ಬಿಎಸ್ವೈಗೆ ಶಿವಮೊಗ್ಗ ಲೋಕಾಯುಕ್ತ ಕೋರ್ಟ್ನಿಂದ ಸಮನ್ಸ್
ಶಿವಮೊಗ್ಗ, ಫೆಬ್ರವರಿ 18 : ಮಾಜಿ ಮುಖ್ಯಮಂತ್ರಿ ಮತ್ತು ಶಿವಮೊಗ್ಗ ಸಂಸದ ಬಿ.ಎಸ್.ಯಡಿಯೂರಪ್ಪ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಕರ್ನಾಟಕ ಗೃಹ ಮಂಡಳಿ ನಿವೇಶನ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿದೆ.
2012ರಲ್ಲಿ ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ವಕೀಲ ವಿನೋದ್ ಅವರು ಶಿವಮೊಗ್ಗದ ಲೋಕಾಯುಕ್ತ ನ್ಯಾಯಾಲಯದಲ್ಲಿ ಯಡಿಯೂರಪ್ಪ ಮತ್ತು ಇತರ 6 ಜನರ ವಿರುದ್ಧ ದೂರು ದಾಖಲಿಸಿದ್ದರು. ಕೋರ್ಟ್ ಈ ಬಗ್ಗೆ ತನಿಖೆ ನಡೆಸುವಂತೆ ಕೋರ್ಟ್ ಲೋಕಾಯುಕ್ತ ಪೊಲೀಸರಿಗೆ ಸೂಚಿಸಿತ್ತು. [ಯಡಿಯೂರಪ್ಪಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಬಹುತೇಕ ಖಚಿತ]

ಲೋಕಾಯುಕ್ತ ಪೊಲೀಸರು ತನಿಖೆ ನಡೆಸಿ ಸಲ್ಲಿಸಿದ್ದ ಬಿ ರಿಪೋರ್ಟ್ ತಿರಸ್ಕರಿಸಿರುವ ನ್ಯಾಯಾಲಯ, ವಿಚಾರಣೆ ಆರಂಭಿಸಿದೆ. ಯಡಿಯೂರಪ್ಪ, ಯಡಿಯೂರಪ್ಪ ಪುತ್ರಿ ಅರುಣಾದೇವಿ ಸೇರಿದಂತೆ 6 ಜನರು ವಿಚಾರಣೆಗೆ ಹಾಜರಾಗಬೇಕು ಎಂದು ಬುಧವಾರ ಸಮನ್ಸ್ ಜಾರಿಗೊಳಿಸಿದೆ. [FIR ರದ್ದಾದರೂ ಯಡಿಯೂರಪ್ಪ ಕಾನೂನು ಹೋರಾಟ ಮುಗಿದಿಲ್ಲ]
ಏನಿದು ಪ್ರಕರಣ? : ಕರ್ನಾಟಕ ಗೃಹ ಮಂಡಳಿ ವಿನೋಬನಗರದ ಕಲ್ಲಹಳ್ಳಿ ಬಳಿ ಬಡಾವಣೆ ಅಭಿವೃದ್ಧಿಪಡಿಸಿತ್ತು. ಈ ಬಡಾವಣೆಯಲ್ಲಿ 4 ನಿವೇಶನಗಳನ್ನು ತಮ್ಮ ಸಂಸ್ಥೆಯಲ್ಲಿ ಕೆಲಸ ಮಾಡುವವರಿಗೆ ನೀಡುವಂತೆ ಯಡಿಯೂರಪ್ಪ ಅವರು ಉಪ ಮುಖ್ಯಮಂತ್ರಿಗಳಾಗಿದ್ದಾಗ ಶಿಫಾರಸು ಮಾಡಿದ್ದರು.
ಶಿಫಾರಸಿನ ಅನ್ವಯ ಗೃಹ ಮಂಡಳಿ ನಿವೇಶನ ನೀಡಿತ್ತು. ಆದರೆ, ನಂತರ 4 ನಿವೇಶನಗಳನ್ನು ಯಡಿಯೂರಪ್ಪ ಅವರ ಪುತ್ರಿ ಅರುಣಾದೇವಿ ಅವರ ಹೆಸರಿಗೆ ನೋಂದಣಿ ಮಾಡಿಸಲಾಗಿತ್ತು. ಇದನ್ನು ಪ್ರಶ್ನಿಸಿ ವಕೀಲ ವಿನೋದ್ ಲೋಕಾಯುಕ್ತ ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದರು.
ಕೋರ್ಟ್ ಆದೇಶದಂತೆ ತನಿಖೆ ನಡೆಸಿದ್ದ ಲೋಕಾಯುಕ್ತ ಪೊಲೀಸರು ಕಾನೂನಿನ ಅನ್ವಯ ನಿವೇಶನ ಖರೀದಿ ಮಾಡಲಾಗಿದೆ ಎಂದು ಬಿ ರಿಪೋರ್ಟ್ ಸಲ್ಲಿಸಿದ್ದರು. ಇದನ್ನು ಪ್ರಶ್ನಿಸಿ ವಿನೋದ್ ಅವರು ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು.
ಅರ್ಜಿಯ ವಿಚಾರಣೆಯನ್ನು ಬುಧವಾರ ನಡೆಸಿದ ನ್ಯಾಯಮೂರ್ತಿ ಎಂ.ಜಿ.ಖಾಜಿ ಅವರು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದ್ದಾರೆ. ಯಡಿಯೂರಪ್ಪ, ಅರುಣಾದೇವಿ, ಸಂದೇಶ್ ಗೌಡ, ಶಿವಶಂಕರ್, ಮಂಜುನಾಥ್, ಕೃಷ್ಣ ಅವರಿಗೆ ಸಮನ್ಸ್ ನೀಡಲಾಗಿದ್ದು, ಮಾರ್ಚ್ 18ಕ್ಕೆ ಮುಂದಿನ ವಿಚಾರಣೆ ನಡೆಯಲಿದೆ.












Click it and Unblock the Notifications