾರಾಯಣ್ ಮಾತನಾಡಿ, "ಸೋಗಾನೆಯ ಉದ್ದೇಶಿತ ಪ್ರದೇಶದಲ್ಲಿ 50 ರಿಂದ 54 ರೈತರು ಸಾಗುವಳಿ ಮಾಡುತ್ತಿದ್ದು 30 ಎಕರೆ ತೋಟವಿದೆ. ರೈತರ ರಿಟ್ ಪಿಟಿಷನ್ ಪೆಂಡಿಗ್ ಇವೆ. ಬಗರ್ ಹುಕುಂ ಸಾಗುವಳಿದಾರರು ಎಷ್ಟು ಜನ ಹಕ್ಕುಪತ್ರಕ್ಕೆ ಅರ್ಜಿ ಸಲ್ಲಿಸಿದ್ದಾರೆ? ಎಂದು ಪರಿಶೀಲನೆ ನಡೆಸಬೇಕು. ಎಷ್ಟು ಗದ್ದೆ, ತೋಟ, ಕರಾಬು ಇದೆ ಎಂದು ಸರ್ವೇ ಕಾರ್ಯ ನಡೆಸಬೇಕು" ಎಂದು ಹೇಳಿದರು.
ಶಿವಮೊಗ್ಗ ತಾಲೂಕು ಸೋಗಾನೆ ಗ್ರಾಮದಲ್ಲಿಯೇ ಶಿವಮೊಗ್ಗ ವಿಮಾನ ನಿಲ್ದಾಣವಿದೆ. ವಿಮಾನ ನಿಲ್ದಾಣಕ್ಕೆ ಈಗಾಗಲೇ ಹಲವು ರೈತರು ಭೂಮಿಯನ್ನು ಕಳೆದುಕೊಂಡಿದ್ದಾರೆ. ಈಗ ಸೂಡಾ ಸಹ ಈ ಗ್ರಾಮದಲ್ಲಿ ಹೊಸ ಬಡಾವಣೆ ನಿರ್ಮಾಣ ಮಾಡಿ, ಸೈಟುಗಳನ್ನು ಮಾರಾಟ ಮಾಡಲು ಮುಂದಾಗಿದೆ.












Click it and Unblock the Notifications