ಶಿವಮೊಗ್ಗ-ತುಮಕೂರು 6 ಪಥದ ರಸ್ತೆ ಕಾಮಗಾರಿ ಶೀಘ್ರ : ಈಶ್ವರಪ್ಪ
ಶಿವಮೊಗ್ಗ, ನವೆಂಬರ್ 01 : "ಶಿವಮೊಗ್ಗ-ತುಮಕೂರು ನಡುವಿನ 6 ಪಥದ ರಸ್ತೆ ನಿರ್ಮಾಣ ಕಾಮಗಾರಿಗೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ. ಶೀಘ್ರದಲ್ಲಿಯೇ ಕಾಮಗಾರಿ ಆರಂಭಗೊಳ್ಳಲಿದೆ" ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಕೆ. ಎಸ್. ಈಶ್ವರಪ್ಪ ಹೇಳಿದರು.
ಶುಕ್ರವಾರ ಶಿವಮೊಗ್ಗದಲ್ಲಿ ಮಾತನಾಡಿದ ಈಶ್ವರಪ್ಪ, "ಶಿವಮೊಗ್ಗ-ತುಮಕೂರು ಆರು ಪಥದ ರಸ್ತೆ ನಿರ್ಮಾಣ ಗೊಂಡರೆ ಶಿವಮೊಗ್ಗ-ಬೆಂಗಳೂರು ನಡುವೆ ಸಂಚಾರ ನಡೆಸುವ ಪ್ರಯಾಣಿಕರಿಗೆ ಅನುಕೂಲವಾಗಲಿದೆ" ಎಂದರು.
"ಶಿವಮೊಗ್ಗ-ತುಮಕೂರು ನಡುವಿನ ಆರು ಪಥದ ರಸ್ತೆ ನಿರ್ಮಾಣ ಕಾರ್ಯಕ್ಕೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ. 3975 ಕೋಟಿ ರೂ. ವೆಚ್ಚವಾಗಲಿದೆ. ಶೀಘ್ರವೇ ಕಾಮಗಾರಿ ಆರಂಭಗೊಳ್ಳಲಿದೆ" ಎಂದು ಈಶ್ವರಪ್ಪ ತಿಳಿಸಿದರು.

"ಕೇಂದ್ರ ಸರ್ಕಾರ ರಸ್ತೆಯ ನಿರ್ಮಾಣ ಕಾರ್ಯಕ್ಕೆ ಒಪ್ಪಿಗೆ ನೀಡಿದೆ. ಈ ಕಾರ್ಯದಲ್ಲಿ ಜಿಲ್ಲಾಧಿಕಾರಿಗಳು ಸಕಾಲಿಕವಾಗಿ ಸ್ಪಂದಿಸಿದ್ದಾರೆ. ಭೂಸ್ವಾಧೀನ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದಾರೆ" ಎಂದು ಈಶ್ವರಪ್ಪ ಹೇಳಿದರು.
"ಶಿವಮೊಗ್ಗ ನಗರದಲ್ಲಿನ ಸಂಚಾರ ದಟ್ಟಣೆ ನಿಯಂತ್ರಣಕ್ಕಾಗಿ ನಗರವನ್ನು ಕೇಂದ್ರವಾಗಿಸಿಕೊಂಡು ಹೊರವಲಯದಲ್ಲಿ 19 ಕಿ.ಮೀ.ವರ್ತುಲ ರಸ್ತೆಯನ್ನು ನಿರ್ಮಾಣ ಮಾಡಲಾಗುತ್ತದೆ. ಇದಕ್ಕಾಗಿ 430 ಕೋಟಿ ರೂ.ಗಳ ವೆಚ್ಚದ ಪಂಕ್ತೀಕರಣ ನಕ್ಷೆ ತಯಾರಿಸಲಾಗಿದೆ" ಎಂದರು.
"ಕರ್ನಾಟಕ ಸರ್ಕಾರ ಕೆಎಸ್ಐಐಡಿಸಿ ಸಂಸ್ಥೆಯ ಮೂಲಕ 38 ಕೋಟಿ ರೂ.ಗಳ ವೆಚ್ಚದಲ್ಲಿ ಶಿವಮೊಗ್ಗದಲ್ಲಿ ಕಿರುವಿಮಾನ ನಿಲ್ದಾಣವನ್ನು ಅಭಿವೃದ್ಧಿಪಡಿಸುತ್ತಿದೆ. ಮುಂದಿನ ಒಂದು ವರ್ಷದ ಅವಧಿಯೊಳಗಾಗಿ ಕಾಮಗಾರಿ ಪೂರ್ಣಗೊಳ್ಳುವ ವಿಶ್ವಾಸವಿದೆ" ಎಂದು ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು.












Click it and Unblock the Notifications