SSLC Exam; ಶುಕ್ರವಾರದಿಂದ ಎಸ್ಎಸ್ಎಲ್ಸಿ ಪರೀಕ್ಷೆ, ತಯಾರಿ ಹೇಗಿದೆ?
ಶಿವಮೊಗ್ಗ, ಮಾರ್ಚ್ 20: ಕರ್ನಾಟಕದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ 2025ಕ್ಕೆ ತಯಾರಿ ಪೂರ್ಣಗೊಂಡಿದೆ. ಮಾರ್ಚ್ 21ರ ಶುಕ್ರವಾರದಿಂದ ಏಪ್ರಿಲ್ 4ರ ತನಕ ಎಸ್ಎಸ್ಎಲ್ಸಿ ಪರೀಕ್ಷೆಗಳು ನಡೆಯಲಿದ್ದು, ಶಾಂತಿಯುತವಾಗಿ ಮತ್ತು ಪಾರದರ್ಶಕವಾಗಿ ಪರೀಕ್ಷೆಗಳು ನಡೆಯಲು ಅಗತ್ಯವಾದ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಪರೀಕ್ಷೆಯ ಅವಧಿಯಲ್ಲಿ ವಿದ್ಯಾರ್ಥಿಗಳು ಹಾಲ್ ಟಿಕೆಟ್ ತೋರಿಸಿ ಸರ್ಕಾರಿ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣ ನಡೆಸಲು ಅನುಕೂಲ ಮಾಡಿಕೊಡಲಾಗಿದೆ.
ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಸಿಇಓ ಎನ್. ಹೇಮಂತ್ ಕುವೆಂಪು ರಂಗಮಂದಿರದಲ್ಲಿ ಪರೀಕ್ಷೆಗೆ ನಿಯೋಜನೆಗೊಂಡ ಅಧಿಕಾರಿಗಳೊಂದಿಗೆ ಸಭೆಯನ್ನು ನಡೆಸಿದರು. ಎಸ್ಎಸ್ಎಲ್ಸಿ ಪರೀಕ್ಷೆಗೆ ಮಾಡಿಕೊಂಡಿರುವ ಸಿದ್ಧತೆಗಳ ಕುರಿತು ಮಾತನಾಡಿದರು.

ಜಿಲ್ಲೆಯಲ್ಲಿ ಮಾರ್ಚ್ 21 ರಿಂದ ಏಪ್ರಿಲ್ 4ರ ತನಕ 79 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿದೆ. 23162 ರೆಗ್ಯುಲರ್, 266 ಪುನರಾವರ್ತಿತ, 439 ಖಾಸಗಿ ನೋಂದಾಯಿತ, 130 ಖಾಸಗಿ ಪುನರಾವರ್ತಿತ ಸೇರಿ ಒಟ್ಟು 23,997 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ಪರೀಕ್ಷೆಗೆ ಅಗತ್ಯ ವ್ಯವಸ್ಥೆಗಳು: ಎಸ್ಎಸ್ಎಲ್ಸಿ ಪರೀಕ್ಷೆ ನಡೆಯುವ ಪರೀಕ್ಷಾ ಕೇಂದ್ರಗಳಲ್ಲಿ ಕುಡಿಯುವ ನೀರು, ಸೂಕ್ತ ಆಸನಗಳ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಕರ್ಯಗಳ ವ್ಯವಸ್ಥೆ ಇರುವುದನ್ನು ಬಿಇಓಗಳು ಭೇಟಿ ನೀಡಿ ಖಾತ್ರಿ ಪಡಿಸಿಕೊಂಡಿದ್ದಾರೆ.
ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದು, ಯಾವುದೇ ಝೆರಾಕ್ಸ್ ಅಂಗಡಿಗಳು ಅಲ್ಲಿ ಕಾರ್ಯ ನಿರ್ವಹಿಸುವಂತಿಲ್ಲ. ಮೊಬೈಲ್ ಸೇರಿದಂತೆ ಯಾವುದೇ ರೀತಿಯ ವಿದ್ಯುನ್ಮಾನ ಉಪಕರಣಗಳಿಗೆ ಅವಕಾಶವಿರುವುದಿಲ್ಲ. ದೂರದಿಂದ ಬರುವ ವಿದ್ಯಾರ್ಥಿಗಳಿಗೆ ಸಾರಿಗೆ ವ್ಯವಸ್ಥೆ ಮಾಡಲು ಹಾಗೂ ಪರೀಕ್ಷಾ ಕೇಂದ್ರಗಳಲ್ಲಿ ಓಆರ್ಎಸ್, ಪ್ರಥಮ ಚಿಕಿತ್ಸೆ ಕಿಟ್ ಇರಿಸಿಕೊಳ್ಳಲು ಸೂಚಿಸಲಾಗಿದೆ.
ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ಸಿಬ್ಬಂದಿ ಮತ್ತು ಜಾಗೃತ ದಳ ಅಧಿಕಾರಿಗಳನ್ನು ಹೊರತುಪಡಿಸಿ ಜನರಿಗೆ, ಸಂಘ ಸಂಸ್ಥೆಗಳಿಗೆ ಪ್ರವೇಶ ಇರುವುದಿಲ್ಲ. ಪ್ರತಿ ಕೊಠಡಿಯಲ್ಲಿ ಸಿಸಿಟಿವಿ ಅಳವಡಿಸಲಾಗಿದೆ. ವೆಬ್ಕಾಸ್ಟಿಂಗ್ನಲ್ಲಿ 3 ಹಂತದಲ್ಲಿ ವೀಕ್ಷಣೆ ಮಾಡಲಾಗುತ್ತದೆ.
ಈ ಬಾರಿ ಎಐ ತಂತ್ರಜ್ಞಾನ ಬಳಸಿ ಫೇಸ್ ಡಿಟೆಕ್ಷನ್ ಮಾಡಲಾಗುತ್ತಿದೆ. ಆದ್ದರಿಂದ ಎಲ್ಲ ವಿದ್ಯಾರ್ಥಿಗಳು ಕೊಠಡಿಯಲ್ಲಿ ಶಿಸ್ತು ಕಾಪಾಡಿಕೊಳ್ಳಬೇಕು ಹಾಗೂ ಪರೀಕ್ಷೆಗೆ ನಿಯೋಜಿತ ಅಧಿಕಾರಿಗಳು ಎಚ್ಚರಿಕೆಯಿಂದ ಪರೀಕ್ಷೆಗಳನ್ನು ನಡೆಸಬೇಕು ಎಂದು ಸೂಚನೆ ನೀಡಲಾಗಿದೆ.
ವದಂತಿಗಳನ್ನು ನಂಬಬೇಡಿ: ಜಿಲ್ಲಾ ಪಂಚಾಯಿತಿ ಸಿಇಓ ಎನ್. ಹೇಮಂತ್ ಮಾತನಾಡಿ, "ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಅಥವಾ ಪರೀಕ್ಷೆ ಮುಂದೂಡಲಾಗಿದೆ ಎಂಬ ಯಾವುದೇ ರೀತಿಯ ವದಂತಿಗಳಿಗೆ ವಿದ್ಯಾರ್ಥಿಗಳು ಕಿವಿಗೊಡಬಾರದು. ಬದಲಿಗೆ ಪರೀಕ್ಷೆಗೆ ಸಜ್ಜಾಗಿರಬೇಕು. ಪೋಷಕರು ಮಕ್ಕಳಲ್ಲಿ ಆತ್ಮವಿಶ್ವಾಸ ಮೂಡಿಸಬೇಕು. ಪರೀಕ್ಷೆ ಹಿಂದಿನ ದಿನ ಅಥವಾ ಬೆಳಗ್ಗೆ ಆಯಾಸವಾಗುವಂತಹ ಯಾವುದೇ ಕಾರ್ಯ ಮಾಡದೇ, ಪೌಷ್ಟಿಕವಾದ ಆಹಾರ ಸೇವಿಸಿ ಪರೀಕ್ಷೆಗೆ ಹಾಜರಾಗಬೇಕು. ನಿರ್ಭೀತಿಯಿಂದ ಪರೀಕ್ಷೆಯನ್ನು ಎದುರಿಸಬೇಕು" ಎಂದು ಹೇಳಿದ್ದಾರೆ.
ಪೊಲೀಸರು ಸಹ ಎಸ್ಎಸ್ಎಲ್ಸಿ ಪರೀಕ್ಷೆ ಹಿನ್ನಲೆಯಲ್ಲಿ ತಯಾರಿ ಮಾಡಿಕೊಂಡಿದ್ದಾರೆ. ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಭದ್ರತೆ, ಪ್ರಶ್ನೆ ಪತ್ರಿಕೆ, ಉತ್ತರ ಪತ್ರಿಕೆ ಸಾಗಾಟಕ್ಕೆ ಸಹಕಾರ ಸೇರಿದಂತೆ ಅಗತ್ಯ ಸೇವೆಯನ್ನು ಪೊಲೀಸರು ನೀಡಲಿದ್ದಾರೆ.
ಶಿವಮೊಗ್ಗ ಜಿಲ್ಲೆಯಲ್ಲಿ ಪರೀಕ್ಷೆಗೆ ಸಂಬಂಧಿಸಿದಂತೆ ಯಾವುದೇ ರೀತಿಯ ದೂರುಗಳು ಮತ್ತು ಸಹಾಯ ಬೇಕಿದ್ದಲ್ಲಿ ಜಿಲ್ಲಾ ಕಂಟ್ರೋಲ್ ರೂಂ ಸಂಖ್ಯೆ 9480803300ಗೆ ಕರೆ ಮಾಡಬಹುದು ಎಂದು ಪೊಲೀಸರು ಹೇಳಿದ್ದಾರೆ.











Click it and Unblock the Notifications