"ಕನಿಷ್ಟ ವೇತನ ನೀಡದ ಕಂಪನಿಗಳನ್ನು ಕಪ್ಪು ಪಟ್ಟಿಗೆ ಸೇರಿಸಿ"
ಶಿವಮೊಗ್ಗ, ಸೆಪ್ಟೆಂಬರ್ 27: ಪೌರ ಕಾರ್ಮಿಕರಿಗೆ ಮತ್ತು ಸಫಾಯಿ ಕರ್ಮಚಾರಿಗಳಿಗೆ ಕನಿಷ್ಟ ವೇತನ ನೀಡದೆ ವಂಚಿಸುವ ಹೊರಗುತ್ತಿಗೆ ಸಂಸ್ಥೆಗಳನ್ನು ಕಪ್ಪು ಪಟ್ಟಿಗೆ ಸೇರಿಸಲಾಗುವುದು ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಫಾಯಿ ಕರ್ಮಚಾರಿಗಳ ಕಲ್ಯಾಣ ಕಾರ್ಯಕ್ರಮಗಳ ಕುರಿತಾದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಕನಿಷ್ಟ ವೇತನ ನೀಡದಿರುವ ಕುರಿತು ದೂರುಗಳು ಬಂದಿರುವ ತಾಲೂಕುಗಳಲ್ಲಿ ಪರಿಶೀಲನೆ ನಡೆಸಿ, ದೂರುಗಳು ಸತ್ಯವಾಗಿದ್ದರೆ ಅಂತಹ ಹೊರಗುತ್ತಿಗೆ ಸಂಸ್ಥೆಗಳನ್ನು ಕಪ್ಪುಪಟ್ಟಿಗೆ ಸೇರಿಸಿ ಕಾನೂನು ಕ್ರಮ ಜರುಗಿಸುವಂತೆ ಜಿಲ್ಲಾ ಕಾರ್ಮಿಕ ಕಲ್ಯಾಣ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕಾರ್ಮಿಕರ ಹಿಂದಿನ ತಿಂಗಳ ಇಪಿಎಫ್ ಪಾವತಿಸಿರುವ ಕುರಿತಾದ ದಾಖಲೆಗಳನ್ನು ಸಲ್ಲಿಸಿದ ಬಳಿಕ ಮಾತ್ರ ಗುತ್ತಿಗೆ ಸಂಸ್ಥೆಗಳಿಗೆ ವೇತನ ಅನುದಾನ ಬಿಡುಗಡೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದರು.
ಸಫಾಯಿ ಕರ್ಮಚಾರಿಗಳಿಂದ ಮ್ಯಾನ್ ಹೋಲ್ ಗಳ ಸ್ವಚ್ಛ ಬೇಡ
ಎಲ್ಲಾ ಸ್ಥಳೀಯ ಸಂಸ್ಥೆಗಳು ಕಡ್ಡಾಯವಾಗಿ ಜೆಟ್ಟಿಂಗ್ ಯಂತ್ರವನ್ನು ಬಳಸಬೇಕು. ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಈ ಯಂತ್ರಗಳು ಉತ್ತಮ ಸ್ಥಿತಿಯಲ್ಲಿರಬೇಕು. ಯಾವುದೇ ಕಾರಣಕ್ಕೂ ಸಫಾಯಿ ಕರ್ಮಚಾರಿಗಳಿಂದ ಮ್ಯಾನ್ ಹೋಲ್ ಗಳನ್ನು ಸ್ಚಚ್ಛಗೊಳಿಸಬಾರದು ಎಂದು ಅವರು ತಾಕೀತು ಮಾಡಿದರು. ಎಂಪಿಎಂ ಮತ್ತು ವಿಎಸ್ಐಎಲ್ ನಲ್ಲಿ ಈಗಲೂ ಸಿಬ್ಬಂದಿಗಳಿಂದ ಮ್ಯಾನವಲ್ ಸ್ಕ್ಯಾವೆಂಜಿಂಗ್ ಮಾಡಲಾಗುತ್ತಿದೆ ಎಂಬ ದೂರಿನ ಬಗ್ಗೆ ಪರಿಶೀಲನೆ ನಡೆಸಬೇಕು. ಸದರಿ ಸಂಸ್ಥೆಗಳು ನಗರ ಸ್ಥಳೀಯ ಸಂಸ್ಥೆಗಳಿಂದ ಸಕ್ಕಿಂಗ್ ಮತ್ತು ಜೆಟ್ಟಿಂಗ್ ಯಂತ್ರದ ಸಹಾಯ ಪಡೆದಿರುವ ಬಗ್ಗೆ ಮಾಹಿತಿಯನ್ನು ಸಲ್ಲಿಸುವಂತೆ ತಿಳಿಸಿದರು.
ಸುರಕ್ಷತಾ ಪರಿಕರಗಳನ್ನು ಪೌರ ಕಾರ್ಮಿಕರು ಬಳಸಬೇಕು
ಕೊರೊನಾ ಆರಂಭವಾದ ಬಳಿಕ ಹಲವು ಸ್ಥಳೀಯ ಸಂಸ್ಥೆಗಳಲ್ಲಿ ಸಫಾಯಿ ಕರ್ಮಚಾರಿಗಳ ಪೂರ್ಣ ಪ್ರಮಾಣದ ಆರೋಗ್ಯ ತಪಾಸಣೆ ನಡೆಸಲಾಗಿಲ್ಲ. ಹಂತ ಹಂತವಾಗಿ ಬ್ಯಾಚ್ ಮಾಡಿ ಎಲ್ಲರ ಆರೋಗ್ಯ ತಪಾಸಣೆಯನ್ನು ಪ್ರತಿ ಮೂರು ತಿಂಗಳಿಗೊಮ್ಮೆ ನಡೆಸಬೇಕು. ಸುರಕ್ಷತಾ ಪರಿಕರಗಳನ್ನು ಪೌರ ಕಾರ್ಮಿಕರು ಮತ್ತು ಸಫಾಯಿ ಕರ್ಮಚಾರಿಗಳು ಬಳಸುತ್ತಿರುವುದನ್ನು ಸಹ ಖಾತ್ರಿಪಡಿಸಬೇಕು ಎಂದರು.
ಮನೆ ನಿರ್ಮಿಸಲು ಟೆಂಡರ್ ಆಹ್ವಾನ
ಗೃಹಭಾಗ್ಯ ಯೋಜನೆಯಡಿ ಎಲ್ಲಾ ಪೌರಕಾರ್ಮಿಕರಿಗೆ ಮತ್ತು ಸಫಾಯಿ ಕರ್ಮಚಾರಿಗಳಿಗೆ ಮನೆಯನ್ನು ಒದಗಿಸಬೇಕಾಗಿದೆ. ಮನೆಗಳ ನಿರ್ಮಾಣ ಕುರಿತಾಗಿ ತೀರ್ಥಹಳ್ಳಿ ಸ್ಥಳೀಯ ಸಂಸ್ಥೆಯ ಪ್ರಸ್ತಾಪವನ್ನು ಆದಷ್ಟು ಬೇಗನೆ ಅಂತಿಮಗೊಳಿಸಬೇಕು.
ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 168 ಪೌರಕಾರ್ಮಿಕರಿಗೆ ಜಿ2 ಮಾದರಿಯಲ್ಲಿ ಮನೆ ನಿರ್ಮಿಸಲು ಟೆಂಡರ್ ಆಹ್ವಾನಿಸಲಾಗಿದೆ. ಟೆಂಡರ್ ಪ್ರಕ್ರಿಯೆ ಆದಷ್ಟು ಬೇಗನೇ ಪೂರ್ಣಗೊಳಿಸಿ ಮನೆಗಳ ನಿರ್ಮಾಣ ಕಾರ್ಯ ಕೈಗೆತ್ತಿಕೊಳ್ಳಬೇಕು ಎಂದು ಡಿಸಿ ಕೆ.ಬಿ ಶಿವಕುಮಾರ್ ಸೂಚನೆ ನೀಡಿದರು.
74 ಮಂದಿಗೆ ಜಿ3 ಮಾದರಿ ಮನೆಗಳ ನಿರ್ಮಾಣ
ಭದ್ರಾವತಿಯಲ್ಲಿ 5 ಜನ ಪೌರಕಾರ್ಮಿಕರಿಗೆ ವೈಯಕ್ತಿಕ ಮನೆಗಳನ್ನು ಮತ್ತು 74 ಮಂದಿಗೆ ಜಿ3 ಮಾದರಿ ಮನೆಗಳನ್ನು ನಿರ್ಮಾಣ ಮಾಡಲಾಗುತ್ತಿದ್ದು, ಇದನ್ನು ಸಹಾ ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸಬೇಕು ಎಂದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್ ವೈಶಾಲಿ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಮಂಜುನಾಥ್, ಸಮಿತಿ ಸದಸ್ಯರು, ವಿವಿಧ ಇಲಾಖಾ ಅಧಿಕಾರಿಗಳು ಸಭೆಯಲ್ಲಿ ಇದ್ದರು.