Get Updates
Get notified of breaking news, exclusive insights, and must-see stories!

ಶಿವಮೊಗ್ಗದಲ್ಲಿ ಕೈಗೆಟಕುವ ದರದಲ್ಲಿ ಸಿಗಲಿದೆ ಸೈಟುಗಳು

ಶಿವಮೊಗ್ಗ, ಮಾರ್ಚ್ 10: ಶಿವಮೊಗ್ಗದಲ್ಲಿ ಆಸ್ತಿ ಖರೀದಿ ಮಾಡುವ ಚಿಂತನೆಯಲ್ಲಿರುವವರಿಗೆ ಸಿಹಿಸುದ್ದಿ. ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರ (ಸೂಡ) ಜನಸಾಮಾನ್ಯರ ಕೈಗೆಟಕುವ ದರದಲ್ಲಿ ಸೈಟುಗಳನ್ನು ಹಂಚಿಕೆ ಮಾಡಲಿದೆ.

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾಗಿ ನೇಮಕಗೊಂಡ ಹೆಚ್. ಎಸ್. ಸುಂದರೇಶ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದರು. ಬಳಿಕ ಪತ್ರಿಕಾಗೋಷ್ಠಿ ನಡೆಸಿದರು. ಸೂಡಾ ಆಯುಕ್ತ ವಿಶ್ವನಾಥ ಮುದಜ್ಜಿ, ಎಇಇ ಬಸವರಾಜಪ್ಪ ಉಪಸ್ಥಿತರಿದ್ದರು.

SUDA Site Distribution In Reasonable Price Soon

ಹೆಚ್. ಎಸ್. ಸುಂದರೇಶ್ ಮಾತನಾಡಿ, "ತಮ್ಮ ಅಧಿಕಾರಾವಧಿಯಲ್ಲಿ ಬಡ ಮತ್ತು ಮಧ್ಯಮ ವರ್ಗದವರಿಗೆ ಕೈಗೆಟಕುವ ದರದಲ್ಲಿ ಸುಮಾರು 5 ರಿಂದ 10 ಸಾವಿರ ನಿವೇಶನಗಳನ್ನು ಹಂಚುವ ಉದ್ದೇಶ ಹೊಂದಿದ್ದೇನೆ" ಎಂದು ಹೇಳಿದರು.

"ನನ್ನನ್ನು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷನನ್ನಾಗಿ ಆಯ್ಕೆ ಮಾಡಿದ ರಾಜ್ಯ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ಸೂಡಾ ವ್ಯಾಪ್ತಿಯಲ್ಲಿ ಹಲವು ವರ್ಷಗಳಿಂದ ನಿವೇಶನ ಹಂಚಿಕೆಯಾಗಿಲ್ಲ. ತಮ್ಮ ಅವಧಿಯಲ್ಲಿ ಬಡ-ಮಧ್ಯಮ ವರ್ಗದವರಿಗೆ ಅನುಕೂಲವಾಗುವಂತೆ ನಿವೇಶನ ಹಂಚಿಕೆ ಮಾಡಲು ಕ್ರಮ ವಹಿಸಲಾಗುವುದು" ಎಂದು ಭರವಸೆ ನೀಡಿದರು.

ಅರ್ಜಿ ಆಹ್ವಾನಿಸಲಾಗುತ್ತದೆ: ಹೆಚ್. ಎಸ್. ಸುಂದರೇಶ್ ಮಾತನಾಡಿ, "ಸೂಡಾ ಪರಿಷ್ಕೃತ ಮಹಾಯೋಜನೆ (ಸಿಡಿಪಿ) ಕಾರ್ಯ ಪ್ರಗತಿಯಲ್ಲಿದೆ. ಪ್ರಾಧಿಕಾರದ ವತಿಯಿಂದ ಶಿವಮೊಗ್ಗ ನಗರದ ಊರಗಡೂರು ಗ್ರಾಮದಲ್ಲಿ ವಸತಿ ಬಡಾವಣೆಯನ್ನು ನಿರ್ಮಿಸುತ್ತಿದ್ದು ಸಿವಿಲ್ ಕಾಮಗಾರಿ ಪ್ರಗತಿಯಲ್ಲಿರುತ್ತದೆ. ಕಾಮಗಾರಿಗಳು ಪೂರ್ಣಗೊಂಡ ನಂತರ ಲಭ್ಯವಾಗುವ ಒಟ್ಟು 684 ನಿವೇಶನಗಳನ್ನು ಸಾರ್ವಜನಿಕರಿಗೆ ಹಂಚಿಕೆ ಮಾಡಲು ಅರ್ಜಿ ಆಹ್ವಾನಿಸಿ ಕ್ರಮ ತೆಗೆದುಕೊಳ್ಳಲಾಗುವುದು" ಎಂದರು.

"ಸೋಮಿನಕೊಪ್ಪದ ಜೆ. ಹೆಚ್. ಪಟೇಲ್ ಬಡಾವಣೆಯಲ್ಲಿ ಲಭ್ಯವಿರುವ 1 ಎಕರೆ 9 ಗುಂಟೆ ಪ್ರದೇಶದಲ್ಲಿ ವಸತಿ ಸಮುಚ್ಚಯ (ಜಿ+3) ನಿರ್ಮಾಣ ಹಾಗೂ ಊರಗಡೂರು ವಸತಿ ಬಡಾವಣೆಯಲ್ಲಿ ಲಭ್ಯವಿರುವ 4 ಎಕರೆ ಜಾಗದಲ್ಲಿ ವಸತಿ ಸಮುಚ್ಚಯ ನಿರ್ಮಾಣ ಮಾಡಲಾಗುವುದು" ಎಂದು ಹೆಚ್. ಎಸ್. ಸುಂದರೇಶ್ ಮಾಹಿತಿ ನೀಡಿದರು.

"2023-24 ನೇ ಸಾಲಿನಲ್ಲಿ ಪ್ರಾಧಿಕಾರದ ವತಿಯಿಂದ ಪ್ರಾಧಿಕಾರದ ಬಡಾವಣೆಗಳಲ್ಲಿ ರಸ್ತೆ ಡಾಂಬರೀಕರಣ, ಒಳಚರಂಡಿ, ಉದ್ಯಾನವನ ಅಭಿವೃದ್ದಿ, ನಗರದ ಸರ್ಕಲ್ ಅಭಿವೃದ್ದಿ ಇತ್ಯಾದಿ ಕಾಮಗಾರಿಗಳನ್ನು ತೆಗೆದುಕೊಂಡಿದ್ದು, ಅಂದಾಜು ರೂ. 25 ಕೋಟಿ ವೆಚ್ಚದಲ್ಲಿ ಟೆಂಡರ್ ಕರೆದು ಕಾಮಗಾರಿಗಳನ್ನು ಅನುಷ್ಟಾನಗೊಳಿಸಲು ಕ್ರಮ ವಹಿಸಲಾಗುತ್ತಿದೆ" ಎಂದು ವಿವರಣೆ ನೀಡಿದರು.

"ಸ್ಥಳೀಯ ಪ್ರದೇಶಾಭಿವೃದ್ದಿ ವ್ಯಾಪ್ತಿಯಲ್ಲಿ ಮುಂದಿನ ದಿನಗಳಲ್ಲಿ ಕೆರೆಗಳನ್ನು ಅಂದಾಜು ರೂ. 35 ಕೋಟಿ ವೆಚ್ಚದಲ್ಲಿ ಅಭಿವೃದ್ದಿಪಡಿಸಲು ಈಗಾಗಲೇ ಟೆಂಡರ್ ಪ್ರಕ್ರಿಯೆ ಚಾಲನೆಯಲ್ಲಿದೆ. ಪ್ರಾಧಿಕಾರವು ಮುಂದಿನ ದಿನಗಳಲ್ಲಿ ಆರ್ಥಿಕ ಸದೃಢತೆ ಹೊಂದುವ ನಿಟ್ಟಿನಲ್ಲಿ ಪ್ರಾಧಿಕಾರದ ಬಡಾವಣೆಗಳಲ್ಲಿ ಲಭ್ಯವಿರುವ ವಾಣಿಜ್ಯ ನಿವೇಶನಗಳನ್ನು ಗುರುತಿಸಿ ವಾಣಿಜ್ಯ ಸಂಕೀರ್ಣ ನಿರ್ಮಾಣ ಮಾಡಲಾಗುವುದು" ಎಂದರು.

"ನಗರದ ಪ್ರಮುಖ ವೃತ್ತಗಳನ್ನು ಗುರುತಿಸಿ ಸೌಂದರ್ಯೀಕರಣ ಮತ್ತು ಅಭಿವೃದ್ದಿ ಮಾಡಲಾಗುವುದು. ಹಾಗೂ ಮುಂದಿನ ದಿನಗಳಲ್ಲಿ ಹೊಸ ಬಡಾವಣೆಗಳನ್ನು ರಚಿಸಿ ಸಾರ್ವಜನಿಕರಿಗೆ, ನಿವೇಶನ ರಹಿತರಿಗೆ/ ಬಡವರಿಗೆ ಕೈಗೆಟುಕುವ ದರದಲ್ಲಿ ನಿವೇಶನ ಹಂಚಿಕೆಗೆ ಕ್ರಮ ವಹಿಸಲಾಗುವುದು" ಎಂದು ತಿಳಿಸಿದರು.

"ಖಾಸಗಿ ಲೇಔಟ್‍ಗಳಿಗೆ ಮೂಲಸೌಕರ್ಯ ಒದಗಿಸಲು ಕ್ರಮ ವಹಿಸಲಾಗುವುದು. ಪ್ರಾಧಿಕಾರದಲ್ಲಿ ಲಭ್ಯವಿರುವ ನಾಗರೀಕ ಸೌಲಭ್ಯ ನಿವೇಶನಗಳನ್ನು ವಿವಿಧ ಸಂಘ ಸಂಸ್ಥೆಗಳಿಗೆ ಹಂಚಿಕೆ ಮಾಡಲು ಕ್ರಮ ವಹಿಸಲಾಗುವುದು ಹಾಗೂ ಪ್ರಾಧಿಕಾರದಿಂದ ಈಗಾಗಲೇ ಮೂಲೆ/ ಮಧ್ಯಂತರ ನಿವೇಶನಗಳನ್ನು ಇ-ಹರಾಜು ಮೂಲಕ ವಿಲೇವಾರಿ ಮಾಡಲು ಸಾರ್ವಜನಿಕ ಪ್ರಕಟಣೆಯನ್ನು ಹೊರಡಿಸಲಾಗಿರುತ್ತದೆ" ಎಂದು ತಿಳಿಸಿದರು.

ಎಲ್ಲಿದೆ ಭೂಮಿ ಎಂದ ಎಎಪಿ: ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಹೆಚ್. ಎಸ್. ಸುಂದರೇಶ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಆಮ್‌ ಆದ್ಮಿ ಪಕ್ಷ, 10 ಸಾವಿರ ನಿವೇಶನ ಹಂಚಲು ಭೂಮಿ ಎಲ್ಲಿದೆ? ಎಂದು ಪ್ರಶ್ನೆ ಮಾಡಿದೆ.

10 ಸಾವಿರ ನಿವೇಶನ ಹಂಚಲು 200 ಎಕರೆ ಭೂಮಿ ಬೇಕು. ಅಷ್ಟು ಜಮೀನು ಎಲ್ಲಿದೆ?. ಈಗ ಎಷ್ಟು ಎಕರೆ ಸ್ವಾಧೀನಪಡಿಸಿಕೊಳ್ಳಲಾಗಿದೆ. ಇದನ್ನು ಮೊದಲು ಬಹಿರಂಗೊಳಿಸಿ ಬಳಿಕ ಅಧ್ಯಕ್ಷರು ಆಶ್ವಾಸನೆ ನೀಡಲಿ ಎಂದು ಪಕ್ಷ ಹೇಳಿದೆ.

ಸರ್ಕಾರಿ ಜಾಗ ಒತ್ತುವರಿಯಾಗುತ್ತಿದೆ. ಸರ್ಕಾರಕ್ಕೆ ಕೋಟ್ಯಾಂತರ ರೂಪಾಯಿ ನಷ್ಟವಾಗುತ್ತಿದೆ. ಕಾನೂನು ಉಲ್ಲಂಘನೆ ಮಾಡಿ, ಹಗಲು ದರೋಡೆ ಮಾಡಲಾಗುತ್ತಿದೆ. ಇದನ್ನು ತಡೆಯಲು ಮೊದಲು ಪ್ರಾಧಿಕಾರ ಮುಂದಾಗಬೇಕು ಎಂದು ಪಕ್ಷ ಸಲಹೆ ನೀಡಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+