SVEEP ಕಪ್: ಕ್ರಿಕೆಟ್ ಆಡಿ ಮತದಾನದ ಸಂದೇಶ ಸಾರಿದ ಅಧಿಕಾರಿಗಳು
ಶಿವಮೊಗ್ಗ, ಏಪ್ರಿಲ್ 27: ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಮೇ 7ರ ಮಂಗಳವಾರ ಮತದಾನ ನಡೆಯಲಿದೆ. ಮತದಾನ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಹಲವಾರು ಚಟುವಟಿಕೆಗಳನ್ನು ಕೈಗೊಳ್ಳಲಾಗುತ್ತಿದೆ.
ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಶನಿವಾರ ಶಿವಮೊಗ್ಗ ನಗರದ ಎನ್ಇಎಸ್ ಮೈದಾನದಲ್ಲಿ ವಿವಿಧ ಇಲಾಖೆಗಳ ತಂಡಗಳಿಗೆ ಆಯೋಜಿಸಲಾಗಿದ್ದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ 'ಸ್ವೀಪ್ ಕಪ್' ಅನ್ನು ಜಿಲ್ಲಾ ಪಂಚಾಯತ್ ಸಿಇಓ ಸ್ನೇಹಲ್ ಸುಧಾಕರ ಲೋಖಂಡೆ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, "ಸ್ವೀಪ್ ಕಪ್ ವಿಭಿನ್ನವಾದ ಪ್ರಯತ್ನವಾಗಿದೆ. ಎಲ್ಲ ಕ್ರೀಡಾಪಟುಗಳು ಸ್ಮರ್ಧಾತ್ಮಕವಾಗಿ ಪಾಲ್ಗೊಳ್ಳುವ ಮೂಲಕ ಪಂದ್ಯಾವಳಿಯನ್ನು ಯಶಸ್ವಿಗೊಳಿಸಬೇಕೆಂದು" ಕರೆ ನೀಡಿದರು.
ಮತದಾನ ಜಾಗೃತಿ: "ಮತದಾನ ಜಾಗೃತಿಗಾಗಿ ಜಿಲ್ಲೆಯಲ್ಲಿ ವಾಕಥಾನ್, ಜಾಥಾ, ವಿವಿಧ ಸಾಂಸ್ಕೃತಿಕ ಚಟುವಟಿಕೆಗಳು ಸೇರಿದಂತೆ ಹಲವಾರು ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ಕ್ರೀಡಾ ಮನೋಭಾವದ ಮೂಲಕ ಜಾಗೃತಿ ಮೂಡಿಸುವ ಸ್ವೀಪ್ ಕಪ್ ಒಂದು ವಿಭಿನ್ನ ಚಟುವಟಿಕೆಯಾಗಿದ್ದು ಎಲ್ಲರೂ ಉತ್ಸಾಹದಿಂದ ಪಾಲ್ಗೊಂಡು ಪಂದ್ಯಾವಳಿಯನ್ನು ಯಶಸ್ವಿಗೊಳಿಸಬೇಕು. ಜಿಲ್ಲೆಯಲ್ಲಿ ಎಲ್ಲ ಮತದಾರರು ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಶೇ.100 ಮತದಾನ ಆಗಬೇಕು" ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಮಾತನಾಡಿ, "ಮತದಾನ ಜಾಗೃತಿ ಕುರಿತು ಜಿಲ್ಲೆಯಲ್ಲಿ ಅತ್ಯಂತ ಕ್ರಿಯಾಶೀಲವಾಗಿ ಚಟುವಟಿಕೆಗಳನ್ನು ಕೈಗೊಳ್ಳುತ್ತಿದ್ದು ಅದರಲ್ಲಿ ಸ್ವೀಪ್ ಕಪ್ ಕೂಡ ಒಂದಾಗಿದೆ. ಸ್ಪರ್ಧಾಳುಗಳೆಲ್ಲ ಸ್ಪರ್ಧಾ ಮನೋಭಾವದಿಂದ ಪಂದ್ಯಾವಳಿಯಲ್ಲಿ ಪಾಲ್ಗೊಂಡು ಮತದಾನ ಕುರಿತು ಜಾಗೃತಿ ಮೂಡಿಸಬೇಕು. ಎಲ್ಲ ಮತದಾರರು ಮತದಾನ ಮಾಡುವ ಮೂಲಕ ಜಿಲ್ಲೆಯು ಮಾದರಿಯಾಗಬೇಕೆಂದು" ಆಶಿಸಿದರು.
ಶಿವಮೊಗ್ಗ ಮಹಾನಗರಪಾಲಿಕೆ ಆಯುಕ್ತ ಮಾಯಣ್ಣಗೌಡ ಮಾತನಾಡಿ, "ಮತದಾನ ಜಾಗೃತಿ ಕುರಿತು ಸ್ವೀಪ್ ವತಿಯಿಂದ ವಿಶಿಷ್ಟ, ವಿಭಿನ್ನ ರೀತಿಯ ಚಟುವಟಿಕೆಗಳನ್ನು ಕೈಗೊಳ್ಳಲಾಗುತ್ತಿದ್ದು, ಮೇ 7 ರಂದು ಎಲ್ಲ ಮತದಾರರು ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ತಮ್ಮ ಹಕ್ಕನ್ನು ಚಲಾಯಿಸಬೇಕು. ಸದೃಢ ಪ್ರಜಾಪ್ರಭುತ್ವಕ್ಕಾಗಿ ನಾವೆಲ್ಲರೂ ಮತದಾನ ಮಾಡಬೇಕು" ಎಂದು ಹೇಳಿದರು.
ಈ ಪಂದ್ಯಾವಳಿಯಲ್ಲಿ 'ಎ' ವಿಭಾಗದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಇಲಾಖೆ ನಡುವೆ, ಆರೋಗ್ಯ ಇಲಾಖೆ ಮತ್ತು ಶಿಕ್ಷಣ ಇಲಾಖೆ ಹಾಗೂ ಕಂದಾಯ ಇಲಾಖೆ ಮತ್ತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಡುವೆ ಪಂದ್ಯಾವಳಿ ನಡೆಯಲಿದೆ.
'ಬಿ' ವಿಭಾಗದಲ್ಲಿ ಮಹಾನಗರಪಾಲಿಕೆ ಮತ್ತು ಅರಣ್ಯ ಇಲಾಖೆ, ಮಂಗಳೂರು ವಿದ್ಯುಚ್ಚಕ್ತಿ ನಿಗಮ ಮತ್ತು ಪೊಲೀಸ್ ಇಲಾಖೆ ಹಾಗೂ ರಾಜ್ಯ ಲೆಕ್ಕಪತ್ರ ಇಲಾಖೆ ಹಾಗೂ ಕೆಎಸ್ಆರ್ಟಿಸಿ ನಡುವೆ ಪಂದ್ಯಾವಳಿ ನಡೆಯಲಿದೆ.
ಮತದಾನಕ್ಕೆ ಸಿದ್ಧತೆ: ಲೋಕಸಭಾ ಚುನಾವಣೆಗೆ ಶಿವಮೊಗ್ಗ ಜಿಲ್ಲಾಡಳಿತ ಸಿದ್ಧತೆ ಪೂರ್ಣಗೊಳಿಸಿದೆ. ಚುನಾವಣಾ ಆಯೋಗ ಮನೆಯಿಂದಲೇ ಮತದಾನ ಮಾಡಲು ಅವಕಾಶ ಕಲ್ಪಿಸಿದ್ದು ಇದರ ಅಂಗವಾಗಿ ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿನ ಹಿರಿಯ ನಾಗರಿಕರು ಮತದಾನ ಮಾಡಿದರು.
ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ 8,62,789 ಪುರುಷ, 8,90,061 ಮಹಿಳೆ, 3 ತೃತೀಯಲಿಂಗಿಗಳು ಸೇರಿದಂತೆ 17,52,885 ಮತದಾರರಿದ್ದಾರೆ. 18 ರಿಂದ 19 ವರ್ಷದೊಳಗಿನ 2,2067 ಯುವಕ, 19,861 ಯುವತಿ, 3 ತೃತೀಯ ಲಿಂಗಿ ಸೇರಿದಂತೆ ಒಟ್ಟು 41,931 ಯುವ ಮತದಾರರು ಇದ್ದಾರೆ.
ಶಿವಮೊಗ್ಗ ಕ್ಷೇತ್ರದಲ್ಲಿ ಬಿಜೆಪಿಯಿಂದ ಬಿ. ವೈ. ರಾಘವೇಂದ್ರ. ಕಾಂಗ್ರೆಸ್ನಿಂದ ಗೀತಾ ಶಿವರಾಜ್ ಕುಮಾರ್ ಅಭ್ಯರ್ಥಿಗಳು. ಪಕ್ಷೇತರ ಅಭ್ಯರ್ಥಿಯಾಗಿ ಕೆ. ಎಸ್. ಈಶ್ವರಪ್ಪ ಕಣಕ್ಕಿಳಿದಿದ್ದಾರೆ. ಕ್ಷೇತ್ರದಲ್ಲಿ ಒಟ್ಟು 23 ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಮೇ 7ರ ಮಂಗಳವಾರ ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯ ತನಕ ಮತದಾನ ಮಾಡಲು ಅವಕಾಶವಿದೆ. ಜೂನ್ 4ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.











Click it and Unblock the Notifications