ಶಿವಮೊಗ್ಗ ಜನರಿಗೆ ಎಚ್ಚರಿಕೆ ನೀಡಿದ ಸಚಿವ ಈಶ್ವರಪ್ಪ
ಶಿವಮೊಗ್ಗ, ಮೇ 4: ಕೊರೊನಾ ವೈರಸ್ ಕುರಿತಾಗಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಶಿವಮೊಗ್ಗ ಜನರಿಗೆ ಎಚ್ಚರಿಕೆ ನೀಡಿದ್ದಾರೆ. ಅಗತ್ಯ ಸಂದರ್ಭದಲ್ಲಿ ಮಾತ್ರ ಜನರು ಮನೆಯಿಂದ ಹೊರ ಬರಬೇಕು ಎಂದು ತಿಳಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯಲ್ಲಿ ಈವರೆಗೆ ಒಂದೂ ಕೊರೊನಾ ಕೇಸ್ಗಳು ಪತ್ತೆಯಾಗಿಲ್ಲ. ಹಾಗಾಗಿ, ಅದನ್ನು ಹೀಗೆಯೇ ಕಾಪಾಡಿಕೊಂಡು ಹೋಗಬೇಕು ಎಂದು ಈಶ್ವರಪ್ಪ ಜನರಿಗೆ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಒಂದೇ ಒಂದು ಕೊರೊನಾ ಕೇಸ್ ಬಂದರು ಇಡೀ ನಗರವನ್ನು ಲಾಕ್ಡೌನ್ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಶಿವಮೊಗ್ಗದಲ್ಲಿ ಸಚಿವರ ಕಾಲಿಗೆ ಬಿದ್ದ ತಹಶೀಲ್ದಾರ್, ಸಾರ್ವಜನಿಕ ಆಕ್ಷೇಪ
ಗ್ರೀನ್ ಝೋನ್ ಆಗಿರುವ ಶಿವಮೊಗ್ಗದಲ್ಲಿ ಇಂದಿನಿಂದ ಲಾಕ್ಡೌನ್ ಸಡಿಲಿಕೆ ಸಿಕ್ಕಿದೆ. ಬಹುತೇಕ ಎಲ್ಲ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ. ಹೊರ ಜಿಲ್ಲೆಗಳಿಗೆ ಹೋಗುವವರಿಗೆ ಒನ್ ವೇ ಪಾಸ್ ನೀಡಲಾಗುತ್ತಿದೆ.
ಶಿವಮೊಗ್ಗದಲ್ಲಿ ಕೊರೊನಾ ಪರಿಸ್ಥಿತಿಯ ಬಗ್ಗೆ ಈಶ್ವರಪ್ಪ ಮಾತನಾಡಿದ್ದಾರೆ. ಗ್ರೀನ್ ಝೋನ್ ಎನ್ನುವ ಕಾರಣಕ್ಕೆ ಜನರು ಸರ್ಕಾರ ನೀಡಿದ ಲಾಕ್ಡೌನ್ ಸಡಿಲಿಕೆಯನ್ನ ದುರುಪಯೋಗ ಮಾಡಿಕೊಳ್ಳಬಾರದು. ಅಗತ್ಯ ಇದ್ದರೆ ಮನೆಯಿಂದ ಹೊರಬರಬೇಕು. ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಎಂದಿದ್ದಾರೆ.
ಬೇರೆ ಜಿಲ್ಲೆಗಳಿಂದ ಪಾಸ್ ಇಲ್ಲದೆ, ಅನಧಿಕೃತವಾಗಿ ಶಿವಮೊಗ್ಗ ಜಿಲ್ಲೆಗೆ ಬಂದರೆ, ಅಂತವರ ಪೊಲೀಸ್ ಕಣ್ಗಾವಲು ಇರಿಸಲಾಗಿದೆ ಎಂದು ಈಶ್ವರಪ್ಪ ಹೇಳಿದ್ದಾರೆ. ಬೆಳಗ್ಗೆ 7 ರಿಂದ ಸಂಜೆ 7ರ ವರೆಗೆ ವ್ಯಾಪಾರ ಮಾಡಲು ಅವಕಾಶ ನೀಡಲಾಗಿದೆ.