ಶಿವಮೊಗ್ಗದಲ್ಲಿ ವಿದ್ಯಾರ್ಥಿಗಳಿಗೆ ಆರತಿ ಬೆಳಗಿದ ಅಧಿಕಾರಿಗಳು; ಹೇಗಿತ್ತು ಮೊದಲ ದಿನದ ತರಗತಿಗಳು?
ಶಿವಮೊಗ್ಗ, ಆಗಸ್ಟ್ 23: ಕೊರೊನಾ ಮೂರನೇ ಅಲೆ ಆತಂಕದ ನಡುವೆಯೂ ರಾಜ್ಯಾದ್ಯಂತ ಶಾಲಾ- ಕಾಲೇಜುಗಳ ಭೌತಿಕ ತರಗತಿಗಳು ಇಂದಿನಿಂದ (ಆ.23) ಪುನರಾರಂಭವಾಗಿವೆ.
ಶಿವಮೊಗ್ಗ ಜಿಲ್ಲೆಯಲ್ಲೂ ಶಾಲೆ- ಕಾಲೇಜುಗಳಲ್ಲಿ ಪಾಠ ಶುರುವಾಗಿದ್ದು, ಮೊದಲ ದಿನ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೋವಿಡ್ ನಿಯಮ ಕಡ್ಡಾಯ ಪಾಲನೆಗೆ ಕ್ರಮ ಕೈಗೊಳ್ಳಲಾಗಿದೆ.
ಶಿವಮೊಗ್ಗದ ಕರ್ನಾಟಕ ಸಂಘ ಪಕ್ಕದಲ್ಲಿರುವ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಆರತಿ ಬೆಳಗಿ ಶಾಲೆಗೆ ಸ್ವಾಗತಿಸಲಾಯಿತು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವೈಶಾಲಿ ಮಕ್ಕಳಿಗೆ ಆರತಿ ಬೆಳಗಿದರು.
ಥರ್ಮಲ್ ಸ್ಕ್ಯಾನಿಂಗ್, ಸಾಮಾಜಿಕ ಅಂತರ
ಕೋವಿಡ್ ತಡೆಗೆ ಪ್ರಕಟಿಸಿರುವ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಸರ್ಕಾರ ಸೂಚಿಸಿದೆ. ಅದರಂತೆ ಶಾಲೆ ಮತ್ತು ಕಾಲೇಜಿಗೆ ಆಗಮಿಸಿರುವ ವಿದ್ಯಾರ್ಥಿಗಳಿಗೆ ಥರ್ಮಲ್ ಸ್ಕ್ಯಾನಿಂಗ್ ಮಾಡಲಾಯಿತು. ತರಗತಿಗಳಲ್ಲಿ ವಿದ್ಯಾರ್ಥಿಗಳು ಸಾಮಾಜಿಕ ಅಂತರ ಕಾಪಾಡುವಂತೆ ಸೂಚಿಸಲಾಗಿತ್ತು. ಅದರಂತೆ ಪ್ರತಿ ಡೆಸ್ಕ್ಗೆ ಇಬ್ಬರು ವಿದ್ಯಾರ್ಥಿಗಳನ್ನು ಕೂರಿಸಲಾಗಿತ್ತು.
ಮಿನಿಸ್ಟರ್ ಭೇಟಿ, ಪರಿಶೀಲನೆ
ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಕ್ಕಳೊಂದಿಗೆ ಮಾತನಾಡಿದ ಸಚಿವ ಈಶ್ವರಪ್ಪ, ಕೋವಿಡ್ ನಿಯಮಗಳನ್ನು ಪಾಲಿಸಬೇಕು. ಯಾರೂ ಆತಂಕಪಡಬಾರದು ಎಂದು ತಿಳಿಸಿದರು.
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಈಶ್ವರಪ್ಪ, ಮಕ್ಕಳು ಓದಿನಲ್ಲಿ ಹಿಂದುಳಿಯಬಾರದು ಎಂಬ ಕಾರಣಕ್ಕೆ ಸರ್ಕಾರ ದಿಟ್ಟ ನಿರ್ಧಾರ ತೆಗೆದುಕೊಂಡಿದೆ. ಅನೇಕ ಮಂದಿ ಇದನ್ನು ಟೀಕಿಸಿದ್ದಾರೆ. ಆದರೆ ಮಕ್ಕಳು ಓದಿನಲ್ಲಿ ಹಿಂದುಳಿಯಬಾರದು ಎಂಬುದು ನಮ್ಮ ಉದ್ದೇಶ. ಮಕ್ಕಳು ಖುಷಿಯಿಂದ ಶಾಲೆಗೆ ಬಂದಿದ್ದಾರೆ. ಪೋಷಕರು ಕೂಡ ಭಯ ಬೀಳದೆ ಶಾಲೆ, ಕಾಲೇಜುಗಳಿಗೆ ವಿದ್ಯಾರ್ಥಿಗಳನ್ನು ಕಳುಹಿಸಬೇಕು ಎಂದು ಮನವಿ ಮಾಡಿದರು.
ಸ್ಕೂಲು, ಕಾಲೇಜುಗಳಲ್ಲಿ ಉತ್ತಮ ಪ್ರತಿಕ್ರಿಯೆ
ಮೊದಲ ದಿನ ಶಾಲಾ- ಕಾಲೇಜುಗಳಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ 465 ಪ್ರೌಢ ಶಾಲೆಗಳಿವೆ. ಇದರಲ್ಲಿ 9ನೇ ತರಗತಿಯ 25,405 ಮತ್ತು 10ನೇ ತರಗತಿಯ 24,600 ಸೇರಿ ಒಟ್ಟು 50,005 ವಿದ್ಯಾರ್ಥಿಗಳಿದ್ದಾರೆ.
ಶಿವಮೊಗ್ಗ ಜಿಲ್ಲೆಯಲ್ಲಿ 134 ಪಿಯುಸಿ ಕಾಲೇಜುಗಳಿವೆ. ಪ್ರಥಮ ಮತ್ತು ದ್ವಿತೀಯ ಪಿಯುಸಿಯಲ್ಲಿ 38 ಸಾವಿರ ವಿದ್ಯಾರ್ಥಿಗಳು ಜಿಲ್ಲೆಯಲ್ಲಿದ್ದಾರೆ. ನೂರಕ್ಕೂ ಅಧಿಕ ವಿದ್ಯಾರ್ಥಿಗಳು ತರಗತಿಯಲ್ಲಿರುವ ಕಡೆಗಳಲ್ಲಿ ಸೋಮವಾರದಿಂದ ಬುಧವಾರ ಮತ್ತು ಗುರುವಾರದಿಂದ ಶನಿವಾರದವರೆಗೆ ತರಗತಿಗಳನ್ನು ನಡೆಸಲು ನಿರ್ಧರಿಸಲಾಗಿದೆ.
ಶೇ.40ರಷ್ಟು ಶಿಕ್ಷಕರಿಗಷ್ಟೆ ಎರಡನೇ ಡೋಸ್
ಶಿವಮೊಗ್ಗ ಜಿಲ್ಲೆಯಲ್ಲಿ ಎಲ್ಲಾ ಶಿಕ್ಷಕರು ಮೊದಲ ಡೋಸ್ ಕೋವಿಡ್ ಲಸಿಕೆ ಪಡೆದುಕೊಂಡಿದ್ದಾರೆ. ಶೇ.40ರಷ್ಟು ಶಿಕ್ಷಕರು ಮಾತ್ರ ಈವರೆಗೂ ಎರಡನೇ ಡೋಸ್ ಲಸಿಕೆ ಪಡೆದುಕೊಂಡಿದ್ದಾರೆ ಎಂದು ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ.
ಶಿವಮೊಗ್ಗ ಜಿಲ್ಲೆಯಲ್ಲಿ ಮೊದಲ ದಿನ ಯಾವುದೇ ಗೊಂದಲವಿಲ್ಲದೆ ಶಾಲೆ, ಕಾಲೇಜುಗಳು ಆರಂಭವಾಗಿದೆ. ವಿದ್ಯಾರ್ಥಿಗಳು ಕೂಡ ನಿರಾತಂಕವಾಗಿ ತರಗತಿಗಳಿಗೆ ಹಾಜರಾಗಿದ್ದು, ಉತ್ತಮ ಬೆಳವಣಿಗೆಯಾಗಿದೆ.
Recommended Video
ಸಾಗರ ಶಾಸಕ ಎಚ್. ಹಾಲಪ್ಪ ಪರಿಶೀಲನೆ
ಇಂದಿನಿಂದ ಶಾಲಾ- ಕಾಲೇಜುಗಳಲ್ಲಿ 9 ರಿಂದ 12 ನೇ ತರಗತಿಗಳು ಪ್ರಾರಂಭವಾಗುತ್ತಿರುವ ಹಿನ್ನಲೆಯಲ್ಲಿ ಶಾಸಕರಾದ ಎಚ್.ಹಾಲಪ್ಪ ಸಾಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗಕ್ಕೆ ಭೇಟಿ ನೀಡಿ, ವಿದ್ಯಾರ್ಥಿಗಳಿಗೆ ಆತ್ಮ ಸ್ಥೈರ್ಯ ತುಂಬಿದರು.
ಭೌತಿಕ ತರಗತಿ ವ್ಯವಸ್ಥೆ ಪರಿಶೀಲಿಸಿ, ಕಡ್ಡಾಯವಾಗಿ ಕೋವಿಡ್ ನಿಯಮ ಪಾಲಿಸಿಕೊಂಡು ತರಗತಿಗಳನ್ನು ನಡೆಸುವಂತೆ ಪ್ರಾಂಶುಪಾಲರಿಗೆ ಸೂಚಿಸಿದರು. ನಂತರ ಪ್ರಾಂಶುಪಾಲರ ಹಾಗೂ ಉಪನ್ಯಾಸಕರ ಕೊಠಡಿಗಳ ನವೀಕರಣಕ್ಕೆ MSIL ವತಿಯಿಂದ 35 ಲಕ್ಷ ಅನುದಾನ ಮಂಜೂರು ಮಾಡಿದ್ದು, ಪರಿಕರಗಳನ್ನು ಪರಿಶೀಲಿಸಿದರು. ನಗರಸಭೆ ಅಧ್ಯಕ್ಷರು, ಸದಸ್ಯರು, CDC ಸಮಿತಿಯವರು ಉಪಸ್ಥಿತರಿದ್ದರು.