'ಕುಮಾರಸ್ವಾಮಿ ಸಿಎಂ ಆಗಬೇಕೆಂಬ ಬಂಗಾರಪ್ಪ ಆಸೆ ಈಡೇರಿಸಿದ ಕಾಂಗ್ರೆಸ್'
Recommended Video

ಶಿವಮೊಗ್ಗ, ಅಕ್ಟೋಬರ್ 23: ಬಿಜೆಪಿಯನ್ನು ಅಧಿಕಾರದಿಂದ ದೂರ ಇರಿಸಬೇಕು. ಕುಮಾರಸ್ವಾಮಿ ಮುಖ್ಯಮಂತ್ರಿ ಆಗಬೇಕು ಎನ್ನುವುದು ಬಂಗಾರಪ್ಪ ಅವರ ಆಸೆಯಾಗಿತ್ತು. ಆ ಆಸೆ ಇಂದು ಕಾಂಗ್ರೆಸ್ ಸಹಕಾರದಿಂದ ಸಾಧ್ಯವಾಗಿದೆ ಎಂದು ಶಿವಮೊಗ್ಗದ ಜೆಡಿಎಸ್ ಅಭ್ಯರ್ಥಿ ಮಧು ಬಂಗಾರಪ್ಪ ಹೇಳಿದರು.
ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಂತೆಯೇ ಎರಡೂ ಪಕ್ಷಗಳ ಕಾರ್ಯಕರ್ತರು ಒಂದಾಗಿ ನನ್ನನ್ನು ಗೆಲ್ಲಿಸಬೇಕು ಎಂದು ಅವರು ಮನವಿ ಮಾಡಿದರು.
ಮುಂಬರುವ 2019ರ ಲೋಕಸಭೆ ಚುನಾವಣೆಗೆ ಕಾಂಗ್ರೆಸ್-ಬೆಡಿಎಸ್ ಮೈತ್ರಿಯು ಶಿವಮೊಗ್ಗದಿಂದಲೇ ಆರಂಭಗೊಳ್ಳಲಿದೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಹೇಳಿದ್ದಾರೆ.
ಉಪ ಚುನಾವಣೆಗೆ ಕಾಂಗ್ರೆಸ್ ಬೆಂಬಲದೊಂದಿಗೆ ಸ್ಪರ್ಧಿಸಿರುವ ತಮ್ಮ ಪಕ್ಷದ ಮಧು ಬಂಗಾರಪ್ಪ ಅವರ ಪರ ಪ್ರಚಾರ ನಡೆಸಿದರು.

ಚುನಾವಣೆಗೆ ದಿಕ್ಸೂಚಿ
ನಮ್ಮ ದೇಶದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಮಾತ್ರ ರಾಷ್ಟ್ರೀಯ ಪಕ್ಷಗಳಾಗಿ ಬಿಂಬಿತವಾಗಿವೆ. ಉಳಿದ ಎಲ್ಲವೂ ಪ್ರಾದೇಶಿಕ ಪಕ್ಷಗಳಾಗಿವೆ. ಹೀಗಾಗಿ ಸೀಟು ಹಂಚಿಕೆಯಲ್ಲಿ ರಾಷ್ಟ್ರೀಯ ಪಕ್ಷಕ್ಕೆ ಆದ್ಯತೆ ನೀಡಬೇಕಾಗುತ್ತದೆ.
ರಾಹುಲ್ ಗಾಂಧಿ ಅವರು ರಾಷ್ಟ್ರೀಯ ಪಕ್ಷದ ಅಧ್ಯಕ್ಷರು. ಅವರನ್ನು ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸುವುದಕ್ಕೆ ತಮ್ಮ ಯಾವುದೇ ಆಕ್ಷೇಪವಿಲ್ಲ. 2019ರ ಸಾರ್ವತ್ರಿಕ ಚುನಾವಣೆಗೆ ಈಗಿನ ಉಪ ಚುನಾವಣೆ ದಿಕ್ಸೂಚಿಯಾಗಲಿದೆ ಎಂದರು.

ಸ್ಪಷ್ಟ ಸಂದೇಶ ರವಾನೆ
ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ರಚನೆಯಾಗುವ ಸಂದರ್ಭದಲ್ಲಿ ದೇಶದ ಎಲ್ಲ ಪ್ರಾದೇಶಿಕ ಪಕ್ಷಗಳ ನಾಯಕರು ಆಗಮಿಸಿ ಮೈತ್ರಿಗೆ ಬೆಂಬಲ ನೀಡಿದ್ದಾರೆ. ಉಪ ಚುನಾವಣೆಯಲ್ಲಿಯೂ ಮೈತ್ರಿ ಮಾಡಿಕೊಳ್ಳುವ ಮೂಲಕ ಕೇಂದ್ರ ಸರ್ಕಾರಕ್ಕೆ ಸ್ಪಷ್ಟವಾದ ಸಂದೇಶ ರವಾನಿಸಲಾಗುತ್ತಿದೆ ಎಂದರು.

ಆಡಳಿತ ನೋಡಿ ಒಂದಾದರು
ನಾಲ್ಕೂವರೆ ವರ್ಷದಲ್ಲಿ ಬಿಜೆಪಿ ನೇತೃತ್ವದ ಸರ್ಕಾರದ ಆಡಳಿತ ನೋಡಿರುವ ಎಲ್ಲ ಪ್ರಾದೇಶಕ ಪಕ್ಷಗಳ ಮುಖಂಡರು ಒಂದಾಗಿದ್ದಾರೆ. ದೇಶಕ್ಕೆ ಶಾಂತಿ ಮತ್ತು ಸಹಬಾಳ್ವೆಯ ಅಗತ್ಯವಿದೆ. ಮುಸ್ಲಿಮರು ಮತ್ತು ಕ್ರೈಸ್ತ ಧರ್ಮೀಯರನ್ನು ಜತೆಯಾಗಿ ಕರೆದುಕೊಂಡು ಹೋಗುವುದು ಸರ್ಕಾರದ ಜವಾಬ್ದಾರಿ. ಆದರೆ, ಬಿಜೆಪಿಯವರ ಬಾಯಿಂದ ಬರುವ ಯಾವ ಮಾತುಗಳಿಗೂ ಅರ್ಥವಿಲ್ಲದಂತಾಗಿದೆ ಎಂದು ಕಿಡಿಕಾರಿದರು.

ಬಿಜೆಪಿ ಬಾಗಿಲು ಬಂದ್
ದಕ್ಷಿಣ ಭಾರತದ ಬಾಗಿಲು ಕರ್ನಾಟಕದ ಮೂಲಕ ತೆರೆದಿದ್ದಾಗಿ ಬಿಜೆಪಿ ಹೇಳಿಕೊಂಡಿದೆ. ಆದರೆ, ಈ ಬಾಗಿಲನ್ನು ನಾವು ಮುಚ್ಚುತ್ತೇವೆ. ಕರ್ನಾಟಕದ ಮೂಲಕ ದಕ್ಷಿಣದಲ್ಲಿ ಅಧಿಕಾರ ಸ್ಥಾಪಿಸುವ ಬಿಜೆಪಿಯ ಆಸೆ ಕನಸಾಗಿಯೇ ಉಳಿಯಲಿದೆ. ಬಿಜೆಪಿ ನಡೆಸಿದ ದುರಾಡಳಿತವನ್ನು ಮತದಾರರು ಅರ್ಥ ಮಾಡಿಕೊಳ್ಳುತ್ತಾರೆ ಎಂಬ ಭರವಸೆ ಇದೆ ಎಂಬುದಾಗಿ ದೇವೇಗೌಡ ಹೇಳಿದರು.

ಬಿಜೆಪಿಗೆ ನೈತಿಕತೆ ಇಲ್ಲ
ಎಸ್. ಬಂಗಾರಪ್ಪ ಅವರ ಕುರಿತು ಮಾತನಾಡುವ ಯಾವುದೇ ನೈತಿಕತೆ ಬಿಜೆಪಿಗೆ ಇಲ್ಲ. ಬಿಜೆಪಿಗೆ ಸೇರ್ಪಡೆಗೊಂಡಿದ್ದ ಬಂಗಾರಪ್ಪ ಅವರನ್ನು ಪಕ್ಷ ಹೇಗೆ ನಡೆಸಿಕೊಂಡಿತು ಎನ್ನುವುದು ಜನರಿಗೆ ತಿಳಿದಿದೆ. ಬಂಗಾರಪ್ಪ ಅವರನ್ನು ಪಕ್ಷಕ್ಕೆ ಸೇರಿಸಿಕೊಂಡು ಬಿಜೆಪಿ 79 ಸ್ಥಾನ ಪಡೆದುಕೊಂಡಿತು. ಬಳಿಕ ಅವರನ್ನು ಯಾವ ರೀತಿ ನಡೆಸಿಕೊಂಡಿದ್ದೀರಾ ಎನ್ನುವುದು ಗೊತ್ತಿದೆ ಎಂದರು.

ಒಮ್ಮತದಿಂದ ಅಭ್ಯರ್ಥಿ ಆಯ್ಕೆ
ಶಿವಮೊಗ್ಗ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುವುದಿಲ್ಲ ಎಂದು ಹೇಳಿದ ಬಳಿಕವೇ ಜೆಡಿಎಸ್ ಅಭ್ಯರ್ಥಿಯನ್ನು ಹಾಕಲು ನಿರ್ಧರಿಸಲಾಯಿತು. ಸಿದ್ದರಾಮಯ್ಯ, ವೇಣುಗೋಪಾಲ್ ಮತ್ತು ನಾವೆಲ್ಲ ಸೇರಿ ಎಲ್ಲ ಐದು ಕ್ಷೇತ್ರಗಳಲ್ಲಿ ಒಮ್ಮತದ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಒಟ್ಟಿಗೆ ಪ್ರಚಾರ ಮಾಡಲು ನಿರ್ಧರಿಸಿದ್ದೇವೆ. ನಮ್ಮ ಈ ಪ್ರಯತ್ನದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ನಮ್ಮ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸವಿದೆ ಎಂದರು.

ಭಿನ್ನಾಭಿಪ್ರಾಯ ಮರೆತು ಕೆಲಸ ಮಾಡಿ
ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳಿರಬಹುದು. ಆದರೆ, ಅವುಗಳನ್ನು ಮರೆತು ಕೆಲಸ ಮಾಡಬೇಕು. ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಜನರು ಮೈತ್ರಿಗೆ ಬೆಂಬಲ ನೀಡಬೇಕು.
ಮೈತ್ರಿ ಸರ್ಕಾರ ಚೆನ್ನಾಗಿ ಕೆಲಸ ಮಾಡುತ್ತಿದೆ. ಶಾಸಕನಾಗಿದ್ದ ಸಂದರ್ಭದಲ್ಲಿ ಸಚಿವರಾಗಿದ್ದ ಕಾಗೋಡು ತಿಮ್ಮಪ್ಪ ಅವರ ಸಹಕಾರದಿಂದ ಬಗರ್ ಹುಕುಂ ರೈತರಿಗೆ ಹಕ್ಕುಪತ್ರ ಕೊಡಿಸಿದ್ದೇನೆ. ದೈವದ ಇಚ್ಛೆಯಂತೆ ಈ ಚುನಾವಣೆಯಲ್ಲಿ ಅಭ್ಯರ್ಥಿಯಾಗಿದ್ದೇನೆ. ಉತ್ತಮ ಕೆಲಸ ಮಾಡಿ ಜಿಲ್ಲೆಯ ಜನರ ಸೇವೆ ಮಾಡುತ್ತೇನೆ ಎಂದು ಮಧು ಬಂಗಾರಪ್ಪ ಹೇಳಿದರು.












Click it and Unblock the Notifications