ಪರಿಷ್ಕೃತ ಮಾರ್ಗಸೂಚಿ; ಶಿವಮೊಗ್ಗ ಪ್ರವಾಸಕ್ಕೆ ಮುನ್ನ ತಿಳಿದಿರಿ
ಶಿವಮೊಗ್ಗ, ಆಗಸ್ಟ್ 12; ಅಕ್ಕಪಕ್ಕದ ರಾಜ್ಯಗಳಲ್ಲಿ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಕೋವಿಡ್ ಮೂರನೇ ಅಲೆ ಹರಡುವಿಕೆ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಗುರುವಾರ ಶಿವಮೊಗ್ಗ ಜಿಲ್ಲಾಧಿಕಾರಿ ಕೆ. ಬಿ. ಶಿವಕುಮಾರ್ ಹಿಂದೆ ಹೊರಡಿಸಿದ್ದ ಮಾರ್ಗಸೂಚಿಯಲ್ಲಿ ಕೆಲವು ತಿದ್ದುಪಡಿಗಳನ್ನು ಮಾಡಿ ಆದೇಶ ಹೊರಡಿಸಿದ್ದಾರೆ. ಶಿವಮೊಗ್ಗ ಪ್ರವಾಸ ಕೈಗೊಳ್ಳುವ ಮುನ್ನ ಪ್ರವಾಸಿಗರು ಮಾರ್ಗಸೂಚಿ ಬಗ್ಗೆ ತಿಳಿದಿರಬೇಕು.
ಶಿವಮೊಗ್ಗ ಜಿಲ್ಲೆಯಲ್ಲಿ ಹಲವಾರು ಪ್ರಮುಖ ಪ್ರವಾಸಿ ತಾಣಗಳಿವೆ. ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಜನರು 72 ಗಂಟೆಗಳ ಒಳಗಾಗಿ ಮಾಡಿಸಿದ ಆರ್ಟಿಪಿಸಿಆರ್ ಪರೀಕ್ಷೆ ನೆಗೆಟಿವ್ ವರದಿ/ ಆರ್ಎಟಿ ನೆಗೆಟಿವ್ ವರದಿ ಅಥವ ಕೋವಿಡ್ 2 ಡೋಸ್ ಲಸಿಕೆ ಪಡೆದ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಹಾಜರುಪಡಿಸಬೇಕು.

ಮಾರ್ಗಸೂಚಿಯ ವಿವರ ಹೀಗಿದೆ...
* ಜಿಲ್ಲಾ ವ್ಯಾಪ್ತಿಯ ಎಲ್ಲಾ ಲಾಡ್ಜ್, ಹೋಟೆಲ್, ಹೋಂ ಸ್ಟೇ/ ಅರಣ್ಯ ಇಲಾಖೆ ವಸತಿ ಗೃಹಗಳಲ್ಲಿ ತಂಗಲಿರುವವರು ಬುಕಿಂಗ್ ಸಮಯದಲ್ಲಿ ಚೆಕ್ ಇನ್ ದಿನದಿಂದ ಹಿಂದಿನ 72 ಗಂಟೆಗಳ ಒಳಗಾಗಿ ಮಾಡಿಸಿದ ಆರ್ಟಿಪಿಸಿಆರ್ ನೆಗೆಟಿವ್ ವರದಿ/ ಆರ್ಎಟಿ ನೆಗೆಟಿವ್ ವರದಿ/ ಕೋವಿಡ್ 2ನೇ ಲಸಿಕೆ ಪಡೆದ ಪ್ರಮಾಣ ಪತ್ರ ಹೊಂದಿರುವುದು ಕಡ್ಡಾಯಗೊಳಿಸಲಾಗಿದೆ.
* ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳು ಹಾಗೂ ಇನ್ನಿತರ ಪ್ರೇಕ್ಷಣೀಯ ಸ್ಥಳಗಳಾದ ಜೋಗ ಜಲಪಾತ, ಆಗುಂಬೆ, ಗಾಜನೂರು ಡ್ಯಾಂ, ಬಿ. ಆರ್. ಪಿ ಡ್ಯಾಂ, ಹುಲಿ ಮತ್ತು ಸಿಂಹಧಾಮ, ಸಕ್ರೆಬೈಲು ಆನೆ ಬಿಡಾರ ಮತ್ತು ಪ್ರವಾಸೋದ್ಯಮ, ಅರಣ್ಯ ಇಲಾಖೆ, ಪ್ರಾಚ್ಯ ವಸ್ತು ಮತ್ತು ಪುರಾತತ್ವ ಇಲಾಖೆಗಳ ಪ್ರವಾಸಿ ತಾಣಗಳು ಮತ್ತು ಇತ್ಯಾದಿ ಪ್ರೇಕ್ಷಣೀಯ ಸ್ಥಳಗಳಿಗೆ ಆಗಮಿಸುವರು ಸಹ ಈ ನಿಯಮ ಪಾಲಿಸಬೇಕು.
* ಪ್ರವಾಸಿಗರು ಹಾಗೂ ಸಾರ್ವಜನಿಕರಿಗೆ ಹಿಂದಿನ 72 ಗಂಟೆಗಳ ಒಳಗಾಗಿ ಮಾಡಿಸಿದ ಆರ್ಟಿಪಿಸಿಆರ್ ನೆಗೆಟಿವ್ ವರದಿ/ ಆರ್ಎಟಿ ನೆಗೆಟಿವ್ ವರದಿ/ ಕೋವಿಡ್ 2ನೇ ಲಸಿಕೆ ಪಡೆದ ಪ್ರಮಾಣ ಪತ್ರ ಹೊಂದಿರುವುದನ್ನು ಕಡ್ಡಾಯಗೊಳಿಸಲಾಗಿದೆ.
ಕೇರಳ ಮತ್ತು ಮಹಾರಾಷ್ಟ್ರ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಆದ್ದರಿಂದ ಕರ್ನಾಟಕ ಸರ್ಕಾರ ಗಡಿ ಜಿಲ್ಲೆಗಳಲ್ಲಿ ವಾರಾಂತ್ಯದ ಕರ್ಫ್ಯೂ ಜಾರಿಗೊಳಿಸಿದೆ. ರಾಜ್ಯಾದ್ಯಂತ ರಾತ್ರಿ 9 ರಿಂದ ಬೆಳಗ್ಗೆ 5 ಗಂಟೆಯ ತನಕ ರಾತ್ರಿ ಕರ್ಫ್ಯೂ ಜಾರಿಗೊಳಿಸಿದೆ.
ಶಿವಮೊಗ್ಗ ಜಿಲ್ಲೆಯ ವಿವಿಧ ಪ್ರವಾಸಿ ತಾಣಗಳಿಗೆ ಬೇರೆ-ಬೇರೆ ರಾಜ್ಯದ ಪ್ರವಾಸಿಗರು ಸಹ ಆಗಮಿಸುತ್ತಾರೆ. ಅವರಿಂದ ಜಿಲ್ಲೆಯಲ್ಲಿ ಕೋವಿಡ್ ಹರಡುವಿಕೆ ತಡೆಯಲು ಜಿಲ್ಲಾಡಳಿತ ಮಾರ್ಗಸೂಚಿಯನ್ನು ಪರಿಷ್ಕರಣೆ ಮಾಡಿ ಆದೇಶ ಹೊರಡಿಸಿದೆ.
ಬುಧವಾರದ ವರದಿಯಂತೆ ಶಿವಮೊಗ್ಗ ಜಿಲ್ಲೆಯಲ್ಲಿ 47 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ಜಿಲ್ಲೆಯಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 558. ಇದುವರೆಗೂ ಜಿಲ್ಲೆಯಲ್ಲಿ 67431 ಪ್ರಕರಣ ದಾಖಲಾಗಿದೆ. ಒಟ್ಟು 1063 ಜನರು ಮೃತಪಟ್ಟಿದ್ದಾರೆ.
ನದಿಪಾತ್ರದ ಜನರಿಗೆ ಎಚ್ಚರಿಕೆ; ಸಾಗರದಲ್ಲಿರುವ ಲಿಂಗನಮಕ್ಕಿ ಡ್ಯಾಂ ಜಲಾನಯನ ಪ್ರದೇಶದಲ್ಲಿ ಸತತವಾಗಿ ಬೀಳುತ್ತಿರುವ ಮಳೆಯಿಂದ ಜಲಾಶಯದ ನೀರಿನ ಮಟ್ಟ ಏರಿಕೆಯಾಗುತ್ತಿದೆ.
ಡ್ಯಾಂನಿಂದ ಹೆಚ್ಚುವರಿ ನೀರನ್ನು ನದಿಗೆ ಬಿಡುವ ಸಂಭವ ಇರುವುದರಿಂದ ಅಣೆಕಟ್ಟೆಯ ಕೆಳದಂಡೆ ಹಾಗೂ ನದಿ ಪಾತ್ರದುದ್ದಕ್ಕೂ ಇರುವ ಜನರು ಸುರಕ್ಷಿತ ಪ್ರದೇಶಗಳಿಗೆ ತೆರಳುವಂತೆ ಮನವಿ ಮಾಡಲಾಗಿದೆ.
ಲಿಂಗನಮಕ್ಕಿ ಜಲಾಶಯದ ಗರಿಷ್ಟ ಮಟ್ಟ 1,819 ಅಡಿಗಳಾಗಿದ್ದು. ಆಗಸ್ಟ್ 12ರ ಗುರುವಾರ ಬೆಳಗ್ಗೆ 8 ಗಂಟೆಗೆ ಡ್ಯಾಂ ನೀರಿನ ಮಟ್ಟ 1,812 ಅಡಿಗಳಾಗಿದೆ. ಜಲಾಶಯದ ಒಳಹರಿವು 11,174 ಕ್ಯೂಸೆಕ್ ಆಗಿದೆ.ರುತ್ತದೆ












Click it and Unblock the Notifications