ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ, ಬಿಗ್ ಅಪ್ಡೇಟ್
ಶಿವಮೊಗ್ಗ, ನವೆಂಬರ್ 27: ಕರ್ನಾಟಕದಲ್ಲಿ ಎಲ್ಲಾ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಸಂಗ್ರಹದಲ್ಲಿ ಮಹತ್ವದ ಬದಲಾವಣೆಯಾಗಲಿದೆ. ಇದಕ್ಕಾಗಿ ಹೊಸ ಕಾನೂನು ಜಾರಿಗೆ ಬರಲಿದೆ. ಶೀಘ್ರದಲ್ಲಿ ರಾಜ್ಯದಾದ್ಯಂತ ಏಕರೀತಿಯ ತೆರಿಗೆ ವ್ಯವಸ್ಥೆ ಜಾರಿಗೊಳಿಸುವ ಕುರಿತು ಪೌರಾಡಳಿತ ಖಾತೆ ಸಚಿವ ರಹೀಂ ಖಾನ್ ಸುಳಿವು ನೀಡಿದ್ದಾರೆ.
ಶಿವಮೊಗ್ಗ ಮಹಾನಗರ ಪಾಲಿಕೆಯ ಪರಿಷತ್ ಸಭಾಂಗಣದಲ್ಲಿ ಜಿಲ್ಲೆಯ ಎಲ್ಲಾ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳ ಉಪಸ್ಥಿತಿಯಲ್ಲಿ ಏರ್ಪಡಿಸಲಾಗಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಸಚಿವರು ಮಾತನಾಡಿದರು.

"ಸ್ಥಳೀಯ ಸಂಸ್ಥೆಗಳಿಗೆ ನಿಯಮಾನುಸಾರವಾಗಿ ಸಾರ್ವಜನಿಕರಿಂದ ಪಾವತಿಯಾಗಬೇಕಾದ ಕರವಸೂಲಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಬೆಂಗಳೂರು ಮಹಾನಗರ ಪಾಲಿಕೆಯ ಮಾದರಿಯಲ್ಲಿ ಎಲ್ಲಾ ಆಸ್ತಿಗಳನ್ನು ಎ ಮತ್ತು ಬಿ ಖಾತಾಗಳನ್ನಾಗಿ ವಿಂಗಡಿಸಿ, ರಾಜ್ಯದಾದ್ಯಂತ ಏಕರೀತಿಯ ಕರವಸೂಲಾತಿಗೆ ಹೊಸ ಕಾಯ್ದೆಯೊಂದನ್ನು ಮುಂದಿನ ಒಂದು ತಿಂಗಳೊಳಗಾಗಿ ಜಾರಿಗೊಳಿಸಲಾಗುವುದು" ಎಂದು ಸಚಿವ ರಹೀಂ ಖಾನ್ ಹೇಳಿದರು.
ಆಸ್ತಿ ತೆರಿಗೆ ವ್ಯವಸ್ಥೆಯಲ್ಲಿ ಬದಲಾವಣೆ: ಸಚಿವರು ಮಾತನಾಡಿ, "ರಾಜ್ಯದ ಬಹುತೇಕ ಎಲ್ಲಾ ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ ಇತ್ತೀಚಿನ ಕೆಲವು ದಶಕಗಳಿಂದೀಚೆಗೆ ನಿರ್ಮಾಣಗೊಂಡಿರುವ ಬಡಾವಣೆಗಳಲ್ಲಿ ಅಧಿಕೃತವಾಗಿ ಹಾಗೂ ಇನ್ನೂ ಕೆಲವು ಪರವಾನಿಗೆ ಪಡೆಯದೇ ಅನಧಿಕೃತವಾಗಿ ನಿರ್ಮಾಣಗೊಂಡಿರುವ ಎಲ್ಲಾ ಕಟ್ಟಡಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುತ್ತಿದ್ದು, ಅದಕ್ಕೆ ಪೂರಕವಾಗಿ ಸ್ಥಳೀಯ ಸಂಸ್ಥೆಗಳಿಗೆ ಸಂದಾಯವಾಗಬೇಕಾದ ಭಾರೀ ಪ್ರಮಾಣದ ಕರ ವಸೂಲಾಗದೇ ಬಾಕಿ ಉಳಿಯುತ್ತಿರುವುದನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿದೆ" ಎಂದು ತಿಳಿಸಿದರು.
"ನಗರ ಮತ್ತು ಪಟ್ಟಣ ಪ್ರದೇಶಗಳ ವ್ಯಾಪ್ತಿಯ ಆಯಕಟ್ಟಿನ ಸ್ಥಳಗಳಲ್ಲಿ ಸ್ಥಳೀಯ ಸಂಸ್ಥೆಗೆ ಸಂಬಂಧಿಸಿದ ವಿಶಾಲವಾದ ಸ್ವತ್ತುಗಳಿದ್ದು, ವಾಣಿಜ್ಯ ಸಂಕೀರ್ಣ ನಿರ್ಮಿಸಿ, ನಿರ್ವಹಿಸಲು ಉತ್ಸುಕರಿದ್ದು, ಕ್ರಿಯಾಯೋಜನೆ ತಯಾರಿಸಿ, ಪ್ರಸ್ತಾವನೆ ಸಲ್ಲಿಸಿದಲ್ಲಿ ಸರ್ಕಾರದಿಂದ ಅಗತ್ಯ ಹಣಕಾಸಿನ ನೆರವನ್ನು ಒದಗಿಸಲಾಗುವುದು" ಎಂದು ಸಚಿವರು ಭರವಸೆ ನೀಡಿದರು.
"ಸ್ಥಳೀಯ ಸಂಸ್ಥೆಗಳಿಗೆ ಸರ್ಕಾರದಿಂದ ಬಿಡುಗಡೆಯಾಗಿರುವ ಅನುದಾನವನ್ನು ಉದ್ಧೇಶಿತ ಯೋಜನೆಗಳಿಗೆ ಬಳಸಿಕೊಂಡು ಗುಣಮಟ್ಟದ ಕಾಮಗಾರಿಗಳನ್ನು ನಿಗದಿತ ಕಾಲಮಿತಿಯೊಳಗಾಗಿ ಪೂರ್ಣಗೊಳಿಸಬೇಕು. ತಪ್ಪಿದಲ್ಲಿ ಅನುದಾನ ಸರ್ಕಾರಕ್ಕೆ ಹಿಂದಿರುಗಿ ಹೋಗುವ ಸಾಧ್ಯತೆ ಇದೆ" ಎಂದು ಸಚಿವರು ಹೇಳಿದರು.
"ಘನತ್ಯಾಜ್ಯ ವಸ್ತುಗಳ ನಿರ್ವಹಣೆ ಹಾಗೂ ಘಟಕಗಳ ನಿರ್ಮಾಣಕ್ಕೆ ಬಿಡುಗಡೆಯಾಗಿರುವ ಅನುದಾನವನ್ನು ಸಕಾಲದಲ್ಲಿ ಬಳಸುವಂತೆ ಕಳೆದ ಆರು ತಿಂಗಳ ಹಿಂದೆಯೇ ಸೂಚನೆ ನೀಡಲಾಗಿದೆ. ಆದಾಗ್ಯೂ ಅನುದಾನ ಬಳಸದೇ ಬಾಕಿ ಉಳಿಸಿಕೊಂಡಿರುವುದು ಸರಿಯಲ್ಲ. ಕೂಡಲೇ ಹಣ ಬಳಕೆ ಮಾಡಿ ವರದಿ ನೀಡುವಂತೆ" ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಆಸ್ತಿ ತೆರಿಗೆ ಸಂಗ್ರಹದ ಕುರಿತು ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಮಾಹಿತಿ ನೀಡಿದ್ದು, ಒಂದು ಬಾರಿ ಪರಿಹಾರ ಯೋಜನೆ (ಒಟಿಎಸ್) ನವೆಂಬರ್ 30ರಂದು ಮುಕ್ತಾಯಗೊಳ್ಳಲಿದ್ದು, ಆ ವೇಳೆಗೆ ಒಟ್ಟು 4 ಸಾವಿರ ಕೋಟಿ ಆಸ್ತಿ ತೆರಿಗೆ ಸಂಗ್ರಹಿಸುವ ಗುರಿ ಹೊಂದಲಾಗಿದೆ. ಬಡ್ಡಿ ಮತ್ತು ದಂಡಕ್ಕೆ ವಿನಾಯಿತಿ ನೀಡಲಾಗಿರುವ ಒಟಿಎಸ್ ಯೋಜನೆಯನ್ನು ನಾಗರಿಕರು ಸದುಪಯೋಗಪಡಿಸಿಕೊಳ್ಳಬೇಕು. ಇಲ್ಲದಿದ್ದರೆ ಡಿಸೆಂಬರ್ 1ರಿಂದ ಸುಮಾರು ಎರಡು ಪಟ್ಟು ಹೆಚ್ಚು ಪಾವತಿಸಬೇಕಾಗುತ್ತದೆ ಎಂದು ತಿಳಿಸಿದ್ದಾರೆ.
ಇಂದಿರಾ ಕ್ಯಾಂಟೀನ್: ಪೌರಾಡಳಿತ ಖಾತೆ ಸಚಿವ ರಹೀಂ ಖಾನ್ ಇಂದಿರಾ ಕ್ಯಾಂಟೀನ್ಗಳ ಬಗ್ಗೆ ಮಾತನಾಡಿದ್ದಾರೆ. "ಮುಖ್ಯಮಂತ್ರಿ ಸಿದ್ಧರಾಮಯ್ಯ ಈ ಹಿಂದೆ ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿ 180 ಇಂದಿರಾ ಕ್ಯಾಂಟೀನ್ಗಳನ್ನು ಮಂಜೂರು ಮಾಡಿ, ಜನಸಾಮಾನ್ಯರ ಹಸಿವು ಇಂಗಿಸುವ ಕಾರ್ಯ ಮಾಡಿದ್ದರು. ಪ್ರಸ್ತುತ ಸಂದರ್ಭದಲ್ಲಿಯೂ ಪುನಃ 180 ಇಂದಿರಾ ಕ್ಯಾಂಟೀನುಗಳನ್ನು ಮಂಜೂರು ಮಾಡಿದ್ದು, ಶೀಘ್ರದಲ್ಲಿ ಕಾರ್ಯಾರಂಭಗೊಳ್ಳಲಿವೆ" ಎಂದರು.
"ಕೆಲವು ಕ್ಯಾಂಟೀನುಗಳಲ್ಲಿ ನಿರ್ವಹಣೆ ಸರಿಯಾಗಿ ಆಗದಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳಿವೆ. ಇದನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿದೆ. ಅಲ್ಲದೇ ಮಾನ್ಯ ಮುಖ್ಯಮಂತ್ರಿಗಳ ಕನಸಿನ ಯೋಜನೆಯ ಅನುಷ್ಠಾನದಲ್ಲಿ ವ್ಯತ್ಯಯಗಳು ಕಂಡುಬಂದಲ್ಲಿ ಅಂತಹ ವ್ಯಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ" ಎಂದು ಎಚ್ಚರಿಸಿದರು.
"ಆಹಾರ ವಿತರಣೆಯಲ್ಲಿಯೂ ತಪ್ಪು ದಾಖಲಾತಿಗಳ ನಿರ್ವಹಣೆ ಮಾಡುತ್ತಿರುವ ಬಗ್ಗೆ ದೂರುಗಳಿವೆ. ಇಲ್ಲಿಯೂ ದೂರುಗಳ ಕೇಳಿ ಬಂದಲ್ಲಿ ಕ್ಯಾಂಟೀನ್ ನಿರ್ವಹಣಾ ಗುತ್ತಿಗೆ ಸಂಸ್ಥೆಗಳಿಗೆ ನೀಡಿರುವ ಪರವಾನಿಗೆಯನ್ನು ಹಿಂಪಡೆಯಲಾಗುವುದು, ಸಂಬಂಧಿಸಿದ ಇಲಾಖಾ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು" ಎಂದರು.












Click it and Unblock the Notifications