ಎಸ್ಐಟಿ ಕೆಲಸದ ಬಗ್ಗೆ ಟೀಕೆ ಅಗತ್ಯವಿಲ್ಲ; ಪ್ರವೀಣ್ ಸೂದ್
ಶಿವಮೊಗ್ಗ, ಏಪ್ರಿಲ್ 06; "ವಿಶೇಷ ತನಿಖಾ ತಂಡ ಸ್ವತಂತ್ರವಾಗಿ ತನಿಖೆ ನಡೆಸುತ್ತಿದ್ದು, ಕಾನೂನು ಚೌಕಟಿನಲ್ಲಿ ಕೆಲಸ ನಿರ್ವಹಿಸುತ್ತಿದೆ. ಹಾಗಾಗಿ ಯಾರೊಬ್ಬರು ಎಸ್ಐಟಿ ಹೀಗೆ ಕೆಲಸ ಮಾಡಬೇಕು, ಹಾಗೆ ಮಾಡಬೇಕು ಎಂದು ಟೀಕೆ ಟಿಪ್ಪಣಿ ಮಾಡಬಾರದು" ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ತಿಳಿಸಿದರು.
ಮಂಗಳವಾರ ಶಿವಮೊಗ್ಗದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, "ಎಸ್ಐಟಿ ಯಾವ ರೀತಿ ಕೆಲಸ ಮಾಡುತ್ತಿದೆ ಎಂದು ಬೆಂಗಳೂರು ಕಮಿಷನರ್ ಅವರು ಈಗಾಗಲೇ ಮಾಧ್ಯಮಗಳಿಗೆ ತಿಳಿಸುತ್ತಿದ್ದಾರೆ. ಎಸ್ಐಟಿ ತನಿಖೆಯ ಬಗ್ಗೆ ನ್ಯಾಯಾಲಯ ಮಾಹಿತಿ ಕೇಳಿದೆ. ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಲಾಗುತ್ತದೆ" ಎಂದರು.
"ಶಿವಮೊಗ್ಗದ ಹುಣಸೋಡು ಕಲ್ಲು ಕ್ವಾರಿಯಲ್ಲಿ ಸಂಭವಿಸಿದ ಸ್ಪೋಟ ಪ್ರಕರಣ ಸಂಬಂಧ ಸದ್ಯದಲ್ಲೇ ಚಾರ್ಜ್ ಶೀಟ್ ಸಲ್ಲಿಕೆಯಾಗಲಿದೆ. ಆಗ ಸ್ಪೋಟದ ಕುರಿತು ಸಂಪೂರ್ಣ ಮಾಹಿತಿ ಸಾರ್ವಜನಿಕವಾಗಿ ಲಭ್ಯವಾಗಲಿದೆ" ಎಂದು ತಿಳಿಸಿದರು.

"ಶಿವಮೊಗ್ಗದಲ್ಲಿ ಪೊಲೀಸ್ ಕಮಿಷನರೇಟ್ ಸ್ಥಾಪನೆ ವಿಚಾರದಲ್ಲಿ ಸರ್ಕಾರ ನಿರ್ಧಾರ ಕೈಗೊಳ್ಳಬೇಕು. ಯಾವುದೇ ನಗರದಲ್ಲಿ 10 ಲಕ್ಷ ಜನಸಂಖ್ಯೆ ಇದ್ದರಷ್ಟೇ ಕಮಿಷನರೇಟ್ ಸ್ಥಾಪನೆ ಮಾಡಲಾಗುತ್ತದೆ. ಶಿವಮೊಗ್ಗದಲ್ಲಿ ಕಮಿಷನರೇಟ್ ಸ್ಥಾಪನೆ ವಿಚಾರ ಸರ್ಕಾರಕ್ಕೆ ಬಿಟ್ಟಿದ್ದು" ಎಂದು ಪ್ರವೀಣ್ ಸೂದ್ ಸ್ಪಷ್ಟಪಡಿಸಿದರು.
ಮಹತ್ವದ ಮೀಟಿಂಗ್ ಸಭೆ; ಮಂಗಳವಾರ ಬೆಳಗ್ಗೆ ಶಿವಮೊಗ್ಗಕ್ಕೆ ಆಗಮಿಸಿದ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರು, ಡಿಎಆರ್ ಸಭಾಂಗಣದಲ್ಲಿ ಮಹತ್ವದ ಸಭೆ ನಡೆಸಿದರು. ಪೂರ್ವ ವಲಯ ಐಜಿಪಿ ರವಿ, ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀ ಪ್ರಸಾದ್, ಹೆಚ್ಚುವರಿ ರಕ್ಷಣಾಧಿಕಾರಿ ಹೆಚ್. ಟಿ. ಶೇಖರ್ ಮುಂತಾದವರು ಸಭೆಯಲ್ಲಿದ್ದರು.












Click it and Unblock the Notifications