ಶಿವಮೊಗ್ಗ: ಯಡಿಯೂರಪ್ಪ, ಸಿದ್ದರಾಮಯ್ಯ ಗುಣಮುಖರಾಗಲು ಕಾಂಗ್ರೆಸ್ ನಿಂದ ವಿಶೇಷ ಪೂಜೆ
ಶಿವಮೊಗ್ಗ, ಆಗಸ್ಟ್ 04: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಎಂಎಲ್ಸಿ ಆರ್.ಪ್ರಸನ್ನ ಕುಮಾರ್ ಅವರು ಕೊರೊನಾ ಸೋಂಕಿನಿಂದ ಬಹುಬೇಗ ಗುಣಮುಖರಾಗಲಿ ಎಂದು ಕಾಂಗ್ರೆಸ್ ಸದಸ್ಯರಿಂದ ವಿಶೇಷ ಪೂಜೆ ನಡೆಸಲಾಯಿತು.
ರಾಜ್ಯದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಇದರ ಬೆನ್ನಲ್ಲೇ ನಿನ್ನೆ ಶಿವಮೊಗ್ಗದ ವಿಧಾನ ಪರಿಷತ್ ಸದಸ್ಯರಾದ ಆರ್.ಪ್ರಸನ್ನಕುಮಾರ್ ಅವರಿಗೂ ಸೋಂಕು ಧೃಡಪಟ್ಟಿದೆ.
ಇನ್ನು ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೂ ಸೋಂಕು ತಗುಲಿದ ಹಿನ್ನೆಲೆಯಲ್ಲಿ ತಮ್ಮ ನಾಯಕರು ಬೇಗ ಗುಣಮುಖರಾಗಿಲಿ ಎಂದು ಶಿಕಾರಿಪುರದ ಕಾಂಗ್ರೆಸ್ ಕಾರ್ಯಕರ್ತರು ಇಂದು ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಶಿಕಾರಿಪುರ ಪಟ್ಟಣ ಆರಾಧ್ಯ ದೈವ ಶ್ರೀ ಹುಚ್ಚರಾಯಸ್ವಾಮಿ ದೇವಸ್ಥಾನದಲ್ಲಿ ಇಂದು ಮುಂಜಾನೆ ಕಾಂಗ್ರೆಸ್ ಸದಸ್ಯರು ರಾಜ್ಯದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಂಎಲ್ಸಿ ಪ್ರಸನ್ನ ಕುಮಾರ್ ಸೇರಿದಂತೆ ರಾಜ್ಯದ ಎಲ್ಲಾ ಜನರು ಆರೋಗ್ಯಯುತವಾಗಿರಲಿ, ಸರ್ವರಿಗೂ ಆರೋಗ್ಯ ಕರುಣಿಸಲಿ ಎಂದು ಪ್ರಾರ್ಥನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಪುರಸಭಾ ಸದಸ್ಯರಾದ ನಾಗರಾಜ್ ಗೌಡ, ಯುವ ಕಾಂಗ್ರೆಸ್ ಅಧ್ಯಕ್ಷ ಉಳ್ಳಿ ದರ್ಶನ್, ಹರಿಹರದ ಸಿದ್ದು, ರವೀಂದ್ರ, ರಾಜು, ಧಾರವಾಡ ಸುರೇಶ್, ಮಂಜುನಾಥ್, ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಇದ್ದರು.












Click it and Unblock the Notifications