Get Updates
Get notified of breaking news, exclusive insights, and must-see stories!

ಶಿವಮೊಗ್ಗದಲ್ಲಿ 3 ದಿನದ ಹಣ್ಣು ಮತ್ತು ಆಹಾರ ಮೇಳ, ವಿವರಗಳು

ಶಿವಮೊಗ್ಗ, ಏಪ್ರಿಲ್ 24: ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವದ ಅಂಗವಾಗಿ ಶಿವಮೊಗ್ಗದಲ್ಲಿ ಮೂರು ದಿನಗಳ ಹಣ್ಣು ಮತ್ತು ಆಹಾರ ಮೇಳ ನಡೆಯಲಿದೆ. ಹಣ್ಣುಗಳ ಪ್ರದರ್ಶನ, ಮಾರಾಟಕ್ಕಾಗಿಯೇ 150 ಮಳಿಗೆ ಸ್ಥಾಪನೆ ಮಾಡಲಾಗುತ್ತದೆ. ವಿಶಿಷ್ಟ ಬಗೆಯ ಹಣ್ಣು ಮತ್ತು ವಿವಿಧ ಆಹಾರ ಉತ್ಪನ್ನಗಳನ್ನು ಮೇಳದಲ್ಲಿ ವೀಕ್ಷಿಸಬಹುದು. ತಾಂತ್ರಿಕ ಸಮಾವೇಶ, ವಿದ್ಯಾರ್ಥಿಗಳಿಗೆ ವಿವಿಧ ಸ್ಪಧೆಗಳನ್ನು ಸಹ ಆಯೋಜನೆ ಮಾಡಲಾಗಿದೆ.

ಈ ಕುರಿತು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ. ಆರ್. ಸಿ. ಜಗದೀಶ್ ಮಾಹಿತಿ ನೀಡಿದ್ದಾರೆ. ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವದ ಅಂಗವಾಗಿ ನವಿಲೆ ಕೃಷಿ ವಿಜ್ಞಾನ ಕೇಂದ್ರದ ಆವರಣದಲ್ಲಿ ಏಪ್ರಿಲ್ 26 ರಿಂದ 28ರ ತನಕ ವೈವಿಧ್ಯಮಯ ಹಣ್ಣುಗಳು ಮತ್ತು ಆಹಾರ ಮೇಳವನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

Three Day Fruit And Food Mela In Navule From April 26

ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಶಿವಮೊಗ್ಗದ ಕೃಷಿ ವಿಜ್ಞಾನ ಕೇಂದ್ರವು 2025ಕ್ಕೆ ತನ್ನ 25 ವರ್ಷಗಳ ನಿರಂತರ ರೈತಪರ ಸೇವಾ ಕೊಡುಗೆಯನ್ನು ಪೂರೈಸಿ ರಜತ ಮಹೋತ್ಸವವನ್ನು ಆಚರಿಸಿಕೊಳ್ಳುವ ಪ್ರಯುಕ್ತ ಹಣ್ಣು ಮತ್ತು ಆಹಾರ ಮೇಳವನ್ನು ಆಯೋಜಿಸಲಾಗಿದೆ. ಬೆಳಗ್ಗೆ 9 ರಿಂದ ರಾತ್ರಿ 9 ರ ತನಕ ಈ ಮೇಳ ನಡೆಯಲಿದೆ. ಮೇಳದಲ್ಲಿ ವೈವಿಧ್ಯಮಯ ಮಾವಿನ ಹಣ್ಣು, ಹಲಸು, ಬಾಳೆ ಹಾಗೂ ವಿವಿಧ ಜಾತಿಯ ಹಣ್ಣುಗಳ ಪ್ರದರ್ಶನ ಮತ್ತು ಮಾರಾಟ ಇರಲಿದೆ.

30 ತಳಿಯ ಮಾವಿನ ಹಣ್ಣುಗಳು ಲಭ್ಯ: ಮಾವು ಹಣ್ಣುಗಳ ರಾಜ ಎಂದೇ ಕರೆಯಲ್ಪಡುತ್ತದೆ. ಮಾವಿನ ಹಣ್ಣಿನ 30 ವಿಶಿಷ್ಟ ತಳಿಗಳಾದ ಆಲ್ಫಾನ್ಸೋ, ಬಾದಾಮಿ, ಕೇಸರ್, ಮಲಗೋವಾ, ಮಲ್ಲಿಕಾ, ನೀಲಂ, ರಸಪುರಿ, ಸಿಂಧೂರ, ತೋತಾಪುರಿ, ಅಪ್ಪೆ ಮಿಡಿ ತಳಿಗಳ ಪ್ರದರ್ಶನ ಮತ್ತು ಮಾರಾಟವಿರುತ್ತದೆ. ಅಲ್ಲದೆ, 20 ವಿವಿಧ ಹಲಸಿನ ತಳಿಗಳಾದ ಸಿದ್ದು ಹಲಸು, ಶಂಕರ, ಸರ್ವಋತು, ರುದ್ರಾಕ್ಷಿ. ಕೆಂಪು, ಚಂದ್ರ ಹಲಸು, ಹೆಬ್ಬಾಳ ಸೇರಿದಂತೆ ಸಖರಾಯಪಟ್ಟಣದ ಸ್ಥಳೀಯ ವಿಶೇಷ ತಳಿಗಳ ಪ್ರದರ್ಶನ ಹಾಗೂ ಮಾರಾಟ ಇರಲಿದೆ.

ಬಿಜಾಪುರ, ಬಾಗಲಕೋಟೆ ಮತ್ತಿತರ ಭಾಗಗಳಿಂದ ಥಾಮ್ಸನ್ ಸೀಡ್‌ಲೆಸ್, ಶರದ್, ಕೃಷ್ಣ ಶರದ್ ಇತ್ಯಾದಿ ತಳಿಯ ರುಚಿಕರ ದ್ರಾಕ್ಷಿ ಹಣ್ಣುಗಳು ಆಗಮಿಸುತ್ತಿವೆ. ಬೆಂಗಳೂರು ಗ್ರಾಮಾಂತರ ಭಾಗದಿಂದ ಬೆಂಗಳೂರು ಬ್ಲೂ ದ್ರಾಕ್ಷಿ ಬರಲಿದೆ. ದ್ರಾಕ್ಷಿ ಪ್ರಿಯರಿಗೆ ಬಗೆ ಬಗೆಯ ಹಣ್ಣುಗಳು ಲಭಿಸಲಿವೆ.

ಅಲ್ಲದೆ, ಗೆಡ್ಡೆ-ಗೆಣಸು ತಳಿಗಳ ಪ್ರದರ್ಶನ ಹಾಗೂ ಬೇಲದ ಹಣ್ಣು, ಅಂಜೂರ ಹಣ್ಣು, ಬಿಜಾಪುರದ ನಿಂಬೆ ಹಣ್ಣು, ಮತ್ತು ಇವುಗಳ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟ ಏರ್ಪಡಿಸಲಾಗಿದೆ ಮತ್ತು ರೈತರು ತಾವೇ ನೈಸರ್ಗಿಕವಾಗಿ ಮಾಗಿಸಿದ ಹಣ್ಣುಗಳನ್ನು ಗ್ರಾಹಕರಿಗೆ ಮಾರಾಟ ಮಾಡುವ ವ್ಯವಸ್ಥೆ ಮಾಡಲಾಗಿದೆ.

ಆಹಾರ ಮೇಳದಲ್ಲಿ ಮಲೆನಾಡಿನ ವಿಶಿಷ್ಟ ಸಿಹಿ ಖಾದ್ಯಗಳಾದ ತೊಡೆದೇವು, ಅಪ್ಪೆಮಿಡಿ, ಹಲಸು, ಬಾಳೆ, ಅನಾನಸ್, ಅಂಜೂರ, ಗೇರು, ಮುರುಗಲು, ಪುನರ್ಪುಳಿ ಇತ್ಯಾದಿಗಳ ಮೌಲ್ಯವರ್ಧಿತ ಉತ್ಪನ್ನಗಳೊಂದಿಗೆ ಸಿರಿಧಾನ್ಯಗಳ ಉತ್ಪನ್ನಗಳು ಮತ್ತು ಸ್ಥಳೀಯ ವಿಶಿಷ್ಟ ಖಾದ್ಯಗಳು, ಜೇನುತುಪ್ಪದ ಮೌಲ್ಯವರ್ಧಿತ ಉತ್ಪನ್ನಗಳು ಮತ್ತು ಈ ಮೇಳದ ಅಂಗವಾಗಿ ಬೇಸಿಗೆಯ ಸವಿರುಚಿಗಳಾದ ದಾವಣಗೆರೆ ಬೆಣ್ಣೆದೋಸೆ, ಹುಬ್ಬಳ್ಳಿ ಮಿರ್ಚಿ ಮಂಡಕ್ಕಿ, ಆಲೂ ಟ್ವಿಸ್ಟರ್ ಇತ್ಯಾದಿ ಖಾದ್ಯಗಳು ಲಭ್ಯವಿದೆ.

ರೈತರಿಗೆ ಸಹಾಯಕವಾಗುವಂತೆ ಕರಿಮೆಣಸು, ಕೋಕಂ, ಏಲಕ್ಕಿ, ದಾಲ್ಚಿನಿ, ಬಿದಿರು, ಕಾಫಿ, ಪುನರ್ಪುಳಿ, ಗೋಡಂಬಿ ಸೇರಿದಂತೆ ವಿವಿಧ ತಳಿಯ 8 ಲಕ್ಷ ಸಸಿಗಳು ರಿಯಾಯ್ತಿ ದರದಲ್ಲಿ ಮಾರಾಟಕ್ಕೆ ಲಭ್ಯವಿದೆ. ಹಣ್ಣುಗಳ ಉತ್ಪನ್ನಗಳಾದ ಜ್ಯೂಸ್, ಜ್ಯಾಮ್, ಜೇನು, ಇತರೆ ಉತ್ಪನ್ನಗಳು, ಸಿರಿಧಾನ್ಯದ ತೊಡೆದೇವು ಈ ರೀತಿಯ ಖಾದ್ಯಗಳು ಲಭ್ಯವಿರುತ್ತವೆ.

ಈ ಮೇಳದಲ್ಲಿ ಹಣ್ಣಿನ ಸಸಿಗಳ ನರ್ಸರಿ, ಅಲಂಕಾರಿಕ ಗಿಡಗಳು, ತರಕಾರಿ ಮತ್ತು ಹೂವಿನ ಬೀಜಗಳು, ತಾರಸಿ/ ಕೈತೋಟದ ಪರಿಕರಗಳ ಮಾರಾಟ ಮಳಿಗೆಗಳು, ಅಲಂಕಾರಿಕ ಮೀನುಗಳು, ಬಾಳೆಯ ನಾರು, ಬಿದರಿನ ನಾರು ಮತ್ತು ಮಣ್ಣಿನಿಂದ ತಯಾರಿಸಿದ ಹಲವು ಸ್ವಸಹಾಯ ಸಂಘಗಳ ಕರಕುಶಲ ವಸ್ತು ಪ್ರದರ್ಶನ ಮತ್ತು ಮಾರಾಟವಿರುತ್ತದೆ.

ಜನರಿಗೆ ರಿಯಾಯಿತಿ ದರದಲ್ಲಿ ಉತ್ತಮ ಗುಣಮಟ್ಟದ, ರುಚಿಕರ ಹಣ್ಣು ಹಾಗೂ ರೈತರಿಗೆ, ಸ್ವಸಹಾಯ ಗುಂಪುಗಳಿಗೆ, ಉದ್ದಿಮೆದಾರರಿಗೆ ಉತ್ತಮ ಮಾರುಕಟ್ಟೆ ಕಲ್ಪಿಸುವುದು ಈ ಮೇಳದ ಉದ್ದೇಶವಾಗಿದೆ. ಮುಖ್ಯವಾಗಿ ಈ ಮೇಳವು ರೈತರು, ವ್ಯಾಪಾರಿಗಳು, ರಫ್ತುದಾರರು, ಸರ್ಕಾರಿ ಅಧಿಕಾರಿಗಳು ಮತ್ತು ಇನ್ನಿತರ ಸಂಸ್ಥೆಗಳ ಮುಖ್ಯಸ್ಥರನ್ನು ಭೇಟಿ ಆಗಲು, ಸಂಪರ್ಕ ಹೊಂದಲು ಒಳ್ಳೆಯ ವೇದಿಕೆ ಆಗಲಿದೆ.

ಏಪ್ರಿಲ್ 26ರಂದು ವೈಜ್ಞಾನಿಕ ಜೇನು ಸಾಕಾಣಿಕೆ ಮತ್ತು ಜೇನಿನ ಮೌಲ್ಯವರ್ಧನೆ, ಜೇನು ವಿಷ ಬಳಕೆ, ನಸುರು ಜೇನು ಸಾಕಾಣಿಕೆ ಕುರಿತು ಕೃಷಿ ಮತ್ತು ತೋಟಗಾರಿಕಾ ಬೆಳೆಗಳಿಗೆ ರಫ್ತು ಅವಕಾಶಗಳು, ಸಂಸ್ಕರಣೆ ಮತ್ತು ಮೌಲ್ಯವರ್ಧನೆ ಕುರಿತು ಗೋಷ್ಠಿಗಳನ್ನು ಆಯೋಜಿಸಲಾಗಿದೆ.

ಏಪ್ರಿಲ್ 27ರಂದು ತಾರಸಿ ತೋಟ ಮತ್ತು ತ್ಯಾಜ್ಯ ವಸ್ತು ನಿರ್ವಹಣೆ, ಬೋನ್ಸಾಯ್ ಕೃಷಿ ವೈಶಿಷ್ಟ್ಯಗಳು, ರೈತ ಉತ್ಪಾದಕ ಸಂಘಗಳ ಒಕ್ಕೂಟ, ರೈತ ಉತ್ಪಾದಕ ಸಂಘಗಳ ರಚನೆ ಮತ್ತು ಭವಿಷ್ಯದ ನಿರೀಕ್ಷೆಗಳು ಹಾಗೂ ಏಪ್ರಿಲ್ 28ರಂದು ಗೋಡಂಬಿ ಬೆಳೆಯ ಉತ್ಪಾದನೆ ಮತ್ತು ಸಂಸ್ಕರಣೆ, ಕೋಕೊ ಬೆಳೆಯ ಉತ್ಪಾದನೆ, ಸಂಸ್ಕರಣೆ ಮತ್ತು ಮೌಲ್ಯವರ್ಧನೆ ಕುರಿತು ತಾಂತ್ರಿಕ ಸಮಾವೇಶ ಆಯೋಜಿಸಲಾಗಿದೆ.

ಮೇಳದ ಅಂಗವಾಗಿ ವಿದ್ಯಾರ್ಥಿಗಳಿಗೆ ಸ್ಪಧೆಗಳನ್ನು ಏರ್ಪಡಿಸಲಾಗಿದೆ. 6 ರಿಂದ 10 ವರ್ಷದ ವಿದ್ಯಾರ್ಥಿಗಳಿಗೆ ಪ್ರಕೃತಿ ಕುರಿತು, 11 ರಿಂದ 13 ವರ್ಷದವರಿಗೆ ಜಾಗತಿಕ ತಾಪಮಾನ, 14 ರಿಂದ 16 ವರ್ಷದವರಿಗೆ ಉತ್ತಮ ಆರೋಗ್ಯಕ್ಕಾಗಿ ಹಣ್ಣು ಮತ್ತು ತರಕಾರಿಗಳ ಪ್ರಾಮುಖ್ಯತೆ ಕುರಿತಾದ ಚಿತ್ರ ಬಿಡಿಸುವ ಸ್ಪರ್ಧೆಗಳನ್ನು ಏರ್ಪಡಿಸಲಾಗಿದ್ದು ಚಿತ್ರ ಬಿಡಿಸುವ ಪೇಪರ್ ಇತರೆ ಸಾಮಗ್ರಿಗಳನ್ನು ಸ್ಪರ್ಧಿಗಳು ತರಬೇಕು.

ಹಣ್ಣಿನ ಖಾದ್ಯಗಳ ಕುರಿತು ಸ್ಪರ್ಧೆ ನಡೆಯಲಿದ್ದು ಏಪ್ರಿಲ್ 26 ರಂದು ನವಿಲೆ ಕೃಷಿ ಕಾಲೇಜಿನ ನಾರ್ಮನ್ ಬೋರ್ಲಾಂಗ್ ಬಿಲ್ಡಿಂಗ್ ಹಿಂಭಾಗದಲ್ಲಿ ಬೆಳಗ್ಗೆ 11 ರಿಂದ ನಡೆಯಲಿದ್ದು ಸ್ಪರ್ಧಾಳುಗಳು ಮನೆಯಲ್ಲಿಯೇ ಖಾದ್ಯಗಳನ್ನು ತಯಾರಿಸಿ ತಂದು ಪ್ರದರ್ಶಿಸಬೇಕಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+