ಮತದಾನದ ಮಮತೆಯ ಕರೆಯೋಲೆ ನೀಡಿದ ಅಧಿಕಾರಿಗಳು
ಶಿವಮೊಗ್ಗ, ಮೇ 7; ಕರ್ನಾಟಕ ವಿಧಾನಸಭೆ ಚುನಾವಣೆ 2023ರ ಮತದಾನ ಮೇ 10ರ ಬುಧವಾರ ನಡೆಯಲಿದೆ. ಮತದಾನ ಮಾಡುವಂತೆ ಜಿಲ್ಲಾ ಸ್ವೀಪ್ ಸಮಿತಿ ಅಧಿಕಾರಿಗಳು ಶಿವಮೊಗ್ಗದಲ್ಲಿ ಮತದಾನ ಆಮಂತ್ರಣ ಪತ್ರಿಕೆ ನೀಡುವ ಮೂಲಕ ಜನರಿಗೆ ಮಾಹಿತಿ ನೀಡಿದರು. ಎಲ್ಲ ಅರ್ಹ ಮತದಾರರು ತಪ್ಪದೇ ಮತದಾನ ಮಾಡಬೇಕು ಎಂದು ಜಿಲ್ಲಾಧಿಕಾರಿಗಳು ಕರೆ ನೀಡಿದ್ದಾರೆ.
ಶಿವಮೊಗ್ಗ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ನೇಹಲ್ ಸುಧಾಕರ್ ಲೋಖಂಡ ಅವರ ನಿರ್ದೇಶನದಂತೆ ಜಿಲ್ಲಾ ಸ್ವೀಪ್ ಸಮಿತಿ ಶಿವಮೊಗ್ಗ ವತಿಯಿಂದ ಶಿವಮೊಗ್ಗ ತಾಲ್ಲೂಕಿನ ಹೊಳೆಬೆನ್ನವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 80 ವರ್ಷ ಮೇಲ್ಪಟ್ಟ ಮತದಾರರಿಗೆ ಮೇ 10ರಂದು ಮತದಾನ ಮಾಡಲು ಆಮಂತ್ರಣ ನೀಡಲಾಯಿತು.

ಜಿಲ್ಲಾ ಸ್ವೀಪ್ ನೋಡಲ್ ಅಧಿಕಾರಿ ಶ್ರೀಕಾಂತ ಕೆ. ಎಸ್. ಮತದಾನದ ಆಮಂತ್ರಣ ಪತ್ರಿಕೆ ನೀಡುವ ಮೂಲಕ ಮತದಾನದ ಬಗ್ಗೆ ಮಾಹಿತಿ ನೀಡಿದರು. ಶಿವಮೊಗ್ಗ ನಗರದ ಗಾಂಧಿ ಬಜಾರ್ನಲ್ಲಿ ವಾಣಿಜ್ಯ ಮಳಿಗೆಗಳಿಗೆ, ಬಸ್ ನಿಲ್ದಾಣದಲ್ಲಿನ ಪ್ರಯಾಣಿಕರಿಗೆ ಸಹ ಮತದಾನದ ಆಮಂತ್ರಣವನ್ನು ನೀಡಲಾಯಿತು. ತಪ್ಪದೇ ಮತದಾನ ಮಾಡಿ ಎಂದು ಮನವಿ ಮಾಡಲಾಯಿತು.
74 ಅಭ್ಯರ್ಥಿಗಳು ಕಣದಲ್ಲಿದ್ದಾರೆ; ಮೇ 10ರಂದು ನಡೆಯುವ ಚುನಾವಣೆಗೆ ನಾಮಪತ್ರಗಳನ್ನು ವಾಪಸ್ ಪಡೆಯಲು ಏಪ್ರಿಲ್ 24 ಅಂತಿಮ ದಿನವಾಗಿತ್ತು. ಶಿವಮೊಗ್ಗ ಜಿಲ್ಲೆಯಲ್ಲಿ ಶಿವಮೊಗ್ಗ ನಗರ, ಶಿವಮೊಗ್ಗ ಗ್ರಾಮಾಂತರ, ಸಾಗರ, ಶಿಕಾರಿಪುರ, ಭದ್ರಾವತಿ, ತೀರ್ಥಹಳ್ಳಿ ಮತ್ತು ಸೊರಬ ಸೇರಿ ಒಟ್ಟು 7 ವಿಧಾನಸಭಾ ಕ್ಷೇತ್ರಗಳಿವೆ.

ಈ ಬಾರಿಯ ಚುನಾವಣಾ ಕಣದಲ್ಲಿ ಜಿಲ್ಲೆಯಲ್ಲಿ ಅಂತಿಮವಾಗಿ ಚುನಾವಣೆ ಎದುರಿಸಲು 74 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ. ಬಹಿರಂಗ ಚುನಾವಣಾ ಪ್ರಚಾರ ಮೇ 8ರಂದು ಅಂತ್ಯಗೊಳ್ಳಲಿದೆ. ಮೇ 10ರ ಬುಧವಾರ ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯ ತನಕ ಮತದಾನ ಮಾಡಲು ಅವಕಾಶವಿದೆ.
ಈ ಬಾರಿ ಚುನಾವಣಾ ಆಯೋಗ 80 ವರ್ಷ ಮೇಲ್ಪಟ್ಟವರು ಹಾಗೂ ಅಂಗವಿಕಲರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ ನೀಡಿತ್ತು. ಶಿವಮೊಗ್ಗ ಜಿಲ್ಲೆಯಲ್ಲಿ ಏಪ್ರಿಲ್ 29ರಿಂದ ಮೇ 6ರ ತನಕ ಈ ಪ್ರಕ್ರಿಯೆ ನಡೆದಿದೆ. ನೋಂದಾಯಿಸಲ್ಪಟ್ಟ ಒಟ್ಟು 2374 ಮತದಾರರ ಪೈಕಿ 2237 ಜನರು ಅಂಚೆ ಮತಪತ್ರದ ಮೂಲಕ ಮತದಾನ ಮಾಡಿದ್ದಾರೆ.
ಅಧಿಕಾರಿಗಳಿಗೆ ಸೂಚನೆ; ವಿಧಾನಸಭೆ ಚುನಾವಣೆಯ ಮತದಾನ ದಿನದಂದು ಎಲ್ಲ ತಾಲ್ಲೂಕುಗಳ ಇಓ ಮತ್ತು ಪಿಡಿಓಗಳು ತಮ್ಮ ವ್ಯಾಪ್ತಿಯ ಮತಗಟ್ಟೆಗಳಲ್ಲಿ ಅತ್ಯಂತ ಕಾಳಜಿ ವಹಿಸಿ, ಮತಗಟ್ಟೆ ಅಧಿಕಾರಿಗಳು ಮತ್ತು ಮತದಾರರಿಗೆ ಅಗತ್ಯವಾದ ಮೂಲಭೂತ ಸೌಕರ್ಯಗಳ ವ್ಯವಸ್ಥೆಗಳನ್ನು ಮಾಡಬೇಕು ಎಂದು ಶಿವಮೊಗ್ಗ ಜಿಲ್ಲಾಧಿಕಾರಿ, ಜಿಲ್ಲಾ ಚುನಾವಣಾಧಿಕಾರಿ ಡಾ. ಆರ್. ಸೆಲ್ವಮಣಿ ಸೂಚನೆ ನೀಡಿದ್ದಾರೆ.
ವಿಧಾನಸಭಾ ಚುನಾವಣೆ ಮತದಾನದ ಸಿದ್ದತೆ ಕುರಿತು ಎಲ್ಲ ತಾಲ್ಲೂಕುಗಳ ಇಓ ಮತ್ತು ಪಿಡಿಓ ಜೊತೆ ಸಭೆ ನಡೆಸಿದ ಅವರು ಇಓಗಳು ಮತಗಟ್ಟೆಗಳಲ್ಲಿ ಕನಿಷ್ಟ ಸೌಲಭ್ಯಗಳಾದ ಶಾಮಿಯಾನ, ಕುಡಿಯುವ ನೀರು, ಪೋಲಿಂಗ್ ಅಧಿಕಾರಿಗಳಿಗೆ ಊಟದ ವ್ಯವಸ್ಥೆಯನ್ನು ಅತ್ಯಂತ ಕಾಳಜಿ ವಹಿಸಿ ಮಾಡಬೇಕು. ಪ್ರತಿ ಬೂತ್ಗಳಿಗೆ ಒಬ್ಬ ಸಹಾಯಕರನ್ನು ನೇಮಿಸಬೇಕು. ಕ್ಲಸ್ಟರ್ ಬೂತ್ ಮತ್ತು ರಿಮೋಟ್ ಮತಗಟ್ಟಗಳಿಗೆ ಭೇಟಿ ನೀಡಿ ಎಲ್ಲ ರೀತಿಯ ಅಗತ್ಯ ವ್ಯವಸ್ಥೆ ಮಾಡಬೇಕು ಎಂದರು.
ಪ್ರತಿ ಮತಟ್ಟೆಗೆ ಗ್ರಾಮ ಪಂಚಾಯಿತಿ ಇಂದ ಒಬ್ಬರು ಸಿಬ್ಬಂದಿಯನ್ನು ಸಹಾಯಕರಾಗಿ ನೇಮಿಸಬೇಕು. ಮತದಾರರಿಗೆ ಅನುಕೂಲವಾಗುವಂತೆ ಶಾಮಿಯಾನ, ನೀರಿನ ವ್ಯವಸ್ಥೆ, ನಿರೀಕ್ಷಣಾ ಕೊಠಡಿ, ಫ್ಯಾನ್ ಮತ್ತು ಚೇರ್ಗಳ ವ್ಯವಸ್ಥೆ ಮಾಡಬೇಕು. ಮತದಾನ ದಿನದಂದು ಮತಗಟ್ಟೆಗಳ 500 ಮೀಟರ್ ವ್ಯಾಪ್ತಿಯಲ್ಲಿ ಸ್ವಚ್ಚತೆ ಕಾಪಾಡಬೇಕು. ಪಿಡಿಓಗಳು ಹಿಂದಿನ ದಿನವೇ ಸ್ವಚ್ಚತೆಗೆ
ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ.












Click it and Unblock the Notifications