ಸಿಗಂದೂರು ದೇವಾಲಯ ಮುಜರಾಯಿಗೆ; ಹೈಕೋರ್ಟ್ಗೆ ಪಿಐಎಲ್
ಶಿವಮೊಗ್ಗ, ನವೆಂಬರ್ 23: ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಸಿಗಂದೂರು ಚೌಡೇಶ್ವರಿ ದೇವಾಲಯವನ್ನು ಮುಜರಾಯಿ ಇಲಾಖೆಗೆ ಸೇರಿಸಬೇಕು ಎಂದು ಕರ್ನಾಟಕ ಹೈಕೋರ್ಟ್ಗೆ ಪಿಐಎಲ್ ಸಲ್ಲಿಕೆ ಮಾಡಲಾಗಿದೆ. ಅರ್ಜಿಯ ವಿಚಾರಣೆಗೆ ನ್ಯಾಯಾಲಯ ಒಪ್ಪಿಗೆ ನೀಡಿದೆ.
ಸೋಮವಾರ ಕರ್ನಾಟಕ ಹೈಕೋರ್ಟ್ ತುಮರಿ ನಿವಾಸಿ ಲಕ್ಷ್ಮೀ ನಾರಾಯಣ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿತು. ಮುಜರಾಯಿ ಇಲಾಖೆಗೆ ದೇವಾಲಯವನ್ನು ಸಲ್ಲಿಸುವ ಕುರಿತು ಸರ್ಕಾರಕ್ಕೆ ನೋಟಿಸ್ ನೀಡಿತು.
ದೇವಾಲಯ ನಿರ್ಮಾಣದ ವೇಳೆ ಹಾಗೂ ನಂತರ ಅಭಿವೃದ್ಧಿ ಮಾಡುವ ಸಂದರ್ಭದಲ್ಲಿ ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿಕೊಳ್ಳಲಾಗಿದೆ. ದೇವಾಲಯಕ್ಕೆ ಬರುವ ಆದಾಯದಲ್ಲಿ ಪಾರದರ್ಶಕತೆ ತರಲು ಮುಜರಾಯಿ ಇಲಾಖೆಗೆ ಸೇರಿಸಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

ಅರ್ಜಿಯ ವಿಚಾರಣೆ ವೇಳೆ ಅರಣ್ಯ ಭೂಮಿ ಒತ್ತುವರಿಯಾದ ಕುರಿತು ಎರಡು ವಾರದಲ್ಲಿ ವರದಿ ನೀಡಬೇಕು ಎಂದು ಶಿವಮೊಗ್ಗ ಜಿಲ್ಲಾಧಿಕಾರಿಗಳಿಗೆ ನ್ಯಾಯಾಲಯ ನೋಟಿಸ್ ನೀಡಿದೆ.
ಸುದ್ದಿಯಲ್ಲಿರುವ ದೇವಾಲಯ; ಸಿಗಂದೂರು ದೇವಾಲಯದ ಪ್ರಧಾನ ಅರ್ಚಕ ಶೇಷಗಿರಿ ಭಟ್ ಮತ್ತು ಭಕ್ತರ ನಡುವೆ ಕೆಲವು ದಿನಗಳ ಹಿಂದೆ ಗದ್ದಲ ನಡೆದಿತ್ತು. ಈ ಸಮಯದಲ್ಲಿ ಆಡಳಿತ ಮಂಡಳಿ ಕಚೇರಿಯ ಪಿಠೋಪಕರಣಗಳಿಗೆ ಹಾನಿಯಾಗಿತ್ತು.
ಈ ಘಟನೆ ಬಳಿಕ ಸಿಗಂದೂರು ದೇವಾಲಯ ಸುದ್ದಿಯಲ್ಲಿದೆ. ದೇವಾಲಯವನ್ನು ಮುಜರಾಯಿ ಇಲಾಖೆಗೆ ಸೇರಿಸುವ ಕುರಿತು ಪರ-ವಿರೋಧ ಚರ್ಚೆಗಳು ನಡೆದಿವೆ. ಜಿಲ್ಲಾ ಆರ್ಯ ಈಡಿಗರ ಸಂಘ ಈ ಪ್ರಸ್ತಾಪಕ್ಕೆ ವಿರೋಧ ವ್ಯಕ್ತಪಡಿಸುತ್ತಿದೆ.
ಸಿಗಂದೂರು ದೇವಾಲಯದ ವಿಚಾರದಲ್ಲಿ ತೀರ್ಮಾನ ಕೈಗೊಳ್ಳಲು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಮೇಲುಸ್ತುವಾರಿ, ಸಲಹಾ ಸಮಿತಿಯನ್ನು ರಚನೆ ಮಾಡಲಾಗಿದೆ. ಈ ಸಮಿತಿಯನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಲಾಗುತ್ತಿದೆ.
ಯಡಿಯೂರಪ್ಪ ಹೇಳಿಕೆ : ತಮ್ಮ ತವರು ಜಿಲ್ಲೆಯ ದೇವಾಲಯದ ವಿವಾದದ ಕುರಿತು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದರು. "ದೇವರ ಹೆಸರಿನಲ್ಲಿ ಗಲಾಟೆ ಮಾಡುವುದು ಯಾರಿಗೂ ಶೋಭೆ ತರುವುದಿಲ್ಲ. ದೇವಾಲಯವನ್ನು ಮುಜರಾಯಿ ಇಲಾಖೆಗೆ ಸೇರಿಸಬೇಕೆಂಬ ಕೂಗು ಹೆಚ್ಚಾಗಿದೆ" ಎಂದು ಹೇಳಿದ್ದರು.












Click it and Unblock the Notifications