ಸಿಗಂದೂರು ದೇವಾಲಯ ಮುಜರಾಯಿ ಇಲಾಖೆಗೆ; ಯಡಿಯೂರಪ್ಪ ಹೇಳಿದ್ದೇನು?
ಶಿವಮೊಗ್ಗ, ಅಕ್ಟೋಬರ್ 18: ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿರುವ ಸಿಗಂದೂರು ಚೌಡೇಶ್ವರಿ ದೇವಾಲಯವನ್ನು ಮುಜರಾಯಿ ಇಲಾಖೆಗೆ ನೀಡುವ ಮಾತುಗಳು ಕೇಳಿ ಬರುತ್ತಿವೆ. ಈ ಪ್ರಸ್ತಾವನೆಗೆ ವಿರೋಧ ಸಹ ವ್ಯಕ್ತವಾಗಿದೆ.
ಭಾನುವಾರ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸ್ವ ಕ್ಷೇತ್ರ ಶಿಕಾರಿಪುರ ಪ್ರವಾಸದಲ್ಲಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, "ಸಿಗಂದೂರು ದೇವಾಲಯವನ್ನು ಮುಜರಾಯಿ ಇಲಾಖೆಗೆ ಸೇರಿಸಬೇಕೋ, ಬೇಡವೋ ಎಂಬ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುತ್ತದೆ" ಎಂದರು.
"ದೇವರ ಹೆಸರಿನಲ್ಲಿ ಗಲಾಟೆ ಮಾಡುವುದು ಯಾರಿಗೂ ಶೋಭೆ ತರುವುದಿಲ್ಲ. ದೇವಾಲಯವನ್ನು ಮುಜರಾಯಿ ಇಲಾಖೆಗೆ ಸೇರಿಸಬೇಕೆಂಬ ಕೂಗು ಹೆಚ್ಚಾಗಿದೆ. ದೇವಾಲಯದಲ್ಲಿ ನಡೆದ ಘಟನೆಯೂ ಗಮನಕ್ಕೆ ಬಂದಿದೆ" ಎಂದು ಯಡಿಯೂರಪ್ಪ ಹೇಳಿದರು.

ಶುಕ್ರವಾರ ದೇವಾಲಯದ ಪ್ರಧಾನ ಅರ್ಚಕ ಶೇಷಗಿರಿ ಭಟ್ ಮತ್ತು ಭಕ್ತರ ನಡುವೆ ಗದ್ದಲ ನಡೆದಿತ್ತು. ಆಡಳಿತ ಮಂಡಳಿ ಕಚೇರಿಯ ಪಿಠೋಪಕರಣಗಳಿಗೆ ಹಾನಿಯಾಗಿತ್ತು. ದೇವಾಲಯದ ಆಡಳಿತ ಮಂಡಳಿ ಮತ್ತು ಅರ್ಚಕರ ನಡುವಿನ ಶೀತಲ ಸಮರ ನಡೆಯುತ್ತಿದೆ.
ಶನಿವಾರ ಶಿವಮೊಗ್ಗ ಜಿಲ್ಲಾಧಿಕಾರಿ ಕೆ. ಬಿ. ಶಿವಕುಮಾರ್, ಎಸ್ಪಿ ಕೆ. ಎಂ. ಶಾಂತರಾಜು ಸಿಗಂದೂರು ದೇವಾಲಯಕ್ಕೆ ಭೇಟಿ ನೀಡಿದ್ದರು. ಧರ್ಮದರ್ಶಿ ರಾಮಪ್ಪ, ಪ್ರಧಾನ ಅರ್ಚಕ ಶೇಷಗಿರಿ ಭಟ್ ಅವರನ್ನು ವಿಚಾರಣೆ ನಡೆಸಿದ್ದರು.
ಸಿಗಂದೂರು ದೇವಾಲಯಲ್ಲಿ ನಡೆದ ಘಟನೆ ಬಗ್ಗೆ ವರದಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸರ್ಕಾರ ಸೂಚನೆ ನೀಡಿದೆ. "ಪರಿಸ್ಥಿತಿ ಅವಲೋಕಿಸಿ, ದೇವಾಲಯದ ಹಣಕಾಸು ವ್ಯವಹಾರ ಕುರಿತು ಸರ್ಕಾರಕ್ಕೆ ವರದಿ ನೀಡುತ್ತೇನೆ" ಎಂದು ಜಿಲ್ಲಾಧಿಕಾರಿ ಕೆ. ಬಿ. ಶಿವಕುಮಾರ್ ಹೇಳಿದ್ದಾರೆ.
ಶಿವಮೊಗ್ಗ ಜಿಲ್ಲಾ ಆರ್ಯ ಈಡಿಗ ಸಂಘ ಸಿಗಂದೂರು ಚೌಡೇಶ್ವರಿ ದೇವಾಲಯವನ್ನು ಮುಜರಾಯಿ ಇಲಾಖೆಗೆ ನೀಡಲು ವಿರೋಧ ವ್ಯಕ್ತಪಡಿಸಿದೆ. ಇಲಾಖೆಗೆ ನೀಡಿದರೆ ಹೋರಾಟ ಮಾಡುವ ಕುರಿತು ಎಚ್ಚರಿಕೆಯನ್ನು ನೀಡಿದೆ.












Click it and Unblock the Notifications