ಆಗುಂಬೆ ಘಾಟಿಯಲ್ಲಿ ರಸ್ತೆ ಕುಸಿತ: ಆತಂಕಗೊಂಡ ಪ್ರಯಾಣಿಕರು
ಶಿವಮೊಗ್ಗ, ಜೂನ್.28: ರಾಜ್ಯದಲ್ಲಿ ಹೆಚ್ಚಿನ ಮಳೆ ಬೀಳುವ ಪ್ರದೇಶವೆಂದೇ ಪ್ರಸಿದ್ಧಿ ಪಡೆದಿರುವ ಆಗುಂಬೆ, ತೀರ್ಥಹಳ್ಳಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ವಿಪರೀತ ಮಳೆಯಾಗುತ್ತಿದ್ದು, ಆಗುಂಬೆ ಘಾಟಿಯ 7ನೇ ತಿರುವಿನಲ್ಲಿ ಇಂದು ರಸ್ತೆ ಕುಸಿದು, ಪ್ರಯಾಣಿಕರ ಆತಂಕಕ್ಕೆ ಕಾರಣವಾಗಿದೆ.
ಇತ್ತೀಚೆಗಷ್ಟೇ ಆಗುಂಬೆ ಭಾಗದಲ್ಲಿ ಗುಡ್ಡಗಳು ಕುಸಿದು ರಸ್ತೆ ಸಂಚಾರಕ್ಕೆ ಅಡ್ಡಿಯುಂಟಾಗಿತ್ತು. ಸಂಚಾರ ಮುಕ್ತಗೊಳಿಸಲು ಪೊಲೀಸರು, ಅಧಿಕಾರಿಗಳು, ಸಾರ್ವಜನಿಕರು ಹರಸಾಹಸ ಪಟ್ಟಿದ್ದರು. ಇದೀಗ ಪುನಃ ರಸ್ತೆ ಕುಸಿಯುತ್ತಿರುವುದು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ.
ಆಗುಂಬೆ ರಸ್ತೆಯಲ್ಲಿ ಹರಿಯುತ್ತಿದೆ ಕೊಳಚೆ ನೀರು: ಕೇಳೊರಿಲ್ಲ ಗೋಳು
ರಸ್ತೆ ಕುಸಿದ ಹಿನ್ನಲೆಯಲ್ಲಿ ಪ್ರಯಾಣಿಕರು ಆತಂಕದಿಂದ ಸಂಚರಿಸುವಂತಾಗಿದೆ. ಭಾರಿ ವಾಹನಗಳು ಸಂಚರಿಸಲು ಪರದಾಡುತ್ತಿವೆ. ಆಗುಂಬೆ ಪೊಲೀಸರು ಸ್ಥಳಕ್ಕೆ ಆಗಮಿಸಿ ರಸ್ತೆ ಕುಸಿದಿರುವ ಸ್ಥಳಗಳಲ್ಲಿ ಕಲ್ಲನಿಟ್ಟು ವಾಹನಗಳ ಸುಲಭ ಸಂಚಾರಕ್ಕೆ ಅನುವು ಮಾಡಿಕೊಡುತ್ತಿದ್ದಾರೆ.
ರಾಜ್ಯದ ಕರಾವಳಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ಇಲ್ಲಿನ ಗ್ರಾಮೀಣ ಪ್ರದೇಶದ ಜನಜೀವನ ಅಸ್ತವ್ಯಸ್ತಗೊಂಡಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶಗಳಾದ ಬೆಳ್ತಂಗಡಿ, ಪುತ್ತೂರು, ಸುಳ್ಯದಲ್ಲಿ ಎಡಬಿಡದೇ ಮಳೆ ಸುರಿಯುತ್ತಿದೆ. ಈ ಹಿನ್ನೆಲೆಯಲ್ಲಿ ಬೆಳ್ತಂಗಡಿ ಸೇರಿದಂತೆ ಇನ್ನಿತರ ಕಡೆ ಶಾಲೆಗಳಿಗೆ ರಜೆ ನೀಡಲಾಗಿದೆ.
ಮಂಗಳೂರು-ಕಾರವಾರ ಭಾಗದಲ್ಲಿ ಸಮುದ್ರದ ಅಲೆಗಳ ಎತ್ತರ ಹೆಚ್ಚಾಗಲಿದ್ದು, ಜೂ. 29, 11.30 ರವರೆಗೆ ಈ ಭಾಗದ ಜನತೆ ಎಚ್ಚರಿಕೆಯಿಂದ ಇರಬೇಕು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.