ಶಿವಮೊಗ್ಗದಲ್ಲಿ ಕೈಗೆಟಕುವ ದರದಲ್ಲಿ ಸಿಗಲಿದೆ ಸೈಟುಗಳು
ಶಿವಮೊಗ್ಗ, ಮಾರ್ಚ್ 10: ಶಿವಮೊಗ್ಗದಲ್ಲಿ ಆಸ್ತಿ ಖರೀದಿ ಮಾಡುವ ಚಿಂತನೆಯಲ್ಲಿರುವವರಿಗೆ ಸಿಹಿಸುದ್ದಿ. ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರ (ಸೂಡ) ಜನಸಾಮಾನ್ಯರ ಕೈಗೆಟಕುವ ದರದಲ್ಲಿ ಸೈಟುಗಳನ್ನು ಹಂಚಿಕೆ ಮಾಡಲಿದೆ.
ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾಗಿ ನೇಮಕಗೊಂಡ ಹೆಚ್. ಎಸ್. ಸುಂದರೇಶ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದರು. ಬಳಿಕ ಪತ್ರಿಕಾಗೋಷ್ಠಿ ನಡೆಸಿದರು. ಸೂಡಾ ಆಯುಕ್ತ ವಿಶ್ವನಾಥ ಮುದಜ್ಜಿ, ಎಇಇ ಬಸವರಾಜಪ್ಪ ಉಪಸ್ಥಿತರಿದ್ದರು.

ಹೆಚ್. ಎಸ್. ಸುಂದರೇಶ್ ಮಾತನಾಡಿ, "ತಮ್ಮ ಅಧಿಕಾರಾವಧಿಯಲ್ಲಿ ಬಡ ಮತ್ತು ಮಧ್ಯಮ ವರ್ಗದವರಿಗೆ ಕೈಗೆಟಕುವ ದರದಲ್ಲಿ ಸುಮಾರು 5 ರಿಂದ 10 ಸಾವಿರ ನಿವೇಶನಗಳನ್ನು ಹಂಚುವ ಉದ್ದೇಶ ಹೊಂದಿದ್ದೇನೆ" ಎಂದು ಹೇಳಿದರು.
"ನನ್ನನ್ನು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷನನ್ನಾಗಿ ಆಯ್ಕೆ ಮಾಡಿದ ರಾಜ್ಯ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ಸೂಡಾ ವ್ಯಾಪ್ತಿಯಲ್ಲಿ ಹಲವು ವರ್ಷಗಳಿಂದ ನಿವೇಶನ ಹಂಚಿಕೆಯಾಗಿಲ್ಲ. ತಮ್ಮ ಅವಧಿಯಲ್ಲಿ ಬಡ-ಮಧ್ಯಮ ವರ್ಗದವರಿಗೆ ಅನುಕೂಲವಾಗುವಂತೆ ನಿವೇಶನ ಹಂಚಿಕೆ ಮಾಡಲು ಕ್ರಮ ವಹಿಸಲಾಗುವುದು" ಎಂದು ಭರವಸೆ ನೀಡಿದರು.
ಅರ್ಜಿ ಆಹ್ವಾನಿಸಲಾಗುತ್ತದೆ: ಹೆಚ್. ಎಸ್. ಸುಂದರೇಶ್ ಮಾತನಾಡಿ, "ಸೂಡಾ ಪರಿಷ್ಕೃತ ಮಹಾಯೋಜನೆ (ಸಿಡಿಪಿ) ಕಾರ್ಯ ಪ್ರಗತಿಯಲ್ಲಿದೆ. ಪ್ರಾಧಿಕಾರದ ವತಿಯಿಂದ ಶಿವಮೊಗ್ಗ ನಗರದ ಊರಗಡೂರು ಗ್ರಾಮದಲ್ಲಿ ವಸತಿ ಬಡಾವಣೆಯನ್ನು ನಿರ್ಮಿಸುತ್ತಿದ್ದು ಸಿವಿಲ್ ಕಾಮಗಾರಿ ಪ್ರಗತಿಯಲ್ಲಿರುತ್ತದೆ. ಕಾಮಗಾರಿಗಳು ಪೂರ್ಣಗೊಂಡ ನಂತರ ಲಭ್ಯವಾಗುವ ಒಟ್ಟು 684 ನಿವೇಶನಗಳನ್ನು ಸಾರ್ವಜನಿಕರಿಗೆ ಹಂಚಿಕೆ ಮಾಡಲು ಅರ್ಜಿ ಆಹ್ವಾನಿಸಿ ಕ್ರಮ ತೆಗೆದುಕೊಳ್ಳಲಾಗುವುದು" ಎಂದರು.
"ಸೋಮಿನಕೊಪ್ಪದ ಜೆ. ಹೆಚ್. ಪಟೇಲ್ ಬಡಾವಣೆಯಲ್ಲಿ ಲಭ್ಯವಿರುವ 1 ಎಕರೆ 9 ಗುಂಟೆ ಪ್ರದೇಶದಲ್ಲಿ ವಸತಿ ಸಮುಚ್ಚಯ (ಜಿ+3) ನಿರ್ಮಾಣ ಹಾಗೂ ಊರಗಡೂರು ವಸತಿ ಬಡಾವಣೆಯಲ್ಲಿ ಲಭ್ಯವಿರುವ 4 ಎಕರೆ ಜಾಗದಲ್ಲಿ ವಸತಿ ಸಮುಚ್ಚಯ ನಿರ್ಮಾಣ ಮಾಡಲಾಗುವುದು" ಎಂದು ಹೆಚ್. ಎಸ್. ಸುಂದರೇಶ್ ಮಾಹಿತಿ ನೀಡಿದರು.
"2023-24 ನೇ ಸಾಲಿನಲ್ಲಿ ಪ್ರಾಧಿಕಾರದ ವತಿಯಿಂದ ಪ್ರಾಧಿಕಾರದ ಬಡಾವಣೆಗಳಲ್ಲಿ ರಸ್ತೆ ಡಾಂಬರೀಕರಣ, ಒಳಚರಂಡಿ, ಉದ್ಯಾನವನ ಅಭಿವೃದ್ದಿ, ನಗರದ ಸರ್ಕಲ್ ಅಭಿವೃದ್ದಿ ಇತ್ಯಾದಿ ಕಾಮಗಾರಿಗಳನ್ನು ತೆಗೆದುಕೊಂಡಿದ್ದು, ಅಂದಾಜು ರೂ. 25 ಕೋಟಿ ವೆಚ್ಚದಲ್ಲಿ ಟೆಂಡರ್ ಕರೆದು ಕಾಮಗಾರಿಗಳನ್ನು ಅನುಷ್ಟಾನಗೊಳಿಸಲು ಕ್ರಮ ವಹಿಸಲಾಗುತ್ತಿದೆ" ಎಂದು ವಿವರಣೆ ನೀಡಿದರು.
"ಸ್ಥಳೀಯ ಪ್ರದೇಶಾಭಿವೃದ್ದಿ ವ್ಯಾಪ್ತಿಯಲ್ಲಿ ಮುಂದಿನ ದಿನಗಳಲ್ಲಿ ಕೆರೆಗಳನ್ನು ಅಂದಾಜು ರೂ. 35 ಕೋಟಿ ವೆಚ್ಚದಲ್ಲಿ ಅಭಿವೃದ್ದಿಪಡಿಸಲು ಈಗಾಗಲೇ ಟೆಂಡರ್ ಪ್ರಕ್ರಿಯೆ ಚಾಲನೆಯಲ್ಲಿದೆ. ಪ್ರಾಧಿಕಾರವು ಮುಂದಿನ ದಿನಗಳಲ್ಲಿ ಆರ್ಥಿಕ ಸದೃಢತೆ ಹೊಂದುವ ನಿಟ್ಟಿನಲ್ಲಿ ಪ್ರಾಧಿಕಾರದ ಬಡಾವಣೆಗಳಲ್ಲಿ ಲಭ್ಯವಿರುವ ವಾಣಿಜ್ಯ ನಿವೇಶನಗಳನ್ನು ಗುರುತಿಸಿ ವಾಣಿಜ್ಯ ಸಂಕೀರ್ಣ ನಿರ್ಮಾಣ ಮಾಡಲಾಗುವುದು" ಎಂದರು.
"ನಗರದ ಪ್ರಮುಖ ವೃತ್ತಗಳನ್ನು ಗುರುತಿಸಿ ಸೌಂದರ್ಯೀಕರಣ ಮತ್ತು ಅಭಿವೃದ್ದಿ ಮಾಡಲಾಗುವುದು. ಹಾಗೂ ಮುಂದಿನ ದಿನಗಳಲ್ಲಿ ಹೊಸ ಬಡಾವಣೆಗಳನ್ನು ರಚಿಸಿ ಸಾರ್ವಜನಿಕರಿಗೆ, ನಿವೇಶನ ರಹಿತರಿಗೆ/ ಬಡವರಿಗೆ ಕೈಗೆಟುಕುವ ದರದಲ್ಲಿ ನಿವೇಶನ ಹಂಚಿಕೆಗೆ ಕ್ರಮ ವಹಿಸಲಾಗುವುದು" ಎಂದು ತಿಳಿಸಿದರು.
"ಖಾಸಗಿ ಲೇಔಟ್ಗಳಿಗೆ ಮೂಲಸೌಕರ್ಯ ಒದಗಿಸಲು ಕ್ರಮ ವಹಿಸಲಾಗುವುದು. ಪ್ರಾಧಿಕಾರದಲ್ಲಿ ಲಭ್ಯವಿರುವ ನಾಗರೀಕ ಸೌಲಭ್ಯ ನಿವೇಶನಗಳನ್ನು ವಿವಿಧ ಸಂಘ ಸಂಸ್ಥೆಗಳಿಗೆ ಹಂಚಿಕೆ ಮಾಡಲು ಕ್ರಮ ವಹಿಸಲಾಗುವುದು ಹಾಗೂ ಪ್ರಾಧಿಕಾರದಿಂದ ಈಗಾಗಲೇ ಮೂಲೆ/ ಮಧ್ಯಂತರ ನಿವೇಶನಗಳನ್ನು ಇ-ಹರಾಜು ಮೂಲಕ ವಿಲೇವಾರಿ ಮಾಡಲು ಸಾರ್ವಜನಿಕ ಪ್ರಕಟಣೆಯನ್ನು ಹೊರಡಿಸಲಾಗಿರುತ್ತದೆ" ಎಂದು ತಿಳಿಸಿದರು.
ಎಲ್ಲಿದೆ ಭೂಮಿ ಎಂದ ಎಎಪಿ: ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಹೆಚ್. ಎಸ್. ಸುಂದರೇಶ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಆಮ್ ಆದ್ಮಿ ಪಕ್ಷ, 10 ಸಾವಿರ ನಿವೇಶನ ಹಂಚಲು ಭೂಮಿ ಎಲ್ಲಿದೆ? ಎಂದು ಪ್ರಶ್ನೆ ಮಾಡಿದೆ.
10 ಸಾವಿರ ನಿವೇಶನ ಹಂಚಲು 200 ಎಕರೆ ಭೂಮಿ ಬೇಕು. ಅಷ್ಟು ಜಮೀನು ಎಲ್ಲಿದೆ?. ಈಗ ಎಷ್ಟು ಎಕರೆ ಸ್ವಾಧೀನಪಡಿಸಿಕೊಳ್ಳಲಾಗಿದೆ. ಇದನ್ನು ಮೊದಲು ಬಹಿರಂಗೊಳಿಸಿ ಬಳಿಕ ಅಧ್ಯಕ್ಷರು ಆಶ್ವಾಸನೆ ನೀಡಲಿ ಎಂದು ಪಕ್ಷ ಹೇಳಿದೆ.
ಸರ್ಕಾರಿ ಜಾಗ ಒತ್ತುವರಿಯಾಗುತ್ತಿದೆ. ಸರ್ಕಾರಕ್ಕೆ ಕೋಟ್ಯಾಂತರ ರೂಪಾಯಿ ನಷ್ಟವಾಗುತ್ತಿದೆ. ಕಾನೂನು ಉಲ್ಲಂಘನೆ ಮಾಡಿ, ಹಗಲು ದರೋಡೆ ಮಾಡಲಾಗುತ್ತಿದೆ. ಇದನ್ನು ತಡೆಯಲು ಮೊದಲು ಪ್ರಾಧಿಕಾರ ಮುಂದಾಗಬೇಕು ಎಂದು ಪಕ್ಷ ಸಲಹೆ ನೀಡಿದೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications