ಶಿವಮೊಗ್ಗ : ಕೈ ತಪ್ಪಿದ ಕಾಂಗ್ರೆಸ್ ಟಿಕೆಟ್, ಕಚೇರಿಗೆ ಕಲ್ಲು!
ಶಿವಮೊಗ್ಗ, ಆಗಸ್ಟ್ 20 : ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಕಚೇರಿ ಮೇಲೆ ಹಾಡ ಹಗಲೇ ಕಲ್ಲು ತೂರಾಟ ನಡೆಸಲಾಗಿದೆ. ಶಿವಮೊಗ್ಗ ಮಹಾನಗರ ಪಾಲಿಕೆ ಚುನಾವಣೆಯ ಟಿಕೆಟ್ ಕೈ ತಪ್ಪಿದ ಹಿನ್ನಲೆಯಲ್ಲಿ ಪ್ರಮುಖ ನಾಯಕರ ಅಭಿಮಾನಿಗಳು ಕಲ್ಲು ತೂರಾಟ ನಡೆಸಿದ್ದಾರೆ.
ಭಾನುವಾರ ಸಂಜೆ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಕಚೇರಿ ಮೇಲೆ ಕಲ್ಲು ತೂರಾಟ ನಡೆದಿದೆ. ಕಲ್ಲೂ ತೂರಾಟದಿಂದಾಗಿ ಪಕ್ಷದ ಕಚೇರಿಯ ಗಾಜುಗಳು ಪುಡಿ-ಪುಡಿಯಾಗಿವೆ. ಘಟನೆಯಲ್ಲಿ ಯಾರೂ ಗಾಯಗೊಂಡಿಲ್ಲ.
ತುಮಕೂರು, ಶಿವಮೊಗ್ಗ, ಮೈಸೂರು ಪಾಲಿಕೆ ಚುನಾವಣೆ ಘೋಷಣೆ
ಶಿವಮೊಗ್ಗ ಮಹಾನಗರ ಪಾಲಿಕೆ ಚುನಾವಣೆಗೆ ಅನೇಕರು ಟಿಕೆಟ್ ಆಕಾಂಕ್ಷಿಗಳಾಗಿದ್ದರು. ಟಿಕೆಟ್ ಸಿಗುವ ಭರವಸೆಯಿಂದಲೇ ಅನೇಕ ದಿನಗಳಿಂದ ತಮ್ಮ ವಾರ್ಡ್ ವ್ಯಾಪ್ತಿಯಲ್ಲಿ ಪ್ರಚಾರವನ್ನು ನಡೆಸಿದ್ದರು. ಆದರೆ, ಕೊನೆ ಕ್ಷಣದಲ್ಲಿ ಟಿಕೆಟ್ ಕೈ ತಪ್ಪಿತ್ತು.
ಪಾಲಿಕೆ ಚುನಾವಣೆಗೆ ಟಿಕೆಟ್ ನೀಡದ ಹಿನ್ನಲೆಯಲ್ಲಿ ಅವಕಾಶ ವಂಚಿತರ ಅಭಿಮಾನಿಗಳ ಗುಂಪು ಪಕ್ಷದ ಕಚೇರಿ ಮೇಲೆ ಕಲ್ಲು ತೂರಾಟ ನಡೆಸಿದೆ. ವಾರ್ಡ್ ನಂಬರ್ 17 ರ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಹಾಗೂ ಉತ್ತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿಶ್ವನಾಥ್ ಕಾಶಿ ಹಾಗೂ 23ನೇ ವಾರ್ಡ್ ಟಿಕೆಟ್ ಆಕಾಂಕ್ಷಿ ರಂಗನಾಥ್ ಅವರ 50 ಕ್ಕೂ ಹೆಚ್ಚು ಬೆಂಬಲಿಗರು ಕಲ್ಲು ತೂರಾಟ ನಡೆಸಿದ್ದಾರೆ.
ಶಿವಮೊಗ್ಗ ಜೆಡಿಎಸ್ಗೆ ನೂತನ ಸಾರಥಿ ನೇಮಕ
ಸಂಜೆ 4.45ರ ಸುಮಾರಿಗೆ ಕಲ್ಲು ತೂರಾಟ ನಡೆಸಿದ ಗುಂಪು, ಕಛೇರಿಗೆ ನುಗ್ಗಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ವಿಶ್ವನಾಥ್ ಕಾಶಿ ಮತ್ತು ರಂಗನಾಥ್ ಅವರಿಗೆ ಟಿಕೆಟ್ ನೀಡಬೇಕೆಂದು ಆಗ್ರಹಿಸಿದ್ದಾರೆ.
ಈ ಸಂದರ್ಭದಲ್ಲಿ ಕಛೇರಿಯ ಮುಂದೆ ಟೈರ್ ಸುಟ್ಟು ಆಕ್ರೋಶ ವ್ಯಕ್ತಪಡಿಸಲಾಗಿದೆ. ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಚಂದ್ರು ಎಂಬಾತನನ್ನ ಬಂಧಿಸಿದ್ದಾರೆ. ಉಳಿದವರಿಗಾಗಿ ಹುಡುಕಾಟ ನಡೆಯುತ್ತಿದೆ.
ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ 35 ವಾರ್ಡ್ಗಳಿವೆ. ಆಗಸ್ಟ್ 31ರಂದು ಮಹಾನಗರ ಪಾಲಿಕೆ ಚುನಾವಣೆ ನಡೆಯಲಿದ್ದು, ಸೆಪ್ಟೆಂಬರ್ 3ರಂದು ಫಲಿತಾಂಶ ಪ್ರಕಟವಾಗಲಿದೆ. ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ 2,74,218 ಮತದಾರರು ಇದ್ದಾರೆ.