ಶಿವಮೊಗ್ಗ; ಕಲ್ಲು ಗಣಿಗಾರಿಕೆಗೆ ಅನುಮತಿ ನೀಡಿದವರಿಗೆ ಸಂಕಷ್ಟ
ಶಿವಮೊಗ್ಗ, ಡಿಸೆಂಬರ್ 15: ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಮತ್ತು ಕುಂಭತ್ತಿ ಗ್ರಾಮಗಳಲ್ಲಿ ರದ್ದಾಗಿರುವ ಕಲ್ಲುಗಣಿ ಗುತ್ತಿಗೆಗಳನ್ನು ನಿಯಮಾನುಸಾರ ವಿಲೇ ಮಾಡಲು ನಿರಾಪೇಕ್ಷಣಾ ಪ್ರಮಾಣಪತ್ರ ನೀಡಿದ ಅಂದಿನ ಅರಣ್ಯಾಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗುತ್ತದೆ.
ಜಿಲ್ಲಾಧಿಕಾರಿ ಕೆ. ಬಿ. ಶಿವಕುಮಾರ್ ನಿರಾಕ್ಷೇಪಣಾ ಪತ್ರ ನೀಡಿದ ಅರಣ್ಯಾಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಅರಣ್ಯಾಧಿಕಾರಿಗಳಿಗೆ ಪತ್ರ ಬರೆಯುವಂತೆ ಹಿರಿಯ ಭೂ ವಿಜ್ಞಾನಿ ಹಾಗೂ ಜಿಲ್ಲಾ ಮರಳು ಸಮಿತಿಯ ಸದಸ್ಯ ಕಾರ್ಯದರ್ಶಿ ರಾನಜಿನಾಯ್ಕ್ ಅವರಿಗೆ ಸೂಚನೆ ಕೊಟ್ಟಿದ್ದಾರೆ.
ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಹಾಗೂ ಜಿಲ್ಲಾ ಕಲ್ಲುಪುಡಿ ಮಾಡುವ ಘಟಕಗಳ ಪರವಾನಿಗೆ ಹಾಗೂ ನಿಯಂತ್ರಣ ಪ್ರಾಧಿಕಾರದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು, ಸದರಿ ಗ್ರಾಮಗಳಲ್ಲಿ ಕಲ್ಲುಗಣಿಗಾರಿಕೆಗೆ ಅನುಮತಿ ನೀಡಲು ಪರವಾನಿಗೆ ನೀಡಿ, ಹಿಂಪಡೆದ ಕಾರಣಕ್ಕೆ ಕಲ್ಲುಗಣಿಗಾರಿಕೆ ನಡೆಸದಂತೆ ಗುತ್ತಿಗೆದಾರರಿಗೆ ಸೂಚಿಸಲಾಗಿತ್ತು ಎಂದು ಹೇಳಿದರು.

ಹೊಸನಗರ ತಾಲೂಕಿನ ನಗರ ಹೋಬಳಿಯ ಕುಂಭತ್ತಿ ಗ್ರಾಮದ ಸರ್ವೆ ನಂಬರ್ 5ರಲ್ಲಿ ಕಲ್ಲು ಗಣಿಗಾರಿಕೆಗೆ ಅನುಮತಿ ನೀಡಲಾಗಿತ್ತು. ಗಣಿಗಾರಿಕೆಗೆ ಅನುಮತಿ ಪಡೆದವರು ದಟ್ಟವಾಗಿ ಬೆಳೆದು ನಿಂತಿರುವ ಮರಗಳನ್ನು ಕಡಿದಿದ್ದರು. ಆಗ ಗ್ರಾಮಸ್ಥರು ಹೋರಾಟ ಮಾಡಿದ್ದರು.
ಗಣಿಗಾರಿಕೆಗೆ ಅನುಮತಿ ನೀಡಿದ ಪ್ರದೇಶದಲ್ಲಿ ದಟ್ಟವಾದ ಕಾಡಿದೆ. ಕೃಷಿ ಭೂಮಿ, ಜನವಸತಿ ಪ್ರದೇಶಗಳಿವೆ. ಆದ್ದರಿಂದ, ಅನುಮತಿ ನೀಡಬಾರದು ಎಂದು ಹೋರಾಟ ಮಾಡಿದ್ದರು. ಗಣಿಗಾರಿಕೆಗೆ ಅನುಮತಿ ನೀಡಿದ ಪ್ರದೇಶದಲ್ಲಿ ಸುಮಾರು 238 ಮಿ. ಮೀ. ಮಳೆಯಾಗಿತ್ತು.
ಅರಣ್ಯ ಇಲಾಖೆ ಅಧಿಕಾರಿಗಳು ಗಣಿಗಾರಿಕೆ ಮಾಡಲು ಅನುಮತಿ ನೀಡಿದ್ದರು. ಇದನ್ನು ವಿರೋಧಿಸಿ ಹೋರಾಟಗಳು ನಡೆದ ಬಳಿಕ ಗಣಿಗಾರಿಗೆ ಸ್ಥಗಿತಗೊಂಡಿತ್ತು. ಈಗ ಅನುಮತಿ ನೀಡಿದ ಅಧಿಕಾರಿಗಳ ವಿರುದ್ಧ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ.












Click it and Unblock the Notifications