ಶಿವಮೊಗ್ಗದ ಈ ತಾಲೂಕಿನ ದಿನಸಿ ಅಂಗಡಿಯಲ್ಲೂ 'ಮದ್ಯ'!
ಶಿವಮೊಗ್ಗ, ಫೆಬ್ರವರಿ.05: ಮದ್ಯದ ಅಂಗಡಿಗಳಲ್ಲಿ ಮದ್ಯ ಸಿಗುವುದು ಕಾಮನ್. ಆದರೆ, ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ದಿನಸಿ ಅಂಗಡಿಗಳಲ್ಲೂ ಮದ್ಯ ಬಲು ಸಲೀಸಾಗಿ ಸಿಗುತ್ತದೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.
ತೀರ್ಥಹಳ್ಳಿ ತಾಲೂಕಿನಾದ್ಯಂತ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕುವಂತೆ ಆಗ್ರಹಿಸಿ ಕಾಂಗ್ರೆಸ್ ಯುವ ಮುಖಂಡ ಕೆಳಕೆರೆ ಪೂರ್ಣೇಶ್ ಮತ್ತು ತಂಡದ ಕಾರ್ಯಕರ್ತರು ತಾಲೂಕು ಕಚೇರಿ ಎದುರು ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ.
ಶಿವಮೊಗ್ಗದಲ್ಲಿ ಸಾವಿನಲ್ಲೂ ಸಮಯಪ್ರಜ್ಞೆ ಮೆರೆದ ಬಸ್ ಚಾಲಕ
ತಾಲೂಕು ಅಬಕಾರಿ ಅಧಿಕಾರಿಗಳು, ಪೊಲೀಸರು, ಮತ್ತು ತಹಶೀಲ್ದಾರ್ ಅವರಿಗೆ ಅಕ್ರಮ ಮದ್ಯ ಮಾರಾಟದ ಬಗ್ಗೆ ಬಾರಿ ಬಾರಿ ದೂರು ನೀಡಲಾಗಿತ್ತು. ಆದರೆ, ಅಧಿಕಾರಿಗಳು ತಮ್ಮ ನಿರ್ಲಕ್ಷ್ಯ ಧೋರಣೆಯನ್ನು ಮುಂದುವರಿಸಿದ್ದರು. ಇದರಿಂದ ಕೆರಳಿದ ಕಾಂಗ್ರೆಸ್ ಯುವ ಕಾರ್ಯಕರ್ತರು ತೀರ್ಥಹಳ್ಳಿ ತಾಲೂಕು ಕಚೇರಿ ಎದುರಿನಲ್ಲೇ ಹಗಲು-ರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಅಧಿಕಾರಿಗಳೇ ಮಾರುತ್ತಾರಾ ಅಕ್ರಮ ಮದ್ಯ?:
ತೀರ್ಥಹಳ್ಳಿ ತಾಲೂಕಿನ ದಿನಸಿ ಅಂಗಡಿಗಳಲ್ಲೂ ಮದ್ಯವನ್ನು ಮಾರಾಟ ಮಾಡಲಾಗುತ್ತಿದೆ. ಸ್ವತಃ ಅಧಿಕಾರಿ ವರ್ಗವೇ ದಿನಸಿ ಅಂಗಡಿಗಳಿಗೆ ಮದ್ಯವನ್ನು ಮಾರಾಟ ಮಾಡುತ್ತಿದ್ದಾರೆ ಎಂದು ಪ್ರತಿಭಟನಾನಿರತರು ಗಂಭೀರ ಆರೋಪ ಮಾಡುತ್ತಿದ್ದಾರೆ. ಈ ಅಕ್ರಮಕ್ಕೆ ಕಡಿವಾಣ ಹಾಕುವವರೆಗೂ ತಮ್ಮ ಹೋರಾಟವನ್ನು ನಿಲ್ಲಿಸುವುದಿಲ್ಲ ಎಂದು ಎಚ್ಚರಿಕೆಯನ್ನು ನೀಡುತ್ತಿದ್ದಾರೆ.