ರಾಮನಗರ ಉಪ ಚುನಾವಣೆ : ಅಭ್ಯರ್ಥಿ ಬಗ್ಗೆ ಯಡಿಯೂರಪ್ಪ ಹೇಳಿದ್ದೇನು?
ಶಿಕಾರಿಪುರ, ಅಕ್ಟೋಬರ್ 11 : 'ಬಳ್ಳಾರಿ, ಜಮಖಂಡಿ, ಮಂಡ್ಯ, ಶಿವಮೊಗ್ಗಕ್ಕೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ರಾಮನಗರ ಕ್ಷೇತ್ರದ ಉಪ ಚುನಾವಣೆಗೆ ಶುಕ್ರವಾರ ಅಭ್ಯರ್ಥಿಯ ಹೆಸರು ಪ್ರಕಟಿಸಲಾಗುತ್ತದೆ' ಎಂದು ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಗುರುವಾರ ಯಡಿಯೂರಪ್ಪ ತವರು ಕ್ಷೇತ್ರ ಶಿಕಾರಿಪುರದಲ್ಲಿ ಬಿಜೆಪಿಯ ಕಾರ್ಯಕರ್ತರ ಸಮಾವೇಶ ನಡೆಯಿತು. ಲೋಕಸಭೆ ಉಪ ಚುನಾವಣೆ ಹಿನ್ನಲೆಯಲ್ಲಿ ಕಾರ್ಯಕರ್ತರ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಸಮಾವೇಶದಲ್ಲಿ ಬಿ.ಎಸ್.ಯಡಿಯೂರಪ್ಪ ಅವರು ಪಾಲ್ಗೊಂಡಿದ್ದರು.
ಕೆ.ಎಸ್.ಈಶ್ವರಪ್ಪ, ಡಿ.ಎಚ್.ಶಂಕರಮೂರ್ತಿ, ರುದ್ರೇಗೌಡ, ಪದ್ದಣ್ಣ, ಅರುಣ್ ಕುಮಾರ್ ಸೇರಿದಂತೆ ಪಕ್ಷದ ಪ್ರಮುಖ ನಾಯಕರು ಸಮಾವೇಶದಲ್ಲಿ ಪಾಲ್ಗೊಂಡು ಲೋಕಸಭೆ ಉಪ ಚುನಾವಣೆಯಲ್ಲಿ ಬಿ.ವೈ.ರಾಘವೇಂದ್ರ ಅವರನ್ನು ಬೆಂಬಲಿಸುವಂತೆ ಮನವಿ ಮಾಡಿದರು.
ಸಮಾವೇಶದಲ್ಲಿ ಮಾತನಾಡಿದ ಯಡಿಯೂರಪ್ಪ ಅವರು, 'ಬಳ್ಳಾರಿ, ಜಮಖಂಡಿ, ಮಂಡ್ಯ, ಶಿವಮೊಗ್ಗ ಕ್ಷೇತ್ರದ ಉಪ ಚುನಾವಣೆಗೆ ಅಭ್ಯರ್ಥಿ ಘೋಷಣೆ ಮಾಡಲಾಗಿದೆ. ರಾಮನಗರ ಕ್ಷೇತ್ರಕ್ಕೆ ಶುಕ್ರವಾರ ಅಭ್ಯರ್ಥಿ ಘೋಷಣೆ ಮಾಡಲಾಗುತ್ತದೆ' ಎಂದರು....

ಎಲ್ಲಿಗೆ ಯಾರು ಅಭ್ಯರ್ಥಿ?
ಎರಡು ವಿಧಾನಸಭಾ ಕ್ಷೇತ್ರ, 3 ಲೋಕಸಭಾ ಕ್ಷೇತ್ರಕ್ಕೆ ನವೆಂಬರ್ 3ರಂದು ಚುನಾವಣೆ ನಡೆಯುತ್ತಿದೆ. ನವೆಂಬರ್ 6ರಂದು ಫಲಿತಾಂಶ ಪ್ರಕಟವಾಗಲಿದೆ. ಅಭ್ಯರ್ಥಿಗಳ ಪಟ್ಟಿ ಇಲ್ಲಿದೆ...
* ಶಿವಮೊಗ್ಗ - ಬಿ.ವೈ.ರಾಘವೇಂದ್ರ
* ಬಳ್ಳಾರಿ - ಜೆ.ಶಾಂತ
* ಮಂಡ್ಯ - ಡಾ.ಸಿದ್ದರಾಮಯ್ಯ
* ಜಮಖಂಡಿ - ಶ್ರೀಕಾಂತ್ ಕುಲಕರ್ಣಿ
* ರಾಮನಗರ - ಶುಕ್ರವಾರ ಅಭ್ಯರ್ಥಿ ಘೋಷಣೆ

ಪ್ರವಾಸ ಮಾಡಬೇಕಿದೆ
ಸಮಾವೇಶದಲ್ಲಿ ಮಾತನಾಡಿದ ಯಡಿಯೂರಪ್ಪ ಅವರು, 'ದೂರದೃಷ್ಟಿ ಇಲ್ಲದೇ ಚುನಾವಣಾ ಆಯೋಗ ಮೂರು ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಘೋಷಣೆ ಮಾಡಿದೆ. 20 ದಿನದಲ್ಲಿ 5 ಕ್ಷೇತ್ರಗಳಲ್ಲಿ ಪ್ರವಾಸ ಮಾಡಬೇಕಿದೆ. 50 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ರಾಘವೇಂದ್ರ ಗೆಲ್ಲಿಸಿ' ಎಂದು ಯಡಿಯೂರಪ್ಪ ಮನವಿ ಮಾಡಿದರು.

ಮಾದರಿ ಜಿಲ್ಲೆ ಮಾಡುವೆ
'ನಮ್ಮ ವಿರುದ್ಧದ ಅಭ್ಯರ್ಥಿ ಬಗ್ಗೆ ಮಾತನಾಡುವ ಅಗತ್ಯವಿಲ್ಲ. ಪ್ರತಿ ಬೂತ್ನಲ್ಲಿ ಶೇ 70ಕ್ಕಿಂತ ಹೆಚ್ಚು ಮತಗಳು ಬರಬೇಕು. ಒಂದು ವರ್ಷದಲ್ಲಿ ಕ್ಷೇತ್ರದ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಿ ಮಾದರಿ ಜಿಲ್ಲೆಯನ್ನಾಗಿ ಮಾಡುವೆ' ಎಂದು ಯಡಿಯೂರಪ್ಪ ಹೇಳಿದರು.

ರಾಮನಗರ ಬಿಜೆಪಿ ಅಭ್ಯರ್ಥಿ ಯಾರು?
ರಾಮನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ. ಎರಡೂ ಪಕ್ಷಗಳ ಒಮ್ಮತದ ಅಭ್ಯರ್ಥಿಯಾಗಿ ಅನಿತಾ ಕುಮಾರಸ್ವಾಮಿ ಆಯ್ಕೆಯಾಗಿದ್ದಾರೆ. ಎಲ್.ಚಂದ್ರಶೇಖರ್ ಬಿಜೆಪಿ ಅಭ್ಯರ್ಥಿಯಾಗಲಿದ್ದಾರೆ ಎಂದು ಅಂದಾಜಿಸಲಾಗಿದ್ದು, ಶುಕ್ರವಾರ ಅಧಿಕೃತ ಘೋಷಣೆಯಾಗಲಿದೆ.












Click it and Unblock the Notifications