ಶಿವಮೊಗ್ಗ ಜಿಲ್ಲೆಯಲ್ಲಿ ರೈಲ್ವೇ, ಪ್ರವಾಸೋದ್ಯಮ ಪ್ರಗತಿಗೆ ಹಲವು ಯೋಜನೆ
ಶಿವಮೊಗ್ಗ, ಆಗಸ್ಟ್ 26: ಶಿವಮೊಗ್ಗ ಜಿಲ್ಲೆಯಲ್ಲಿ ರೈಲ್ವೇ ಮತ್ತು ಪ್ರವಾಸೋದ್ಯಮ ಕ್ಷೇತ್ರದ ಪ್ರಗತಿಗೆ ಅನೇಕ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಕ್ರಿಯವಾಗಿದ್ದು, ಮುಂಬರುವ ದಿನಗಳಲ್ಲಿ ತಜ್ಞರ ಸಲಹೆ ಪಡೆದು ಜಿಲ್ಲೆಯನ್ನು ಪ್ರವಾಸಿಗರ ಆಕರ್ಷಕ ತಾಣವನ್ನಾಗಿಸಲು ಅಗತ್ಯವಿರುವ ಎಲ್ಲಾ ಪ್ರಯತ್ನ ಮಾಡಲಾಗುವುದು ಎಂದು ಸಂಸದ ಬಿ.ವೈ ರಾಘವೇಂದ್ರ ತಿಳಿಸಿದರು.
ಶಿವಮೊಗ್ಗದಲ್ಲಿ ಇಂದು ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ರೈಲ್ವೆ ಮತ್ತು ಪ್ರವಾಸಿ ತಾಣಗಳ ಅಭಿವೃದ್ದಿಗೆ ಈಗಾಗಲೇ ಕೈಗೊಳ್ಳಲಾಗಿರುವ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ಜಿಲ್ಲೆಯ ಆಯ್ದ ನಾಲ್ಕು ಸ್ಥಳಗಳಲ್ಲಿ ರೈಲ್ವೇ ಮೇಲ್ಸೇತುವೆ ಮತ್ತು ಕೆಳಸೇತುವೆಗಳನ್ನು ನಿರ್ಮಿಸಲು ಸ್ಥಳ ಗುರುತಿಸಲಾಗಿದೆ ಎಂದರು.
ರಾಜ್ಯದಲ್ಲಿ ಆಯ್ದ 5 ಸ್ಥಳಗಳಲ್ಲಿ ರೈಲ್ವೆ ಕೋಚಿಂಗ್ ಮತ್ತು ಟರ್ಮಿನಲ್ ಸೆಂಟರ್ ಗಳಿದ್ದು, ಶಿವಮೊಗ್ಗ ಜಿಲ್ಲಾ ಕೇಂದ್ರದಲ್ಲಿಯೂ ಟರ್ಮಿನಲ್ ನಿರ್ಮಾಣಗೊಳ್ಳಲಿದೆ. ಅದಕ್ಕಾಗಿ 75 ಕೋಟಿ ರುಪಾಯಿ ಅನುದಾನ ಮಂಜೂರಾಗಿದ್ದು, ಈ ಸಂಬಂಧ ಭೂಸ್ವಾಧೀನ ಪ್ರಕ್ರಿಯೆ ಇನ್ನು ಒಂದು ವಾರದೊಳಗೆ ಪೂರ್ಣಗೊಳ್ಳುವ ವಿಶ್ವಾಸವಿದೆ ಎಂದು ಹೇಳಿದರು.

ಶಿವಮೊಗ್ಗ-ಶಿಕಾರಿಪುರ-ರಾಣೇಬೆನ್ನೂರು ಹೊಸ ರೈಲ್ವೆ ಮಾರ್ಗದ ಸರ್ವೇ ಕಾರ್ಯವು 2 ಹಂತಗಳಲ್ಲಿ ನಡೆಯಲಿದೆ. ಮೊದಲ ಹಂತದಲ್ಲಿ ಶಿಕಾರಿಪುರ ಮತ್ತು ಶಿವಮೊಗ್ಗ ಹಾಗೂ ಎರಡನೇ ಹಂತದಲ್ಲಿ ಶಿಕಾರಿಪುರ ಮತ್ತು ರಾಣೇಬೆನ್ನೂರು ಮಾರ್ಗದ ಸರ್ವೇ ಕಾರ್ಯ ನಡೆಯಲಿದೆ.
ಈಗಾಗಲೇ ಮೊದಲ ಹಂತದಲ್ಲಿ ಬರುವ 14 ಹಳ್ಳಿಗಳಲ್ಲಿ ಕಂದಾಯ ಮತ್ತು ರೈಲ್ವೆ ಇಲಾಖೆಗಳ ಜಂಟಿ ಸರ್ವೇ ಕಾರ್ಯ ಪೂರ್ಣಗೊಂಡಿದೆ. 8 ಗ್ರಾಮಗಳಿಗೆ ಅಂತಿಮ ಹಂತದ ನೋಟಿಫಿಕೇಶನ್ ಕೂಡ ಆಗಿದೆ. ಮುಂದಿನ ಒಂದು ತಿಂಗಳಲ್ಲಿ ಭೂ ಪರಿಹಾರ ನೀಡಿ ಈ ಭಾಗದ ಕಾಮಗಾರಿ ಆರಂಭಗೊಳ್ಳಲಿದೆ ಎಂದು ತಿಳಿಸಿದರು.
ಶಿವಮೊಗ್ಗ ಜಿಲ್ಲೆಯಲ್ಲಿ ಅನೇಕ ಸ್ಥಳಗಳನ್ನು ಪ್ರವಾಸಿ ತಾಣಗಳನ್ನಾಗಿ ಅಭಿವೃದ್ಧಿಪಡಿಸಲು ಯೋಗ್ಯವಾಗಿವೆ. ಅವುಗಳಲ್ಲಿ ಪ್ರಮುಖವಾದ ಕೆಲವು ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ. ಮುಖ್ಯವಾಗಿ ಜೋಗ ಜಲಪಾತ ಹಾಗೂ ಸುತ್ತಮುತ್ತಲಿನ ಪ್ರದೇಶವನ್ನು 150 ಕೋಟಿ ರೂ.ಗಳ ವೆಚ್ಚದಲ್ಲಿ ಅತ್ಯಾಧುನಿಕ ರೀತಿಯಲ್ಲಿ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ ಎಂದರು.
ಇಲ್ಲಿನ 22 ಎಕರೆ ಪ್ರದೇಶದಲ್ಲಿ ವೀಕ್ಷಣಾಗೋಪುರ, ಕಾರಂಜಿ ನಿರ್ಮಾಣ, ವಿಶ್ರಾಂತಿ ಗೃಹ, ಉದ್ಯಾನವನ, ಮಳೆಗಾಲವನ್ನು ಹೊರತುಪಡಿಸಿ ವರ್ಷ ಪ್ರತಿ ಶನಿವಾರ ಮತ್ತು ಭಾನುವಾರಗಳಂದು ಜಲಪಾತಕ್ಕೆ ನೀರು ಹರಿಸುವ ಉದ್ದೇಶ ಹೊಂದಲಾಗಿದೆ. ಅದಕ್ಕಾಗಿ ಅಗತ್ಯವಿರುವ ಅನುದಾನವನ್ನು ಸರ್ಕಾರವು ಮುಂದಿನ ಬಜೆಟ್ ನಲ್ಲಿ ಘೋಷಿಸುವ ನಿರೀಕ್ಷೆ ಇದೆ ಎಂದರು.












Click it and Unblock the Notifications