ಕೆಸರು ಗದ್ದೆಯಲ್ಲಿ ರೇಣುಕಾಚಾರ್ಯ, ಬೇಳೂರು ಪ್ರಚಾರ
ಶಿವಮೊಗ್ಗ, ಆ.18 : ಶಿಕಾರಿಪುರ ಕ್ಷೇತ್ರದ ಉಪ ಚುನಾವಣೆ ಪ್ರಚಾರ ಬಿರುಸುಗೊಂಡಿದೆ. ಮಂಗಳವಾರ ಬಹಿರಂಗ ಪ್ರಚಾರಕ್ಕೆ ತೆರೆ ಬೀಳುವ ಹಿನ್ನೆಲೆಯಲ್ಲಿ ಸೋಮವಾರ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಪೈಪೋಟಿಗೆ ಬಿದ್ದಂತೆ ಪ್ರಚಾರ ನಡೆಸಿ, ಮತದಾರರನ್ನು ಸೆಳೆಯಲು ಪ್ರಯತ್ನಿಸಿದರು.
ಶಿಕಾರಿಪುರದಲ್ಲಿ ಬಿ.ಎಸ್.ಯಡಿಯೂರಪ್ಪ ರೋಡ್ ಶೋ ನಡೆಸಿದರೆ, ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಮತ್ತು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಅಂಜಾನಾಪುರದ ಗದ್ದೆಯಲ್ಲಿ ನಾಟಿ ಮಾಡುವ ಮೂಲಕ ವಿಭಿನ್ನವಾಗಿ ಪ್ರಚಾರ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಎಂ.ಪಿ.ರೇಣುಕಾಚಾರ್ಯ ಕಾಂಗ್ರೆಸ್ ಮುಕ್ತ ಶಿಕಾರಿಪುರ ಎಂಬ ಘೋಷಣೆಯೊಂದಿಗೆ ನಾವು ಪ್ರಚಾರ ಮಾಡುತ್ತಿದ್ದೇವೆ. ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರು ಉಪ ಚುನಾವಣೆಯಲ್ಲಿ ಜಯಗಳಿಸುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು. [ಶಿಕಾರಿಪುರ 'ಶಿಕಾರಿ'ಗೆ ಒಂದಾದ ಕೈ-ತೆನೆ]
ಮತ್ತೊಂದೆಡೆ ಸಚಿವರಾದ ಯು.ಟಿ.ಖಾದರ್ ಮತ್ತು ಎಚ್.ಸಿ.ಮಹದೇವಪ್ಪ ಕಾಂಗ್ರೆಸ್ ಅಭ್ಯರ್ಥಿ ಶಾಂತವೀರಪ್ಪ ಗೌಡ ಪರ ಮತ ಯಾಚನೆ ಮಾಡಿದರು. ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿರುವ ಜೆಡಿಎಸ್ ನಾಯಕ ಎಚ್.ಟಿ.ಬಳಿಗಾರ್ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದರು.

ಆ.21ರಂದು ಕ್ಷೇತ್ರದಲ್ಲಿ ಮತದಾನ ನಡೆಯಲಿದ್ದು ಮಂಗಳವಾರ ಸಂಜೆ 5 ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರ ಪೈಪೋಟಿ ಇದ್ದು, ಚುನಾವಣೆಯಲ್ಲಿ ಜಯಗಳಿಸಲು ಕಾಂಗ್ರೆಸ್ ಜೆಡಿಎಸ್ ಬೆಂಬಲವನ್ನು ಪಡೆದುಕೊಂಡಿದೆ. ಅಂದಹಾಗೆ ಆ.25ರಂದು ಚುನಾವಣಾ ಫಲಿತಾಂಶ ಹೊರಬೀಳಲಿದೆ.











Click it and Unblock the Notifications