ಶಿವಮೊಗ್ಗ ಉಪ ಚುನಾವಣೆ : ಮೂವರು ಮಾಜಿ ಸಿಎಂ ಪುತ್ರರು ಕಣದಲ್ಲಿ!
Recommended Video

ಶಿವಮೊಗ್ಗ, ಅಕ್ಟೋಬರ್ 15 : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಕಣ ರಂಗೇರಿದೆ. ಈ ಬಾರಿಯ ಚುನಾವಣೆಯಲ್ಲಿ ಮೂವರು ಮಾಜಿ ಮುಖ್ಯಮಂತ್ರಿಗಳ ಪುತ್ರರು ವಿವಿಧ ಪಕ್ಷಗಳಿಂದ ಅಭ್ಯರ್ಥಿಗಳಾಗಿರುವುದು ವಿಶೇಷ.
ಶಿವಮೊಗ್ಗ ಜಿಲ್ಲೆಗೆ ಸೇರಿದ ಕಡಿದಾಳ್ ಮಂಜಪ್ಪ, ಜೆ.ಎಚ್.ಪಟೇಲ್, ಎಸ್.ಬಂಗಾರಪ್ಪ ಮತ್ತು ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನ ಅಲಂಕರಿಸಿದ್ದಾರೆ. ರಾಜ್ಯಕ್ಕೆ ನಾಲ್ವರು ಮುಖ್ಯಮಂತ್ರಿಗಳನ್ನು ಕೊಟ್ಟ ಜಿಲ್ಲೆ ಶಿವಮೊಗ್ಗ.
ಮಾಜಿ ಮುಖ್ಯಮಂತ್ರಗಳ ಮಕ್ಕಳು ರಾಜಕಾರಣಕ್ಕೆ ಬಂದು ಸಕ್ರಿಯರಾಗಿದ್ದಾರೆ. ಆ ಮೂಲಕ ಕುಟುಂಬ ರಾಜಕಾರಣವನ್ನು ಮುಂದುವರೆಸಿದ್ದಾರೆ. ಈ ಬಾರಿ ಉಪ ಚುನಾವಣೆ ಶಿವಮೊಗ್ಗದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.
ನವೆಂಬರ್ 3ರಂದು ನಡೆಯಲಿರುವ ಉಪ ಚುನಾವಣೆಗೆ ಬಿ.ವೈ.ರಾಘವೇಂದ್ರ, ಮಧು ಬಂಗಾರಪ್ಪ ಮತ್ತು ಮಹಿಮಾ ಪಟೇಲ್ ಅಭ್ಯರ್ಥಿಯಾಗಿದ್ದಾರೆ. ಈ ಮೂವರು ಮಾಜಿ ಮುಖ್ಯಮಂತ್ರಿಗಳ ಪುತ್ರರು ಎಂಬುದು ವಿಶೇಷವಾಗಿದೆ....

ಬಿ.ವೈ.ರಾಘವೇಂದ್ರ
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಬಿ.ವೈ.ರಾಘವೇಂದ್ರ ನಾಮಪತ್ರ ಸಲ್ಲಿಸಿದ್ದಾರೆ. ರಾಘವೇಂದ್ರ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ. 2009ರ ಚುನಾವಣೆಯಲ್ಲಿಯೂ ರಾಘವೇಂದ್ರ ಅವರು ಗೆಲುವು ಸಾಧಿಸಿದ್ದರು. 2ನೇ ಬಾರಿ ಅವರು ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ.

ಮಧು ಬಂಗಾರಪ್ಪ
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಮಧು ಬಂಗಾರಪ್ಪ ಜೆಡಿಎಸ್ ಅಭ್ಯರ್ಥಿ. ಅಕ್ಟೋಬರ್ 16ರಂದು ಅವರು ನಾಮಪತ್ರವನ್ನು ಸಲ್ಲಿಸಲಿದ್ದಾರೆ. ಮಧು ಬಂಗಾರಪ್ಪ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ಪುತ್ರ. ಸೊರಬ ಕ್ಷೇತ್ರದ ಶಾಸಕರಾಗಿದ್ದ ಅವರು 2018ರ ಚುನಾವಣೆಯಲ್ಲಿ ಸೋತಿದ್ದರು. ಈಗ ಲೋಕಸಭೆ ಉಪ ಚುನಾವಣೆ ಕಣಕ್ಕಿಳಿಯುತ್ತಿದ್ದಾರೆ.

ಮಹಿಮಾ ಪಟೇಲ್
ಮಾಜಿ ಮುಖ್ಯಮಂತ್ರಿ ಜೆ.ಎಚ್.ಪಟೇಲ್ ಪುತ್ರ ಮಹಿಮಾ ಪಟೇಲ್ ಶಿವಮೊಗ್ಗ ಲೋಕಸಭೆ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಿ ಅಚ್ಚರಿ ಮೂಡಿಸಿದ್ದಾರೆ. ಮಹಿಮಾ ಪಟೇಲ್ ದಾವಣಗೆರೆ ಜಿಲ್ಲೆಯ ಚನ್ನಗಿರಿ ಕ್ಷೇತ್ರದ ಮಾಜಿ ಶಾಸಕರು. 2018ರ ಚುನಾವಣೆಯಲ್ಲಿ ಅವರು ಜೆಡಿಯು ಪಕ್ಷದಿಂದ ಚನ್ನಗಿರಿಯಲ್ಲಿ ಕಣಕ್ಕಿಳಿದು ಸೋಲು ಅನುಭವಿಸಿದ್ದರು. ಈಗ ಲೋಕಸಭೆ ಉಪ ಚುನಾವಣೆಗೆ ಶಿವಮೊಗ್ಗದಿಂದ ಸ್ಪರ್ಧೆ ಮಾಡುತ್ತಿದ್ದಾರೆ.

ಅಪ್ಪ-ಮಗ ಸಂಸದ
ಕಳೆದ ಎರಡು ಲೋಕಸಭೆ ಚುನಾವಣೆಗಳಿಂದ ಶಿವಮೊಗ್ಗದಲ್ಲಿ ಬಿಜೆಪಿಯ್ದೇ ಪಾರುಪತ್ಯ. ಅಪ್ಪ-ಮಕ್ಕಳು ಸಂಸದರಾಗಿ ಆಯ್ಕೆಯಾಗುತ್ತಿದ್ದಾರೆ. 2009ರ ಚುನಾವಣೆಯಲ್ಲಿ ಬಿ.ವೈ.ರಾಘವೇಂದ್ರ ಗೆಲುವು ಸಾಧಿಸಿದ್ದರು. 2014ರ ಚುನಾವಣೆಯಲ್ಲಿ ಬಿ.ಎಸ್.ಯಡಿಯೂರಪ್ಪ ಗೆಲುವು ಸಾಧಿಸಿದ್ದರು. ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಬಿ.ವೈ.ರಾಘವೇಂದ್ರ ಅಭ್ಯರ್ಥಿಯಾಗಿದ್ದಾರೆ.












Click it and Unblock the Notifications