ಯಡಿಯೂರಪ್ಪ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಯಾರು?
ಶಿವಮೊಗ್ಗ, ಫೆ.6 : ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಶಿವಮೊಗ್ಗ ಕ್ಷೇತ್ರದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತೇನೆ ಎಂದು ಹೇಳಿರುವುದು ಕಾಂಗ್ರೆಸ್ ಪಾಲಿಗೆ ಬಿಸಿತುಪ್ಪವಾಗಿ ಪರಿಣಮಿಸಿದೆ. ಯಡಿಯೂರಪ್ಪ ಅವರಿಗೆ ಪ್ರತಿಸ್ಪರ್ಧೆ ನೀಡಬಲ್ಲ ಅಭ್ಯರ್ಥಿಗಾಗಿ ಕಾಂಗ್ರೆಸ್ ಹುಡುಕಾಟ ಆರಂಭಿಸಿದೆ.
ಶಿವಮೊಗ್ಗದಿಂದ ನಾನು, ನನ್ನ ಪುತ್ರ ಸ್ಪರ್ಧಿಸುವುದಿಲ್ಲ ಎಂದು ಬಿ.ಎಸ್.ಯಡಿಯೂರಪ್ಪ ಹೇಳಿಕೆ ನೀಡಿದ್ದರಿಂದ ಜಿಲ್ಲಾ ಕಾಂಗ್ರೆಸ್ ತಕ್ಕಮಟ್ಟಿಗೆ ಸಂತಸಪಟ್ಟಿತ್ತು. ಕ್ಷೇತ್ರವನ್ನು ಕೈವಶ ಮಾಡಿಕೊಳ್ಳಬಹುದು ಎಂಬ ಲೆಕ್ಕಾಚಾರ ಆರಂಭಿಸಿತ್ತು. ಸದ್ಯ ಯಡಿಯೂರಪ್ಪ ತಮ್ಮ ನಿರ್ಧಾರ ಬದಲಿಸಿರುವುದು ಕಾಂಗ್ರೆಸ್ ಪಕ್ಷವನ್ನು ಚಿಂತೆಗೆದೂಡಿದೆ. [ಶಿವಮೊಗ್ಗದಿಂದ ನಾನೇ ಅಭ್ಯರ್ಥಿ : ಬಿಎಸ್ವೈ]

ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಪಟ್ಟಿಯಲ್ಲಿ ಕುಮಾರ್ ಬಂಗಾರಪ್ಪ, ಮಂಜುನಾಥ್ ಭಂಡಾರಿ, ಮಾಜಿ ಶಾಸಕ ಚಂದ್ರಶೇಖರಪ್ಪ ಪುತ್ರ ಸೇರಿದಂತೆ ಹಲವರಿದ್ದಾರೆ. ಯಡಿಯೂರಪ್ಪ ಸ್ಪರ್ಧಿಸುತ್ತೇನೆ ಎಂದು ಹೇಳಿದ ಬಳಿಕ ಪ್ರಾಥಮಿಕ ಮತ್ತು ಪ್ರೌಡ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್, ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರ ಹೆಸರುಗಳು ಕೇಳಿಬರುತ್ತಿವೆ.
ಆದರೆ, ವಯಸ್ಸಿನ ಕಾರಣ ನೀಡಿರುವ ಕಾಗೋಡು ತಿಮ್ಮಪ್ಪ ಲೋಕಸಭೆಗೆ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದ್ದಾರೆ. ತೀರ್ಥಹಳ್ಳಿ ಕ್ಷೇತ್ರದ ಶಾಸಕ ಮತ್ತು ಸಚಿವ ಕಿಮ್ಮನೆ ರತ್ನಾಕರ್ ದೆಹಲಿ ರಾಜಕೀಯ ಬೇಡ ಎಂಬ ತೀರ್ಮಾನಕ್ಕೆ ಬಂದಿದ್ದಾರೆ. ಆದ್ದರಿಂದ ಯಡಿಯೂರಪ್ಪ ಅವರಿಗೆ ಪ್ರಬಲ ಪೈಪೋಟಿ ನೀಡುವ ಅಭ್ಯರ್ಥಿ ಯಾರು ಎಂಬುದು ಕಾಂಗ್ರೆಸ್ ಪಾಲಿಗೆ ತಲೆನೋವಾಗಿದೆ.
ಕಳೆದು ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಎಸ್.ಬಂಗಾರಪ್ಪ ಯಡಿಯೂರಪ್ಪ ಪುತ್ರ ಬಿ.ವೈ.ರಾಘವೇಂದ್ರ ಅವರು ಎದುರು ಸೋಲು ಅನುಭವಿಸಿದ್ದರು. ಆದ್ದರಿಂದ ಕಾಂಗ್ರೆಸ್ ಸೇಡು ತೀರಿಸಿಕೊಳ್ಳಲು ಈ ಬಾರಿ ಕ್ಷೇತ್ರದಲ್ಲಿ ಜಯಗಳಿಸುವ ಲೆಕ್ಕಾಚಾರ ಆರಂಭಿಸಿತ್ತು. ಆದರೆ, ಅಭ್ಯರ್ಥಿಗಳ ಕೊರತೆ ಪಕ್ಷವನ್ನು ಕಾಡುತ್ತಿದೆ.
ಜೆಡಿಎಸ್ ಪಕ್ಷದಿಂದ ಕ್ಷೇತ್ರದಲ್ಲಿ ಈ ಬಾರಿ ಎಸ್.ಬಂಗಾರಪ್ಪ ಕುಟುಂಬದವರಿಗೆ ಟಿಕೆಟ್ ಖಾತ್ರಿಯಾಗಿದೆ. ಬಂಗಾರಪ್ಪ ಪತ್ನಿ ಅಥವ ಪುತ್ರಿ ಕಣಕ್ಕಿಳಿಯಬಹುದು ಎಂಬ ಮಾತುಗಳು ಹಬ್ಬಿವೆ. ಆದ್ದರಿಂದ ಕುಮಾರ್ ಬಂಗಾರಪ್ಪ ಅವರಿಗೆ ಟಿಕೆಟ್ ನೀಡಿದರೆ, ನಷ್ಟವಾಗಬಹುದು ಎಂಬ ಲೆಕ್ಕಾಚಾರ ಜಿಲ್ಲಾ ಕಾಂಗ್ರೆಸ್ ಘಟಕದ್ದು.
ಈ ಬಾರಿಯ ಚುನಾವಣೆಯಲ್ಲಿ ಯಡಿಯೂರಪ್ಪ, ಬಂಗಾರಪ್ಪ ಕುಟುಂಬದ ನಡುವಿನ ಸ್ಪರ್ಧೆ ಎಂದೇ ಬಿಂಬಿಸಲಾಗುತ್ತಿದೆ. ಆದ್ದರಿಂದ ಇಬ್ಬರು ಅಭ್ಯರ್ಥಿಗಳಿಗೆ ಪೈಪೋಟಿ ನೀಡುವಂತಹ ಹುರಿಯಾಳುವನ್ನು ಕಾಂಗ್ರೆಸ್ ಕಣಕ್ಕೆ ಇಳಿಸಬೇಕು. ಅದಕ್ಕಾಗಿ ಕಾಂಗ್ರೆಸ್ ಹುಡುಕಾಟ ಮುಂದುವರೆಸಿದೆ.












Click it and Unblock the Notifications