ಶಿವಮೊಗ್ಗ ಪರಿವರ್ತನಾ ಯಾತ್ರೆ ವೇದಿಕೆಗೆ ಈಶ್ವರಪ್ಪ ಗುದ್ದಲಿ ಪೂಜೆ
ಶಿವಮೊಗ್ಗ, ಡಿಸೆಂಬರ್ 26 : ಕರ್ನಾಟಕ ಬಿಜೆಪಿ ಅಧ್ಯಕ್ಷ, ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಬಿಎಸ್ ಯಡಿಯೂರಪ್ಪ ಅವರ ತವರು ಕ್ಷೇತ್ರ ಶಿವಮೊಗ್ಗದಲ್ಲಿ ಡಿ.28ರಂದು ಪರಿವರ್ತನಾ ಯಾತ್ರೆ ನಡೆಯಲಿದೆ. ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಸಮಾವೇಶ ಉದ್ದೇಶಿಸಿ ಮಾತನಾಡುವ ನಿರೀಕ್ಷೆ ಇದೆ.
ಪರಿವರ್ತನಾ ಸಮಾವೇಶದ ವೇದಿಕೆ ನಿರ್ಮಾಣಕ್ಕೆ ವಿಧಾನ ಪರಿಷತ್ ವಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪ ಗುದ್ದಲಿ ಪೂಜೆ ನೆರವೇರಿಸಿದರು. ಡಿ.28, 29ರಂದು ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ ಪರಿವರ್ತನಾ ಯಾತ್ರೆ ಸಮಾವೇಶ ನಡೆಯಲಿದೆ. ವಿವಿಧ ಕೇಂದ್ರ ಸಚಿವರು ಸಮಾವೇಶ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.
ಗುದ್ದಲಿ ಪೂಜೆ ನೆರವೇರಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ ವಿಚಾರದಲ್ಲಿ ಕಾಂಗ್ರೆಸ್ ರಾಜಕಾರಣ ಮಾಡುತ್ತಿದೆ. ಮಹದಾಯಿ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಬಿಜೆಪಿ ಗಮನಹರಿಸಿದೆ. ಆದರೆ ಕಾಂಗ್ರೆಸ್ ಇದನ್ನು ಜ್ವಲಂತ ಸಮಸ್ಯೆಯಾಗಿರಬೇಕು ಎಂಬ ಉದ್ದೇಶದಿಂದಲೇ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಮುಂದಾಗುತ್ತಿಲ್ಲ ಎಂದು ದೂರಿದರು.
ಕರ್ನಾಟಕದಲ್ಲಿಯೂ ಕಾಂಗ್ರೆಸ್ ಮಣ್ಣು ಮುಕ್ಕಲಿದೆ : ಈಶ್ವರಪ್ಪ
ಈ ಹಿಂದೆ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿತ್ತು. ಹಾಗೆಯೇ ಗೋವಾ ರಾಜ್ಯದಲ್ಲೂ ಕಾಂಗ್ರೆಸ್ ಆಡಳಿತದಲ್ಲಿತ್ತು. ಸಮಸ್ಯೆ ಇತ್ಯರ್ಥಪಡಿಸುವ ನಿಟ್ಟಿನಲ್ಲಿ ಆಗ ಗಮನಹರಿಸಲಿಲ್ಲ. ರಾಜಕಾರಣ ಮಾಡುತ್ತಾ ಇದೀಗ ಪ್ರಧಾನಿ ನರೇಂದ್ರ ಮೋದಿಯನ್ನು ದೂರುವುದು ಸರಿಯಲ್ಲ ಎಂದರು.
ತೀವ್ರ ರಾಜಕೀಯ ಸ್ವರೂಪ ಪಡೆಯುತ್ತಿರುವ ಮಹದಾಯಿ
ಮಹದಾಯಿ ವಿಚಾರ ಸುಪ್ರಿಂ ಕೋರ್ಟ್ ಮೆಟ್ಟಿಲೇರಲು ನ್ಯಾಯಾಧೀಕರಣಕ್ಕೆ ಹೋಗಲು ಕಾಂಗ್ರೆಸ್ ಕಾರಣ. ಇದನ್ನು ಜನರಿಗೆ ತಿಳಿಸಬೇಕು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಗಮಹರಿಸಿದ್ದಾರೆ. ಕೇಂದ್ರ ಹಾಗೂ ಗೋವಾ ಸರ್ಕಾರದೊಂದಿಗೆ ಮಾತುಕತೆ ನಡೆಸಿದ್ದಾರೆ. ಆದರೆ ಗೋವಾದಲ್ಲಿನ ಕಾಂಗ್ರೆಸ್ ನಾಯಕರುಗಳಿಗೆ ಕುಮ್ಮಕ್ಕು ಕೊಟ್ಟಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಹದಾಯಿ ವಿಚಾರದಲ್ಲಿ ರಾಜಕಾರಣ ಮಾಡತೊಡಗಿದ್ದಾರೆ. ಹೀಗಾಗಿ ಸಮಸ್ಯೆ ಕಗ್ಗಂಟಾಗಿಯೇ ಉಳಿದಿದೆ ಎಂದು ದೂರಿದರು.ಕಾಂಗ್ರೆಸ್ ಹಾಗೂ ಬಿಜೆಪಿ ಒಟ್ಟಿಗೆ ಕುಳಿತು ಚರ್ಚೆ ನಡೆಸಿ ಒಮ್ಮತದ ತೀರ್ಮಾನಕ್ಕೆ ಬಂದಲ್ಲಿ ಸಮಸ್ಯೆ ಶೀಘ್ರದಲ್ಲೇ ಇತ್ಯರ್ಥವಾಗುತ್ತದೆ. ಇದು ಕಾಂಗ್ರೆಸ್ ಗೆ ಇಷ್ಟವಿಲ್ಲ.
ಮಹಾದಾಯಿ ವಿಚಾರದಲ್ಲಿ ರಾಜಕೀಯಬೆರಸುವುದನ್ನು ಸಿದ್ದರಾಮಯ್ಯ ನಿಲ್ಲಿಸಬೇಕು. ಇಲ್ಲದಿದ್ದಲ್ಲಿ ಜನತೆ ತಕ್ಕಪಾಠ ಕಲಿಸುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ರೈತರು ಬಿಜೆಪಿ ಕಚೇರಿ ಎದುರು ಪ್ರತಿಭಟನೆ ನಡೆಸುವುದನ್ನು ನಿಲ್ಲಿಸಬೇಕು. ಸಮಸ್ಯೆ ಕಗ್ಗಂಟಾಗಲು ಕಾರಣವಾಗಿರುವ ಕಾಂಗ್ರೆಸ್ ಕಚೇರಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಮನೆ ಎದುರು ಪ್ರತಿಭಟನೆ ನಡೆಸಲಿ ಎಂದು ಹೇಳಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನವ ಕರ್ನಾಟಕ ನಿರ್ಮಾಣಕ್ಕಾಗಿ ಪರಿವರ್ತನಾ ಯಾತ್ರೆಯಲ್ಲಿ ವಿಧಾನಸಭಾ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳ ಹೆಸರುಗಳನ್ನು ಪ್ರಕಟಿಸುತ್ತಿರುವುದು ತಮ್ಮ ಗಮನಕ್ಕೂ ಬಂದಿದೆ. ಈ ಕುರಿತು ಯಡಿಯೂರಪ್ಪರೊಂದಿಗೆ ಚರ್ಚೆ ನಡೆಸುವುದಾಗಿ ತಿಳಿಸಿದರು.
ಸಂವಿಧಾನದಲ್ಲಿ ಬದಲಾವಣೆ ಅವಶ್ಯಕತೆ ಇದೆ ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ನೀಡಿರುವ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿದ ಈಶ್ವರಪ್ಪ, ಅವರ ಹೇಳಿಕೆಯನ್ನೇ ತಪ್ಪಾಗಿ ಅರ್ಥೈಸಿಕೊಂಡಿರುವ ಕೆಲವರು ಅನಂತ್ ಕುಮಾರ್ ಹೆಗಡೆ ಸಂವಿಧಾನ ವಿರೋಧಿ ಎಂದು ಬಿಂಬಿಸತೊಡಗಿದ್ದಾರೆ. ಈ ಹಿಂದೆ ಹಲವು ಬಾರಿ ಸಂವಿಧಾನಕ್ಕೆ ತಿದ್ದುಪಡಿ ತಂದಿರಲಿಲ್ಲವೆ ಎಂದು ಪ್ರಶ್ನಿಸಿದರು.
ಧರ್ಮ, ಸಂಸ್ಕೃತಿ ಟೀಕೆ ಮಾಡುತ್ತಿರುವವರಿಗೆ ಸಚಿವ ಅನಂತ್ ಕುಮಾರ್ ಹೆಗಡೆ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಪದಬಳಕೆಯಲ್ಲಿ ಕಠೋರತೆ ಇರಬಹುದು. ಅದನ್ನು ನಾನು ಒಪ್ಪುತ್ತೇನೆ. ಆದರೆ ಅವರ ಹೇಳಿಕೆಯಲ್ಲಿ ಸತ್ಯವಿದೆ ಎಂದು ಸಮರ್ಥಿಸಿಕೊಂಡರು. ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರಿ ಹಣದಲ್ಲಿ ಸಾಧನಾ ಸಮಾವೇಶ ನಡೆಸುತ್ತಿದ್ದಾರೆ. ಅಧಿಕಾರಿಗಳನ್ನು ಬಳಸಿಕೊಳ್ಳತೊಡಗಿದ್ದಾರೆ. ಹಣ ಕೊಟ್ಟು ಜನ ಸೇರಿಸಿದರೆ ಮುಂದೆ ಅಧಿಕಾರಕ್ಕೆ ಬರಬಹುದು ಎಂಬ ಭ್ರಮೆಯಲ್ಲಿ ಸಿದ್ದರಾಮಯ್ಯ ಇದ್ದರೆ ಅದರಿಂದ ಹೊರಬರಬೇಕು. ಕಾಂಗ್ರೆಸ್ ಪಕ್ಷದ ಹಣವನ್ನು ಎಷ್ಟು ಬೇಕಾದರೂ ಸಮಾವೇಶಕ್ಕೆ ಬಳಸಿಕೊಳ್ಳಲಿ ಅದಕ್ಕೆ ನಮ್ಮ ಅಭ್ಯಂತರವಿಲ್ಲ.
ಈ ರೀತಿ ಸರ್ಕಾರದ ಹಣ ದುಂದುವೆಚ್ಚ ಮಾಡಿದರೆ ಮುಂದಿನ ಚುನಾವಣೆಯಲ್ಲಿ ಜನತೆಯೇ ತಕ್ಕ ಉತ್ತರ ನೀಡುತ್ತಾರೆ ಎಂದು ಹೇಳಿದರು. ಸಿದ್ದರಾಮಯ್ಯಗೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ ಎಂಬುದು ಖಾತ್ರಿಯಾಗಿದೆ. ಗುಜರಾತ್, ಉತ್ತರ ಪ್ರದೇಶ, ಹಿಮಾಚಲ ಪ್ರದೇಶದಲ್ಲಿ ಬಂದ ಫಲಿತಾಂಶ ಪುನರಾವರ್ತನೆ ಆಗಲಿದೆ ಎಂದು ಭವಿಷ್ಯ ನುಡಿದರು.