ಶಿವಮೊಗ್ಗ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಿಸಿದ ಜೆಡಿಎಸ್!
ಮಂಗಳವಾರ ಕೊಲ್ಲೂರು ಮೂಕಾಂಬಿಕ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ನಂತರ ಮಾತನಾಡಿದ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ, ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ದಿ. ಎಸ್.ಬಂಗಾರಪ್ಪ ಅವರ ಪತ್ನಿ ಶಕುಂತಲಾ ಬಂಗಾರಪ್ಪ ಅವರನ್ನು ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿಸಲಾಗುವುದು ಎಂದರು.
ಶಕುಂತಲಾ ಅವರನ್ನು ಲೋಕಸಭೆ ಚುನಾವಣೆ ಕಣಕ್ಕೆ ಇಳಿಸುವ ಕುರಿತು ಪಕ್ಷ ಈಗಾಗಲೇ ನಿರ್ಧರಿಸಿದೆ. ಅಂತಿಮ ಹಂತದ ಸಿದ್ಧತೆಗಳು ನಡೆಯುತ್ತಿವೆ ಎಂದು ದೇವೇಗೌಡರು ಸ್ಪಷ್ಟಪಡಿಸಿದರು. ಇದರಿಂದಾಗಿ ಎಲ್ಲಾ ಪಕ್ಷಗಳಿಗಿಂತ ಮೊದಲು ಅಭ್ಯರ್ಥಿಯನ್ನು ಘೋಷಿಸಿ, ಜೆಡಿಎಸ್ ಚುನಾವಣೆ ಸಿದ್ಧತೆ ಪ್ರಾರಂಭಿಸಿದೆ.
ದಿ.ಎಸ್.ಬಂಗಾರಪ್ಪ ಅವರ ಪುತ್ರ ಮಧು ಬಂಗಾರಪ್ಪ ಈಗಾಗಲೇ ಸೊರಬ ಕ್ಷೇತ್ರದ ಶಾಸಕರಾಗಿದ್ದಾರೆ. ಇವರ ಸಹೋದರ ಕುಮಾರ್ ಬಂಗಾರಪ್ಪ ಅವರು ಸೊರಬ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರು. ಸದ್ಯ ಬಂಗಾರಪ್ಪ ಅವರ ಪತ್ನಿ ಶಕುಂತಲಾ ಅವರನ್ನು ರಾಜಕೀಯಕ್ಕೆ ಕರೆತರಲು ಜೆಡಿಎಸ್ ಸಿದ್ಧವಾಗಿದೆ.
ಪಕ್ಷ ಬಲ ವರ್ಧನೆ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಕ್ಷವನ್ನು ಬಲಪಡಿಸಲು ತೀರ್ಮಾನಿಸಲಾಗಿದೆ. ಪಕ್ಷದ ರಾಜ್ಯಾಧ್ಯಕ್ಷರೊಡನೆ ಮಾತನಾಡಿ, ಪಕ್ಷದ ವರ್ಧನೆಗೆ ಕಾರ್ಯಕ್ರ ರೂಪಿಸಲಾಗುವುದು ಎಂದು ದೇವೇಗೌಡರು ತಿಳಿಸಿದರು.
ಲೋಕಸಭೆ ಚುನಾವಣೆಗೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪಕ್ಷವನ್ನು ಬಲ ಪಡಿಸಲು ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಚರ್ಚಿಸಿ, ಯೋಜನೆ ರೂಪಿಸುತ್ತೇನೆ ಎಂದರು. ತೃತೀಯ ರಂಗದ ಬಗ್ಗೆ ಕೇಳಿದ ಪ್ರಶ್ನೆಗೆ ಪಕ್ಷ ಬಲವರ್ಧನೆ ನಮ್ಮ ಮುಂದಿರುವ ಗುರಿ ಎಂದರು.